ಮಲೆನಾಡ ಅರಣ್ಯ ಸಮಸ್ಯೆ ಮರೆತ ಜನಪ್ರತಿನಿಧಿಗಳು: ತೀನಶ್ರೀ ಬೇಸರ

| Published : Feb 04 2024, 01:37 AM IST

ಸಾರಾಂಶ

ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಸಚಿವ ಮಧು ಬಂಗಾರಪ್ಪ ಹಾಗೂ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಮಲೆನಾಡಿನ ಅರಣ್ಯ ಸಮಸ್ಯೆ, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿ ಗೆದ್ದಿದ್ದಾರೆ. ಆದರೆ, ಈಗ ಸಮಸ್ಯೆ ಕುರಿತು ಗಮನಹರಿಸದೇ ಇರುವುದು ಬೇಸರದ ಸಂಗತಿ ಎಂದು ಮಲೆನಾಡು ಭೂ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಸಾಗರದಲ್ಲಿ ಆರೋಪಿಸಿದ್ದಾರೆ.

ಸಾಗರ: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಮಲೆನಾಡಿನ ಅರಣ್ಯ ಸಮಸ್ಯೆ, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿ ಗೆದ್ದಿದ್ದಾರೆ. ಆದರೆ, ಈಗ ಸಮಸ್ಯೆ ಕುರಿತು ಗಮನಹರಿಸದೇ ಇರುವುದು ಬೇಸರದ ಸಂಗತಿ ಎಂದು ಮಲೆನಾಡು ಭೂ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅರಣ್ಯ ಸಮಸ್ಯೆಯನ್ನು ಯಾರೂ ಗಂಭೀರವಾಗಿ ಪರಿಗಣಿಸದೇ ಇರುವುದನ್ನು ವೇದಿಕೆ ಖಂಡಿಸುತ್ತದೆ. ಸಿಗಂದೂರಿನಲ್ಲಿ 30ಕ್ಕೂ ಹೆಚ್ಚು ಜನರು ಶೆಡ್ ಹಾಕಿಕೊಂಡು ಸಣ್ಣಪುಟ್ಟ ವ್ಯಾಪಾರ ಮಾಡುತ್ತಿದ್ದವರಿಗೆ ಅರಣ್ಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಸಾರ್ವಜನಿಕರು ಲೋಕಾಯುಕ್ತಕ್ಕೆ ಹೋಗುತ್ತಾರೆ. ಅದಕ್ಕಾಗಿ ನೋಟಿಸ್ ನೀಡಿದ್ದೇವೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಇದೇ ರೀತಿ ಎಲ್ಲರಿಗೂ ನೋಟಿಸ್ ನೀಡಿ ಒಕ್ಕಲೆಬ್ಬಿಸುತ್ತೇವೆ ಎಂದು ಇಲಾಖೆ ಬೆದರಿಕೆ ಹಾಕಿದರೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕಂದಾಯ ಸಚಿವರು ಜಿಲ್ಲೆಯ ಅರಣ್ಯ ಸಮಸ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಹೇಳುವ ಪ್ರಕಾರ ಈ ಸಮಸ್ಯೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕ್ಯೆಗೂಂಡರೆ ಮಾತ್ರ ನ್ಯಾಯ ಸಿಗುತ್ತದೆ ಎಂದಿದ್ದಾರೆ. ಆದ್ದರಿಂದ ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ಈ ಕ್ಷೇತ್ರದ ಶಾಸಕರು ಕೂಡಲೇ ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದಲ್ಲಿ ವೇದಿಕೆ ವತಿಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ದ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕೆ.ಆರ್.ಕೃಷ್ಣಪ್ಪ ಹಾಜರಿದ್ದರು.