ಪೆರಾಜೆ: ಅಖಿಲ ಭಾರತ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ

| Published : Nov 15 2025, 02:30 AM IST

ಸಾರಾಂಶ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆ ನಡೆಯಿತು.

ಕಾಫಿ ಬೆಳೆಗೆ ಸರ್ಕಾರದಿಂದ ಪ್ರೋತ್ಸಾಹ: ತಳೂರು ಕಿಶೋರ್ ಕುಮಾರ್

ಕನ್ನಡಪ್ರಭ ವಾರ್ತೆ ಮಡಿಕೇರಿ

ಸರ್ಕಾರ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ವಿಶ್ವ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ ಸಂಪಾಜೆ, ಕರಿಕೆ, ಪೆರಾಜೆ, ಚೆಂಬು ಭಾಗದಲ್ಲಿಯೂ ಸಹ ಕಾಫಿ ಬೆಳೆಯುವಂತಾಗಬೇಕು ಎಂದು ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರ ಕಾಫಿ ಉತ್ಪಾದನೆಗೆ ಸಹಾಯಧನ ಕಲ್ಪಿಸುತ್ತಿದೆ. ಜತೆಗೆ ಪ್ರೋತ್ಸಾಹ ನೀಡುತ್ತಿದೆ. ಹಾಗಾಗಿ ಅಡಕೆ, ರಬ್ಬರ್, ಗೇರು ಜೊತೆಗೆ ಕಾಫಿ ಬೆಳೆಯಲು ಪ್ರಯತ್ನಿಸಬೇಕು. ದೇಶವು 3.60 ಲಕ್ಷ ಮೆಟ್ರಿಕ್ ಟನ್ ಕಾಫಿ ಉತ್ಪಾದಿಸುತ್ತಿದ್ದು, ಇದರಲ್ಲಿ 2.30 ಲಕ್ಷ ಮೆಟ್ರಿಕ್ ಟನ್ ಕಾಫಿಯನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಉಳಿದಂತೆ 1.50 ಲಕ್ಷ ರೂ. ಮೆಟ್ರಿಕ್ ಟನ್ ದೇಶದಲ್ಲಿಯೇ ವ್ಯಾಪಾರ ಆಗುತ್ತಿದೆ ಎಂದು ತಿಳಿಸಿದರು.

ರಾಜ್ಯವು ಕಾಫಿ ಉತ್ಪಾದನೆಯಲ್ಲಿ ಶೇ.60ರಿಂದ 65ರಷ್ಟು, ಕೊಡಗು ಜಿಲ್ಲೆ ಕಾಫಿ ಉತ್ಪಾದನೆಯಲ್ಲಿ ಶೇ.30ರಿಂದ 35ರಷ್ಟು, ಹಾಗೆಯೇ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಿಂದ ಶೇ.25ರಿಂದ 30 ರಷ್ಟು, ಕೇರಳ, ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಶೇ.20 ರಿಂದ 30 ರಷ್ಟು ಹಾಗೆಯೇ ಈಶಾನ್ಯ ರಾಜ್ಯಗಳಲ್ಲಿ ಶೇ.10 ರಿಂದ 15 ರಷ್ಟು ಕಾಫಿಯನ್ನು ಉತ್ಪಾದಿಸಲಾಗುತ್ತಿದೆ ಎಂದು ಕಾಫಿ ಮಂಡಳಿ ಸದಸ್ಯರು ವಿವರಿಸಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಮಾತನಾಡಿ, ಸಹಕಾರ ಕ್ಷೇತ್ರ ಇಡೀ ವಿಶ್ವದಲ್ಲಿ ಬೃಹತ್ ಆಗಿ ಬೆಳೆದಿದ್ದು, ಇದನ್ನು ಮತ್ತಷ್ಟು ಬಲಪಡಿಸಿ ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

1905ರಲ್ಲಿ ಸಹಕಾರ ಚಳುವಳಿ ಆರಂಭವಾಯಿತು. ಕೊಡಗು ಜಿಲ್ಲೆಯಲ್ಲಿ ಶಾಂತಳ್ಳಿಯಲ್ಲಿ ಸಹಕಾರ ಸಂಘ ಸ್ಥಾಪನೆಯಾಗಿ ಇಂದು ಹೆಮ್ಮರವಾಗಿ ಬೆಳೆದಿದೆ. ಜಿಲ್ಲೆಯಲ್ಲಿ 288 ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ಸಹಕಾರ ಸಂಘ ಸ್ಥಾಪಿಸುವ ಮೂಲಕ ಹಿರಿಯರು ಸಹಕಾರ ಸಂಘ ಬಲಪಡಿಸಲು ಶ್ರಮಿಸಿದ್ದಾರೆ ಎಂದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ರಾಬಿನ್ ದೇವಯ್ಯ ಮಾತನಾಡಿ, ಸಹಕಾರ ಸಂಘಕ್ಕೆ 121 ವರ್ಷಗಳ ಇತಿಹಾಸವಿದ್ದು, ಸಿದ್ದನೆಗೌಡ ಪಾಟೀಲ ಅವರು ಸಹಕಾರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಪೆರಾಜೆ ಸಹಕಾರ ಸಂಘ ಸ್ಥಾಪಿಸುವಲ್ಲಿ ಡಿಸಿಸಿ ಬ್ಯಾಂಕ್ ಹೆಚ್ಚಿನ ಸಹಕಾರ ನೀಡಿದೆ. ಸಹಕಾರ ಸಂಘಗಳಲ್ಲಿ ಸಾಲ ಪಡೆಯಬೇಕು. ಕಾಲ ಕಾಲಕ್ಕೆ ಮರು ಪಾವತಿ ಮಾಡಬೇಕು. ಸಹಕಾರ ಸಂಘದಲ್ಲಿ ಪಾರದರ್ಶಕತೆ ಕಾಪಾಡಬೇಕು. ಪಿ.ಎಂ. ವಿಶ್ವಕರ್ಮ ಯೋಜನೆ ಸೌಲಭ್ಯ ತಲುಪಬೇಕು ಎಂದು ಹೇಳಿದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ ನಿರ್ದೇಶಕ ಎ.ಕೆ.ಮನುಮುತ್ತಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲ ವ್ಯವಹಾರಗಳು ಸಹಕಾರ ಸಂಘಗಳ ಮೂಲಕ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕ ಹೊಸೂರು ಸತೀಶ್ ಕುಮಾರ್ ಮಾತನಾಡಿ, ಸಹಕಾರ ಸಂಘಗಳಲ್ಲಿಯೂ ಹಲವು ಲೋಪದೋಷಗಳು ಇದ್ದು, ಅದನ್ನು ಸರಿಪಡಿಸಿಕೊಂಡು ಅಭಿವೃದ್ಧಿ ಪಥದತ್ತ ಸಾಗಬೇಕು. ಸಹಕಾರ ಸಂಘಗಳು ಗ್ರಾಮೀಣ ಜನರ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಶ್ಯಾಮಲಾ ಮಾತನಾಡಿ, ಸಹಕಾರ ಕ್ಷೇತ್ರ ಬಹಳ ವಿಶಾಲವಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳುವಂತಾಗಬೇಕು. ಸಹಕಾರ ಕ್ಷೇತ್ರದ ಮೂಲಕ ಗ್ರಾಮೀಣ ಅಭಿವೃದ್ಧಿ ಆಗಬೇಕು. ಸ್ವಾವಲಂಬಿ ಬದುಕಿಗೆ ಸಹಕಾರ ಕ್ಷೇತ್ರ ಸಹಕಾರಿಯಾಗಿದೆ ಎಂದು ಹೇಳಿದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಕೆ.ಎಂ.ತಮ್ಮಯ್ಯ, ವಿ.ಕೆ.ಅಜಯ್ ಕುಮಾರ್, ಬಲ್ಲಾರಂಡ ಮಣಿಉತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಎಸ್.ಆರ್.ಸುನಿಲ್ ರಾವ್, ಎಂ.ಟಿ.ಸುಬ್ಬಯ್ಯ, ಪಿ.ಎನ್.ಚಂದ್ರಪ್ರಕಾಶ್, ಕೆ.ಎನ್.ಸತೀಶ್, ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್.ಡಿ.ರವಿಕುಮಾರ್, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಪಿ.ಎಂ.ಅಶೋಕ್, ಇತರರು ಇದ್ದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಿಇಒ ಯೋಗೇಂದ್ರ ನಾಯಕ್ ಸ್ವಾಗತಿಸಿದರು. ವಿದ್ಯಾರ್ಥಿ ಗೌತಮ ಪ್ರಾರ್ಥಿಸಿದರು. ಶಾಲಾ ವಿದ್ಯಾರ್ಥಿಗಳು ವಂದೇ ಮಾತರಂ ಗೀತೆ ಹಾಡಿದರು. ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಲೋಕೇಶ್ ವಂದಿಸಿದರು.

ಸಹಕಾರ ಸಪ್ತಾಹ ಸಂದರ್ಭದಲ್ಲಿ ಆರೋಗ್ಯ ಉಚಿತ ತಪಾಸಣೆ ನಡೆಯಿತು. ಹಾಗೆಯೇ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ತರಕಾರಿ ಹಾಗೂ ವಿವಿಧ ವಸ್ತುಗಳ ಮಾರಾಟ ಮೇಳ ನಡೆಯಿತು.