ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸಲು ಹಾಗೂ ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆಗಳನ್ನು ಅವರ ಮನೆಬಾಗಿಲಿಗೇ ತಲುಪಿಸಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಮಂಗಳೂರು: ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸಲು ಹಾಗೂ ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆಗಳನ್ನು ಅವರ ಮನೆಬಾಗಿಲಿಗೇ ತಲುಪಿಸಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ವಿಸ್ತರಿಸುವ ಸಲುವಾಗಿ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳೊಂದಿಗೆ ಮಹತ್ವದ ಒಪ್ಪಂದ / ಒಡಂಬಡಿಕೆ (MoU) ಮಾಡಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.ಈ ಮಹತ್ವಾಕಾಂಕ್ಷಿ ಒಪ್ಪಂದದ ಅಡಿಯಲ್ಲಿ ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ಹಾಗೂ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಒದಗಿಸಲಿವೆ. ಇದರ ನೇರ ಲಾಭ ಜನಸಾಮಾನ್ಯರಿಗೆ ಸಿಗಲಿದೆ. ಸ್ಥಳೀಯ ಮಟ್ಟದಲ್ಲೇ ತಜ್ಞ ವೈದ್ಯರ ಚಿಕಿತ್ಸೆ ಹಾಗೂ ಸುಧಾರಿತ ರೋಗ ನಿರ್ಣಯ ಸೌಲಭ್ಯಗಳು ಉಚಿತವಾಗಿ ದೊರೆಯಲಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಒಪ್ಪಂದದ ಪ್ರಮುಖ ಅಂಶಗಳು: ಈ ಯೋಜನೆಯಿಂದ ಸರ್ಕಾರಕ್ಕೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆ ಇರುವುದಿಲ್ಲ. ವೈದ್ಯಕೀಯ ಕಾಲೇಜುಗಳೇ ಸ್ವಯಂಪ್ರೇರಿತವಾಗಿ ಈ ಹೊಣೆಗಾರಿಕೆಯನ್ನು ಹೊತ್ತುಕೊಳ್ಳಲಿದ್ದು, ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ. ಆರೋಗ್ಯ ಕೇಂದ್ರಗಳ ಸಂಪೂರ್ಣ ಆಡಳಿತಾತ್ಮಕ ನಿಯಂತ್ರಣ ಸರ್ಕಾರದ ಸರ್ಕಾರಿ ವೈದ್ಯಾಧಿಕಾರಿಗಳಲ್ಲಿಯೇ ಇರಲಿದೆ.ಯಾವುದೇ ನಿಯಮಗಳ ಉಲ್ಲಂಘನೆ ಆಗದಂತೆ ಸರ್ಕಾರ ನಿರಂತರವಾಗಿ ಮೇಲ್ವಿಚಾರಣೆ ನಡೆಸಲಿದೆ.
ಇದರ ಜೊತೆಗೆ ಈ ಒಪ್ಪಂದಕ್ಕೆ ಒಳಪಟ್ಟಿರುವ ಸರ್ಕಾರಿ ಆಸ್ಪತ್ರೆಗಳಿಗೆ ಒಂದು ವರ್ಷದೊಳಗೆ ರಾಷ್ಟ್ರೀಯ ಮಟ್ಟದ ಗುಣಮಟ್ಟದ ಮಾನ್ಯತೆ ಪಡೆಯುವ ಹೊಣೆಗಾರಿಕೆಯನ್ನು ಸಂಬಂಧಿತ ವೈದ್ಯಕೀಯ ಕಾಲೇಜುಗಳಿಗೆ ನೀಡಲಾಗಿದೆ.ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಎಬಿ-ಎಆರ್ಕೆ (AB-ARK) ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ.
ಇತರ ಪ್ರಕರಣಗಳನ್ನು ಸರ್ಕಾರಿ ಆಸ್ಪತ್ರೆಗಳಿಗೇ ‘ರೆಫರ್’ ಮಾಡಲಾಗುತ್ತದೆ.ದ.ಕ.ದಲ್ಲಿ ಪ್ರಾಯೋಗಿಕ ಚಾಲನೆ: ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕು ಆಸ್ಪತ್ರೆಗಳು ಹಾಗೂ ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಇದಕ್ಕಾಗಿ ಎ.ಜೆ. ವೈದ್ಯಕೀಯ ಕಾಲೇಜು, ಅಳ್ವಾಸ್ ಹೆಲ್ತ್ ಸೆಂಟರ್ ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರವನ್ನು ನೆರಳಕಟ್ಟೆಯ ಯೇನೆಪೋಯ ವೈದ್ಯಕೀಯ ಕಾಲೇಜುಗಳೊಂದಿಗೆ ಒಂದು ವರ್ಷದ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸಾಮಾನ್ಯ ಜನರಿಗೆ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲೇ ಅತ್ಯುತ್ತಮ ವೈದ್ಯಕೀಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಿಗಬೇಕು ಎಂಬುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ನಾವು ಆರಂಭಿಸುತ್ತಿರುವ ಈ ನೂತನ ಹೆಜ್ಜೆ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗಲಿದೆ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.