ಕನ್ನಡಪ್ರಭ ವಾರ್ತೆ ಬೆಳಗಾವಿ

ಮಹಿಳೆ ಹಾಗೂ ಮಕ್ಕಳ ಸ್ನೇಹಿಯಾಗಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸಾಮಾಜಿಕ ಮೂಢನಂಬಿಕೆ, ಅನಿಷ್ಠ ಪದ್ಧತಿಗಳನ್ನು ತೊಡೆದುಹಾಕುವ ಮೂಲಕ ಇದರ ತಡೆಗೆ ಪ್ರಮುಖ ಪಾತ್ರ ವಹಿಸಬೇಕು ಎಂದು ಕಾಕತಿ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಮಂಜುನಾಥ ನಾಯಕ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಂತಿಬಸ್ತವಾಡ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಶನಿವಾರ ಹೊಸ ವಂಟಮೂರಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಿದ್ದ ಪಂಚಾಯಿತಿ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಹಾಗೂ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾಯ್ದೆಗಳ ಕುರಿತು ನಡೆದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ್ಯ ವಿವಾಹ ಸಾಮಾಜಿಕ ಅನಿಷ್ಠವಾಗಿದೆ. ಎಲ್ಲ ಇಲಾಖೆಗಳು ಹಾಗೂ ಸಮುದಾಯದ ಸಹಕಾರದೊಂದಿಗೆ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಿಸಬೇಕಿದೆ. ಗ್ರಾಮದಲ್ಲಿ ಎಲ್ಲಿಯಾದರೂ ಬಾಲ್ಯವಿವಾಹ ನಡೆಯುತ್ತಿರುವ ಮಾಹಿತಿ ದೊರೆತರೆ ಕೂಡಲೇ ಪೊಲೀಸರ ನೆರವು ಪಡೆಯಬೇಕು ಎಂದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ಸಹಾಯವಾಣಿ ಸಂಯೋಜಕ ಎಂ.ಕೆ. ಕುಂದರಗಿ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ–2006, ಕರ್ನಾಟಕ ತಿದ್ದುಪಡಿ ಕಾಯ್ದೆ–2016 ಮತ್ತು 2025ರ ತಿದ್ದುಪಡಿಗಳು, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ (ಪೋಕ್ಸೊ) ಕಾಯ್ದೆ–2012, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಸೇರಿದಂತೆ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಸಹಾಯವಾಣಿ 1098 ಕುರಿತು ಮಾಹಿತಿ ನೀಡಿದರು.


ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹರ್ಷಿತ ಹಾಗೂ ಡಾ.ವಿನಯ ಮಾತನಾಡಿ, ಬಾಲ್ಯ ವಿವಾಹದಿಂದ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ಈರಪ್ಪ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಭಾರತಿ ಹಿರೇಮಠ, ಮಕ್ಕಳ ಸಹಾಯವಾಣಿ ಆಪ್ತ ಸಮಾಲೋಚಕಿ ಸುಧಾ ಘಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕಿ ರಶ್ಮಿ, ಮಕ್ಕಳ ಸಹಾಯವಾಣಿ ವಿಷಯ ನಿರ್ವಾಹಕ ರಾಜ್ ನೇಸರಿಕರ್, ಸೂರಜ ಎಸ್.ಕೆ. ಉಪಸ್ಥಿತರಿದ್ದರು