ಸಾರಾಂಶ
ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕಾರ್ಯಗಳನ್ನು ಚಾಚೂ ತಪ್ಪದೇ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ಟಿ.ಭೂಬಾಲನ್ ಸೂಚಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕಾರ್ಯಗಳನ್ನು ಚಾಚೂ ತಪ್ಪದೇ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ಟಿ.ಭೂಬಾಲನ್ ಸೂಚಿಸಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾಸ್ಟರ್ ಟ್ರೇನರ್ಸ್ ಹಾಗೂ ಎಲ್ಲಾ ಸೆಕ್ಟರ್ ಅಧಿಕಾರಿಗಳ ತರಬೇತಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 2085 ಮತಗಟ್ಟೆಗಳಿವೆ. ಈ ಎಲ್ಲ ಮತಗಟ್ಟೆಯ ಕಾರ್ಯಗಳಿಗೆ ನಿಯೋಜನೆಗೊಂಡಿರುವ ಪಿಆರ್ಒಗಳು, ಪೊಲಿಂಗ್ ಅಧಿಕಾರಿಗಳು ಭಾರತೀಯ ಚುನಾವಣಾ ಆಯೋಗ ನೀಡಿರುವ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಮತದಾನದ ದಿನ ಇವಿಎಂ ಪ್ಯಾಟ್ ಮತಯಂತ್ರದಲ್ಲಿ ಯಾವುದೇ ತಾಂತ್ರಿಕ ಲೋಪದೋಷ ಉಂಟಾಗದಂತೆ ಮತ್ತು ಅದು ಚಾಲ್ತಿಯಲ್ಲಿ ಇರುವಂತೆ ನಿಗಾವಹಿಸಬೇಕು. ಮತಗಟ್ಟೆ ಕೇಂದ್ರದಲ್ಲಿ ಯಾವುದೇ ಗೊಂದಲ, ಸಮಸ್ಯೆ ಕಂಡುಬಂದರೆ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದರು.ಮತದಾನದ ಹಿಂದಿನ ದಿನ ಹಾಗೂ ಮತದಾನ ದಿನದಂದು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಮತ ಯಂತ್ರಗಳ ನಿರ್ವಹಣೆ ಕುರಿತು ತರಬೇತಿಯಲ್ಲಿ ಪ್ರಾಯೋಗಿಕವಾಗಿ ಸಂಪೂರ್ಣ ರೀತಿಯಲ್ಲಿ ತಿಳಿಸಿಕೊಡಲಾಯಿತು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ, ವಿಜಯಪುರ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳು ಇದ್ದರು.