ತಾಲೂಕಿನಲ್ಲಿ ಯಾವ ಗ್ರಾಪಂ ವ್ಯಾಪ್ತಿಯಲ್ಲೂ ಕುಡಿಯುವ ನೀರಿನ ತೊಂದರೆ ಜನತೆಗೆ ಆಗಬಾರದು.
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸೂಚನೆಕನ್ನಡಪ್ರಭ ವಾರ್ತೆ ಜೋಯಿಡಾ
ತಾಲೂಕಿನಲ್ಲಿ ಯಾವ ಗ್ರಾಪಂ ವ್ಯಾಪ್ತಿಯಲ್ಲೂ ಕುಡಿಯುವ ನೀರಿನ ತೊಂದರೆ ಜನತೆಗೆ ಆಗಬಾರದು ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.ಜೋಯಿಡಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೋಯಿಡಾದಲ್ಲಿ ಕಳೆದ ಮೂರು ವರ್ಷಗಳಿಂದ ಕುಡಿಯುವ ನೀರು ಯೋಜನೆಯ ಕೆಲಸ ಮಾಡುತ್ತಿದ್ದ ಗುತ್ತಿಗೆದಾರ ಕೆಲಸ ಮುಗಿಸದೆ, ನಾಪತ್ತೆ ಆಗಿದ್ದು, ಅವರಿಗೆ ಶೋಕಾಸ್ ನೋಟಿಸ್ ನೀಡಲು ಸೂಚಿಸಿದರು.
ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮೂರು ದಿನದೊಳಗೆ ಸಭೆ ನಡೆಸಿ, ಮಾಹಿತಿ ನೀಡಲು ತಹಸೀಲ್ದಾರ್ ಮಂಜುನಾಥ ಮುನ್ನೊಳ್ಳಿ ಅವರಿಗೆ ಸೂಚಿಸಿದರು.ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳು ಮನಸ್ಸಿಗೆ ಬಂದಂತೆ ಕೆಲಸ ಕೈಕೊಳ್ಳದೆ ಜನಪ್ರತಿನಿಧಿಗಳು, ಶಾಸಕರ ಗಮನಕ್ಕೆ ತಂದು ಕ್ರಮ ಕೈಕೊಳ್ಳಲು ಸೂಚಿಸಿದರು.
ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ, ಕುಡಿಯುವ ನೀರಿನ ಮಾಹಿತಿ ನೀಡಿದರು. ನಂದಿಗದ್ದೆ ಗ್ರಾಪಂನ ಬಳಗಾರ ಮತ್ತು ಶೇವಾಳಿಯಲ್ಲಿ ಕುಡಿಯುವ ನೀರಿನ ಯೋಜನೆಯ ಬಗ್ಗೆ ಗ್ರಾಪಂ ಮಾಜಿ ಅಧ್ಯಕ್ಷ ಅರುಣ ದೇಸಾಯಿ ಹೇಳುತ್ತಿದ್ದಂತೆ ತಹಸೀಲ್ದಾರ್ ಅವರಿಗೆ ಕ್ರಮ ಕೈಕೊಳ್ಳಲು ತಿಳಿಸಿದರು.ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುವುದು ಎಂದರು. ಆರೋಗ್ಯ ಇಲಾಖೆಯಲ್ಲಿ 14ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕೋಶದಲ್ಲಿ ಬರುವ ಕ್ಯಾನ್ಸರ್ ತಡೆಗಟ್ಟುವ ಉಚಿತ ಚುಚ್ಚುಮದ್ದು ಬಂದಿದ್ದು, ಎಲ್ಲ 14-15ರ ವಯಸ್ಸಿನ ಹೆಣ್ಣುಮಕ್ಕಳು ಪ್ರಯೋಜನ ಪಡೆಯಬೇಕು ಎಂದು ಕೋರಿದರು.
ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸುವ ಮೊದಲು, ತಮ್ಮ ಕ್ಷೇತ್ರದಲ್ಲಿ ಸ್ವಚ್ಛತೆಯನ್ನು ಎಲ್ಲರೂ ಕಾಯ್ದುಕೊಳ್ಳಬೇಕು ಮತ್ತು ಕ್ಷೇತ್ರವನ್ನು ಸ್ವಚ್ಛವಾಗಿಡಬೇಕು ಎಂದು ಹೇಳಿದರು. ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ ಎಲ್ಲರನ್ನೂ ಶಾಸಕ ದೇಶಪಾಂಡೆ ಅಭಿನಂದಿಸಿದರು.ಬಳಿಕ ಕಂದಾಯ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಲ್ಯಾಪ್ಟಾಪ್ ವಿತರಿಸಿದರು. ಸ್ವಚ್ಛತಾ ಕಾರ್ಯಕ್ರಮದ ಬುಕ್ಲೆಟ್ನ್ನು ಇದೇ ಸಂದರ್ಭ ಬಿಡುಗಡೆ ಮಾಡಿದರು.