ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತರಿಗೂ ಬೆಳೆ ವಿಮೆಯ ರಕ್ಷಣೆ ಸಿಗುವಂತಾಗಲು ಕೃಷಿ ಇಲಾಖೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಗರಿಷ್ಠ ಪ್ರಮಾಣದಲ್ಲಿ ವಿಮೆ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೃಷಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಯಾವುದೇ ರೈತರು ವಂಚಿತರಾಗದಂತೆ ನೋಡಿಕೊಳ್ಳಲು ಕೃಷಿ ಮತ್ತು ವಿಮಾ ಅಧಿಕಾರಿಗಳ ಅಗತ್ಯ ಕ್ರಮ ವಹಿಸಬೇಕು ಎಂದರು.

ಹವಾಮಾನ ವೈಪರೀತ್ಯ ಹಾಗೂ ಮಳೆ ಕೊರತೆಯಿಂದಾಗಿ ರೈತರು ನಷ್ಟ ಅನುಭವಿಸುವುದನ್ನು ತಪ್ಪಿಸಲು ಬೆಳೆ ವಿಮೆ ಪ್ರಮುಖ ಅಸ್ತ್ರವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಮನವೊಲಿಸಬೇಕು ಎಂದರು.

ಬೆಳೆ ವಿಮೆ ಎನ್ನುವುದು ಅನಿರೀಕ್ಷಿತ ನೈಸರ್ಗಿಕ ವಿಕೋಪಗಳು, ಬರ, ಪ್ರವಾಹ ಅಥವಾ ಕೀಟಬಾಧೆಯಿಂದ ಬೆಳೆ ನಷ್ಟವಾದಾಗ ರೈತರಿಗೆ ಆರ್ಥಿಕ ನೆರವು ಒದಗಿಸುವ ವಿಮೆಯಾಗಿದೆ ಎಂದು ಗ್ರಾಮೀಣ ವ್ಯಾಪ್ತಿಯ ಹಾಲಿನ ಡೈರಿ ಹಾಗೂ ರೈತ ಸಂಪರ್ಕ ಕೇಂದ್ರ, ಸ್ವಸಹಾಯ ಸಂಘಗಳಲ್ಲಿ ಬೆಳೆ ವಿಮೆ ಕುರಿತು ಪೋಸ್ಟರ್ ಅಳವಡಿಸುವ ಮೂಲಕ ರೈತರಿಗೆ ಜಾಗೃತಿ ಮೂಡಿಸಬೇಕು ಎಂದರು.


ಜಿಲ್ಲೆಯಲ್ಲಿ ಪರ್ಯಾಯ ಬೆಳೆಗಳಾಗಿ 10 ಬೆಳೆಗಳನ್ನು ಗುರುತಿಸಿದ್ದು ರಾಗಿ, ಜೋಳ, ಮೆಕ್ಕೆಜೋಳ, ತೊಗರಿ ಅಲಸಂದೆ ಮತ್ತು ಹುರುಳಿ ಬೆಳೆಗೆ ಹೆಚ್ಚು ಒತ್ತು ನೀಡುವಂತೆ ರೈತರಿಗೆ ಅರಿವು ಮೂಡಿಸಬೇಕು ಎಂದರು.

ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಹೋಬಳಿ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಜಿಂಗಲ್ ಅಳವಡಿಸಿ ರೈತರಿಗೆ ಬೆಳೆ ವಿಮೆಯ ಪ್ರಯೋಜನಗಳು ಹಾಗೂ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಮಾಹಿತಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಸಭೆಯಲ್ಲಿ ಮಂಡ್ಯ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.