ಸಾರಾಂಶ
ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ನಿಂದ (ಯುಪಿಸಿಎಲ್) 47.2 ಕೋಟಿ ರು. ವಸೂಲಿ ಮಾಡಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಪರಿಸರ, ಜನರ ಆರೋಗ್ಯದ ಮೇಲೆ ಮಾಡಿರುವ ಹಾನಿಗೆ ಪರಿಹಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್ಜಿಟಿ) ಚೆನ್ನೈ ಪ್ರಾದೇಶಿಕ ಪೀಠದ ಆದೇಶದಂತೆ ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ನಿಂದ (ಯುಪಿಸಿಎಲ್) 47.2 ಕೋಟಿ ರು. ವಸೂಲಿ ಮಾಡಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಈ ಕುರಿತು ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರು ಪ್ರಸ್ತಾಪಿಸಿರುವ ವಿಷಯಗಳು ಗಂಭೀರವಾಗಿರಬಹುದು. ಈ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಬಾಕಿಯಿದೆ. ಹಸಿರು ನ್ಯಾಯಾಧೀಕರಣದ ಆದೇಶ ಪಾಲಿಸಲು ನಿರ್ದೇಶನ ನೀಡುವಂತೆ ಕೋರಿದ ಮನವಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಪರಿಗಣಿಸಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.
ಅದಾನಿ ಪವರ್ ಲಿಮಿಟೆಡ್ ಜೊತೆಗೆ ವಿಲೀನಗೊಂಡಿರುವ ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಯುಪಿಸಿಎಲ್) ನಿಯಮ ಹಾಗೂ ಪರವಾನಿಗೆಗಳನ್ನು ಉಲ್ಲಂಘಿಸಿ ಉಡುಪಿ ಜಿಲ್ಲೆಯಲ್ಲಿ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಮಾಡಿರುವ ಹಾನಿ ಮಾಡಿದೆ. ಅದಕ್ಕಾಗಿ ಪರಿಹಾರವಾಗಿ ಕಂಪನಿಯಿಂದ 47.2 ಕೋಟಿ ರು. ವಸೂಲಿ ಮಾಡಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಾಧೀಕಾರಣ ನಿರ್ದೇಶಿಸಿ ಮೂರು ವರ್ಷ ಕಳೆದಿದೆ. ಆ ಆದೇಶವು ಪಾಲನೆಯಾಗಿಲ್ಲ. ಗ್ರಾಮಸ್ಥರು ಸಂಕಷ್ಟದಲ್ಲಿದ್ದು, ಸರ್ಕಾರ ಹಾಗೂ ಇತರ ಪ್ರಾಧಿಕಾರಗಳು ಮೌನವಹಿಸಿವೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು.