ಸಾರಾಂಶ
ದ.ಕ. ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ವತಿಯಿಂದ ಪುತ್ತೂರಿನ ಸುಭದ್ರಾ ಸಭಾ ಮಂದಿರದಲ್ಲಿ ಭಾನುವಾರ ಕಾಳುಮೆಣಸು ಹಾಗೂ ಕಾಫಿ ಬೆಳೆಯ ಬಗೆಗಿನ ಮಾಹಿತಿ ಶಿಬಿರ ಮತ್ತು ಸಮಾವೇಶ ನೆರವೇರಿತು.
ಪುತ್ತೂರು: ಅಡಕೆ, ಕಾಳುಮೆಣಸು, ಕೊಕ್ಕೋ ದರಗಳ ಸ್ಥಿರತೆ ಸಾಧಿಸುವಲ್ಲಿ ಕ್ಯಾಂಪ್ಕೋ ಪ್ರಯತ್ನ ನಿರಂತರವಾಗಿರಲಿದೆ. ದ.ಕ., ಕಾಸರಗೋಡು ಜಿಲ್ಲೆಗಳಲ್ಲಿ ಕಾಳುಮೆಣಸು ಹಾಗೂ ಕಾಫಿ ಬೆಳೆದು ರೈತರು ಆರ್ಥಿಕ ಶಕ್ತಿ ಪಡೆಯಲು ವ್ಯಾಪಕ ಅವಕಾಶವಿದೆ. ಈ ನಿಟ್ಟಿನಲ್ಲಿ ರೈತರು ಹೆಚ್ಚಿನ ಪ್ರಯತ್ನ ನಡೆಸಬೇಕು. ಬೆಳೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲು ಆದ್ಯತೆ ನೀಡಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ದ.ಕ. ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ವತಿಯಿಂದ ಪುತ್ತೂರಿನ ಸುಭದ್ರಾ ಸಭಾ ಮಂದಿರದಲ್ಲಿ ಭಾನುವಾರ ನಡೆದ ಒಂದು ದಿನದ ಕಾಳುಮೆಣಸು ಹಾಗೂ ಕಾಫಿ ಬೆಳೆಯ ಬಗೆಗಿನ ಮಾಹಿತಿ ಶಿಬಿರ ಮತ್ತು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಶ್ರೀಲಂಕಾ ಹಾಗೂ ವಿಯೇಟ್ನಾಂ ದೇಶದಿಂದ ಕಾಳಸಂತೆಯಲ್ಲಿ ಕಾಳುಮೆಣಸು ಭಾರತಕ್ಕೆ ಬರುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಕ್ಯಾಂಪ್ಕೋ ಸಂಸ್ಥೆ ಕೇಂದ್ರ ಸರ್ಕಾರದ ಜತೆ ಪ್ರಯತ್ನ ನಡೆಸುತ್ತಿದೆ. ಕೊರೋನಾ ಬಳಿಕ ಅಡಕೆ ದರ ಕುಸಿಯದಂತೆ ಕಾಪಾಡುವಲ್ಲಿ ಕ್ಯಾಂಪ್ಕೋ ಮಹತ್ವದ ಪಾತ್ರ ವಹಿಸುತ್ತಾ ಬಂದಿದೆ. ಬೆಳೆಯನ್ನು ಕಾಡುತ್ತಿರುವ ರೋಗ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಜಿಲ್ಲೆಯಲ್ಲಿ ಅಡಕೆಗೆ ಪರ್ಯಾಯವಾಗಿ ಕಾಫಿ ಬೆಳೆಯುವ ಕುರಿತು ದ.ಕ. ಸಂಸದ ಬ್ರಿಜೇಶ್ ಚೌಟ ಅವರೂ ಸಿಪಿಸಿಆರ್ಐ ವಿಜ್ಞಾನಿಗಳ ಜತೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಅಖಿಲ ಭಾರತ ಕಾಳುಮೆಣಸು ಬೆಳೆಗಾರರ ಸಂಘದ ವಿಜ್ಞಾನಿ ಡಾ. ವೇಣುಗೋಪಾಲ್, ಸಮಗ್ರ ಕಾಳುಮೆಣಸು ಬೆಳೆಯುವ ಮಾಹಿತಿ ಮತ್ತು ಸಂರಕ್ಷಣಾ ವಿಧಾನದ ಬಗೆಗೆ ವಿಷಯ ಮಂಡಿಸಿದರು. ಸೆವೆನ್ ಬೀನ್ ಟೀಮ್ ಮುಖ್ಯಸ್ಥ ಡಾ.ಎಚ್.ಎಸ್.ಧರ್ಮರಾಜ್ ಸಕಲೇಶಪುರ ಅವರು ಕಾಫಿ ಮತ್ತು ಕಾಳುಮೆಣಸಿಗೆ ನೀಡುವ ಪೋಷಕಾಂಶಗಳ ಬಗೆಗೆ, ಇಂದೋರ್ನ ಶ್ರೀ ಸಿದ್ಧಿ ಅಗ್ರಿ ಕಂಪೆನಿ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥ ಪೆರುವೋಡಿ ನಾರಾಯಣ ಭಟ್ ಅವರು ಅಡಿಕೆ ಬೆಳೆಯುವ ವಿಧಾನ ಮತ್ತು ಪೋಷಕಾಂಶಗಳ ಸಮಗ್ರ ಮಾಹಿತಿ ಒದಗಿಸಿದರು.ಅಡಕೆ ಮತ್ತು ಕಾಳುಮೆಣಸು ಕೃಷಿಕರಾದ ಸುರೇಶ್ ಬಲ್ನಾಡು, ಅರವಿಂದ ಮುಳ್ಳಂಕೊಚ್ಚಿ ಆಲಂಕಾರು, ಪ್ರಗತಿಪರ ಕಾಳುಮೆಣಸು ಕೃಷಿಕ ಡಾ. ವೇಣುಗೋಪಾಲ್ ಕಳೇಯತೋಡಿ, ಧೂಪದ ಮರದಲ್ಲಿ ಕಾಳುಮೆಣಸು ಕೃಷಿ ಮಾಡಿದ ಸಾಧಕ ಅನಂತರಾಮಕೃಷ್ಣ ಪಳ್ಳತ್ತಡ್ಕ, ಅಡಿಕೆ ಮರ ಏರುವ ಯಂತ್ರವನ್ನು ಆವಿಷ್ಕರಿಸಿದ ಕೋಮಲೆ ಗಣಪತಿ ಭಟ್, ಕಾಳುಮೆಣಸು ಕಸಿ ಕಟ್ಟಿ ಬೆಳೆಸಿದ ಅನುಭವಿ ಕೃಷಿಕೆ ಸ್ವಪ್ನಾ ಸೇಡಿಯಾಪು ಅತಿಥಿಗಳಾಗಿ ಉಪಸ್ಥಿತರಿದ್ದರು.ಅಡಕೆ ಮತ್ತು ಕಾಳುಮೆಣಸು ಕೃಷಿಕರಾದ ಸುರೇಶ್ ಬಲ್ನಾಡು, ಅರವಿಂದ ಮುಳ್ಳಂಕೊಚ್ಚಿ ಆಲಂಕಾರು, ಪ್ರಗತಿಪರ ಕೃಷಿಕರಾದ ಪ್ರಸಾದ್ ರೈ ದಂಪತಿ ಹಾಗೂ ಪೆರುವೋಡಿ ನಾರಾಯಣ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ದ.ಕ. ಹಾಗೂ ಕಾಸರಗೋಡು ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಅಭಿಜಿತ್ ಪುತ್ತೂರು, ಸಮನ್ವಯ ಸಮಿತಿ ಸದಸ್ಯರಾದ ಗೋವಿಂದ ಭಟ್ ಬಾಯಾರಿ, ಅಜಿತ ಪ್ರಸಾದ್, ಸೇಡಿಯಾಪು ಜನಾರ್ದನ ಭಟ್ ಮತ್ತಿತರರು ಇದ್ದರು. ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ದ.ಕ. ಹಾಗೂ ಕಾಸರಗೋಡು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಸ್ವಾಗತಿಸಿದರು. ಶ್ರೀಕೃಷ್ಣ ಪ್ರಸಾದ್ ವಂದಿಸಿದರು. ಪ್ರಾಧ್ಯಾಪಕ ರಾಕೇಶ್ ಕುಮಾರ್ ಕಮ್ಮಜೆ ನಿರೂಪಿಸಿದರು.