ಸಾರಾಂಶ
ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿ ಕನ್ನುಘಟ್ಟ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ಆರು ತಿಂಗಳಾದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಐದಾರು ವರ್ಷಗಳಾಗಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ಕೆಟ್ಟು ಹೋಗಿವೆ. ಈ ನೀರಿನ ಘಟಕ ಕನ್ನುಘಟ್ಟ, ಬೆಳಗರಹಳ್ಳಿ, ಆಚಾರಪಾಳ್ಯ, ಹಾರೋಘಟ್ಟ, ಕೊರಮರಹಟ್ಟಿ ಸೇರಿದಂತೆ ಸುತ್ತಮುತ್ತಲ ಗ್ರಾಮದ ಜನರಿಗೆ ಕುಡಿಯುವ ನೀರಿನ ಆಸರೆಯಾಗಿತ್ತು. ಆದರೆ ಈಗ ಶುದ್ಧ ನೀರಿಲ್ಲದೆ ಪರದಾಡುವಂತಾಗಿದೆ. ಗ್ರಾಮ ಪಂಚಾಯಿತಿಗೆ ದೂರು ನೀಡಿದರೆ ನಮಗೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಾರೆ. ಘಟಕವನ್ನು ಉದ್ಘಾಟನೆ ಮಾಡಿ ಹಣ ಬಿಡುಗಡೆ ಮಾಡಿದರೆ ತಮ್ಮ ಕೆಲಸ ಮುಗಿಯಿತು ಎಂಬಂತಾಗಿದ್ದು, ನಿರ್ವಹಣೆಯ ಕೊರತೆಯಿಂದ ಇಂತಹ ಎಷ್ಟೋ ಘಟಕಗಳು ತಾಲೂಕಿನಲ್ಲಿ ಕೆಟ್ಟು ನಿಂತಿವೆ. ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗ್ರಾಮೀಣರು ಶುದ್ದ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ತೆರಿಗೆ ಹಣದಲ್ಲಿ ಇಂತಹ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ, ಆದರೆ ಜನರಿಗೆ ಇವು ಅನುಕೂಲವಾಗುತ್ತಿಲ್ಲ.
ಬೇಸಿಗೆ ಬಿರು ಬಿಸಿಲ ಧಗೆ ವಿಪರೀತ ಹೆಚ್ಚಾಗಿದ್ದು, ಕುಡಿಯುವ ನೀರಿಗಾಗಿ ಅಲೆದಾಡುವ ಸ್ಥಿತಿ ಹಳ್ಳಿಗಳಲ್ಲಿ ನಿರ್ಮಾಣವಾಗಿದೆ. ಗ್ರಾಮಗಳಲ್ಲಿರುವ ಬೋರ್ವೆಲ್ಗಳಲ್ಲಿ ನೀರು ಬತ್ತಿ ಹೋಗುತ್ತಿದ್ದು, ದೂರದ ತೋಟಗಳಿಗೆ ಹೋಗಿ ನೀರು ತರುವಂತಾಗಿದೆ. ನೀರಿಗಾಗಿ ಕೆಲಸ ಕಾರ್ಯ ಬಿಟ್ಟು ಇಡೀ ದಿನ ವ್ಯಯಿಸುವಂತಾಗಿದೆ. ಕೂಡಲೇ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಬೇಕು. ಇಲ್ಲವಾದಲ್ಲಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಮಾಡುವುದಾಗಿದೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.