‘ಆಲಮಟ್ಟಿ ಡ್ಯಾಂ ಎತ್ತರಕ್ಕೆ ಮಹಾಸಿಎಂ ವಿರೋಧ ಬಗ್ಗೆ ಪಿಎಂ ಭೇಟಿ’

| Published : Jun 04 2025, 02:06 AM IST

‘ಆಲಮಟ್ಟಿ ಡ್ಯಾಂ ಎತ್ತರಕ್ಕೆ ಮಹಾಸಿಎಂ ವಿರೋಧ ಬಗ್ಗೆ ಪಿಎಂ ಭೇಟಿ’
Share this Article
  • FB
  • TW
  • Linkdin
  • Email

ಸಾರಾಂಶ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ತಗಾದೆ ತೆಗೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರ ಪತ್ರಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ನಂತರ, ಆ ಬಗ್ಗೆ ಚರ್ಚಿಸಲು ಪ್ರಧಾನಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ತಗಾದೆ ತೆಗೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರ ಪತ್ರಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ನಂತರ, ಆ ಬಗ್ಗೆ ಚರ್ಚಿಸಲು ಪ್ರಧಾನಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಪತ್ರಕ್ಕೆ ನಮ್ಮ ಮುಖ್ಯಮಂತ್ರಿ ಅವರು ಎರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ. ಅಲ್ಲದೆ, ನನ್ನ ಅಭಿಪ್ರಾಯವನ್ನು ಈಗಾಗಲೇ ಕಳುಹಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆಯುವ ಪತ್ರವನ್ನು ಎಲ್ಲ ಸಂಸದರಿಗೂ ಕಳುಹಿಸುತ್ತೇನೆ. ನಂತರ ಈ ವಿಚಾರವಾಗಿ ಚರ್ಚಿಸಲು ಪ್ರಧಾನಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ದಿನಾಂಕ ನಿಗದಿ ಮಾಡುವಂತೆ ಕೇಳುತ್ತೇನೆ. ಈ ವಿಚಾರವಾಗಿ ಎಲ್ಲ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಒತ್ತಾಯ ಮಾಡಲೇಬೇಕು ಎಂದರು.

-ಬಾಕ್ಸ್‌-

ಹೈಕಮಾಂಡ್‌ ಹೇಳಿದರೆಭೇಟಿ ಮಾಡ್ತೇನೆ: ಡಿಕೆಶಿ

ದೆಹಲಿ ಪ್ರವಾಸದ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್‌, ಕೇಂದ್ರ ಸಚಿವಾಲಯಗಳು ದೆಹಲಿಯಲ್ಲಿರುವ ಕಾರಣ ಎಲ್ಲಿಗೆ ತೆರಳಬೇಕಾಗುತ್ತದೆ. ಸದ್ಯಕ್ಕೆ ನನಗೆ ದೆಹಲಿಯಲ್ಲಿ ಯಾವುದೇ ಕಾರ್ಯಕ್ರಮವಿಲ್ಲ. ಆದರೆ, ಹೈಕಮಾಂಡ್‌ ನನಗೆ ಭೇಟಿ ಮಾಡಲು ತಿಳಿಸಿದರೆ ಹೋಗುತ್ತೇನೆ. ಆದರೆ, ನಾನು ಕೆಲ ಕೇಂದ್ರ ಸಚಿವರನ್ನು ಭೇಟಿ ಮಾಡಬೇಕಿದ್ದು, ಅವರು ಸಮಯ ನಿಗದಿ ಮಾಡಿದ ನಂತರ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.ನಿಗಮ ಮಂಡಳಿ ನೇಮಕ ಕುರಿತು ಪ್ರತಿಕ್ರಿಯಿಸಿ, ಶೀಘ್ರದಲ್ಲೇ ಮಾಡುತ್ತೇವೆ. ಈಗಾಗಲೇ ಗ್ಯಾರಂಟಿ ಸಮಿತಿಯಲ್ಲಿ 4 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. 8 ಸಾವಿರ ಜನ ಕಾರ್ಯಕರ್ತರನ್ನು ಬೇರೆಬೇರೆ ಸಮಿತಿ ಸದಸ್ಯನ್ನಾಗಿ ಮಾಡಿದ್ದೇವೆ. ರಾಜ್ಯಮಟ್ಟದಲ್ಲಿ 500ರಿಂದ 600 ಜನರನ್ನು ನಿಗಮ-ಮಂಡಳಿಗೆ ನೇಮಕ ಮಾಡಬೇಕಿದೆ. ಆ ಪಟ್ಟಿ ಸಿದ್ಧವಾಗಿದ್ದು, ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಪ್ರಕಟಿಸುತ್ತೇವೆ ಎಂದರು.ಶರಾವತಿ ಪಂಪ್ಡ್‌ ಸ್ಟೋರೇಜ್‌ ವಿದ್ಯುತ್‌ ಯೋಜನೆಗೆ ಸಮಸ್ಯೆ:

ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ (ಕೆಪಿಸಿಎಲ್‌)ನಿಂದ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಶಿವಮೊಗ್ಗ ಜಿಲ್ಲೆಯ ಶರಾವತಿ ಪಂಪ್ಡ್‌ ಸ್ಟೋರೇಜ್‌ ಜಲವಿದ್ಯುತ್‌ ಉತ್ಪಾದನಾ ಯೋಜನೆಯಿಂದ ಪಶ್ಚಿಮಘಟ್ಟ ಅರಣ್ಯ ಪ್ರದೇಶ ಮತ್ತು ವನ್ಯಜೀವಿಗಳಿಗೆ ಸಮಸ್ಯೆ ಉಂಟಾಗಲಿದೆ. ಹೀಗಾಗಿ ಯೋಜನೆ ಬಗ್ಗೆ ಪರಿಶೀಲಿಸುವ ಅಗತ್ಯವಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಪ್ರಾದೇಶಿಕ ಕಚೇರಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಪ್ರಾದೇಶಿಕ ಕಚೇರಿ ಅಧಿಕಾರಿಗಳು ನಡೆಸಿರುವ ಸ್ಥಳ ಪರಿಶೀಲನೆ ನಡೆದಿ ವರದಿ ಸಿದ್ಧಪಡಿಸಿ ಸಲ್ಲಿಸಿದ್ದಾರೆ. ಅದರಂತೆ ಯೋಜನೆಗಾಗಿ 15 ಸಾವಿರಕ್ಕೂ ಹೆಚ್ಚಿನ ಮರಗಳನ್ನು ಕಡಿಯಬೇಕು ಹಾಗೂ ನೆಲದಡಿಯಲ್ಲಿನ ಬಂಡೆಗಳನ್ನು ಸ್ಫೋಟಿಸಬೇಕಿದೆ. ಈ ಎರಡೂ ಪ್ರಕ್ರಿಯೆಯಿಂದ ಪಶ್ಚಿಮಘಟ್ಟ ಪ್ರದೇಶ ಹಾಗೂ ವನ್ಯಜೀವಿಗೆ ಸಾಕಷ್ಟು ಹಾನಿಯಾಗಲಿದೆ. ಜತೆಗೆ, 60 ಡಿಗ್ರಿಗಳವರೆಗೆ ಕಡಿದಾದ ಪ್ರದೇಶದಲ್ಲಿ ಕಾಮಗಾರಿ ಅನುಷ್ಠಾನಗೊಳಿಸಬೇಕಿದೆ ಹಾಗೂ ಹೊಸ ರಸ್ತೆಗಳ ರಚನೆ, ಹಾಲಿ ಇರುವ ರಸ್ತೆಗಳ ಅಗಲೀಕರಣವನ್ನು ಮಾಡಬೇಕಿದೆ. ಅದರೊಂದಿಗೆ ಹೆಚ್ಚಿನ ಮಳೆ, ಕಡಿದಾದ ಇಳಿಜಾರಿನಿಂದಾಗಿ ಈ ಪ್ರದೇಶದಲ್ಲಿ ಭೂಕುಸಿತವೂ ಉಂಟಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.ಯೋಜನೆಯಂತೆ 500 ಮೀ. ಆಳದ 3.2 ಕಿ.ಮೀ.ನಲ್ಲಿ ಭೂಗತ ಸುರಂಗಗಳನ್ನು ನಿರ್ಮಿಸಬೇಕಿದೆ. ಅದಕ್ಕಾಗಿ ಬಂಡೆಗಳನ್ನು ಕೊರೆಯುವುದು ಮತ್ತು ಸ್ಫೋಟಿಸಬೇಕಿದೆ. ಇದರಿಂದ ಪರಿಸರ ಮಾತ್ರವಲ್ಲದೆ ಮಾನವ ವಾಸಸ್ಥಳಗಳಿಗೂ ಹಾನಿಯಾಗುವ ಸಾಧ್ಯತೆಗಳಿವೆ. ಅದರಲ್ಲೂ ಈ ಭಾಗದಲ್ಲಿ ಹೆಚ್ಚಾಗಿ ವಾಸಿಸುವ ಲಯನ್‌ ಟೈಲ್ಡ್‌ ಕೋತಿಗಳಿಗೆ ಹೆಚ್ಚಿನ ಹಾನಿಯಾಗಲಿದ್ದು, ಅವುಗಳ ವಾಸಸ್ಥಳಕ್ಕೂ ಧಕ್ಕೆಯುಂಟಾಗಬಹುದು ಎಂದು ತಿಳಿಸಲಾಗಿದೆ.

ಅಲ್ಲದೆ, ಯೋಜನೆಗಾಗಿ ಶಿವಮೊಗ್ಗ ವನ್ಯಜೀವಿ ವಿಭಾಗದ 14.58 ಹೆಕ್ಟೇರ್‌, ಸಾಗರ ವಿಭಾಗದ 11.64 ಹೆಕ್ಟೇರ್‌ ಹಾಗೂ ಹೊನ್ನಾವರ ವಿಭಾಗದ 27.92 ಹೆಕ್ಟೇರ್‌ ಸೇರಿ ಒಟ್ಟಾರೆ 54.15 ಹೆಕ್ಟೇರ್‌ ಅರಣ್ಯ ಭೂಮಿಯ ಅವಶ್ಯಕತೆಯಿದೆ. ಅದಕ್ಕೆ ಬದಲಾಗಿ ಚಿಕ್ಕಮಗಳೂರು ಅರಣ್ಯ ವಿಭಾಗ ವ್ಯಾಪ್ತಿಯಲ್ಲಿ ಎರಡು ಕಡೆ ಭೂಮಿ ನೀಡುವುದಾಗಿ ತಿಳಿಸಲಾಗಿದೆ. ಅದರಲ್ಲಿ ಒಂದು ಕಡೆ 30 ಹೆಕ್ಟೇರ್‌, ಮತ್ತೊಂದೆಡೆ 24.15 ಹೆಕ್ಟೇರ್‌ ಭೂಮಿ ಕೊಡುವುದಾಗಿ ಹೇಳಲಾಗಿದೆ. ಆದರೆ, ಈ ಭೂಮಿಗಳು ಸೂಕ್ತ ಸ್ಥಳದಲ್ಲಿಲ್ಲದ ಕಾರಣ ಬದಲಿ ಭೂಮಿಯೂ ಸಮರ್ಪಕವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ.ಈ ಎಲ್ಲ ಕಾರಣಗಳಿಂದಾಗಿ ಯೋಜನೆಯ ವಿನ್ಯಾಸ ಬದಲಿಸುವ ಅವಶ್ಯಕತೆಯಿದೆ ಅಥವಾ ಯೋಜನೆ ಅನುಷ್ಠಾನದ ಬಗ್ಗೆಯೇ ಮರು ಪರಿಶೀಲಿಸಬಹುದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.''''ಭದ್ರಾ ಮೇಲ್ದಂಡೆ'''' ಅನುದಾನಕ್ಕಾಗಿ ಮೋದಿ ಬಳಿಗೆ ಶಾಸಕರ ನಿಯೋಗ:ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೆ ಸಂಬಂಧಿಸಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಮತ್ತು ಸಂಸದರನ್ನೊಳಗೊಂಡ ನಿಯೋಗದೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ತುಮಕೂರು ಜಿಲ್ಲೆಯ ಶಾಸಕರು ನಿರ್ಧರಿಸಿದ್ದಾರೆ.ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದಲ್ಲಿ ನಡೆದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾದ ಅನುದಾನ ನೀಡಲು ಕೇಂದ್ರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಯಿತು.

ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, ಯೋಜನೆಗಾಗಿ 5,300 ಕೋಟಿ ರು.ಗಳನ್ನು ನೀಡುವುದಾಗಿ ತಿಳಿಸಲಾಗಿತ್ತು. ಆದರೆ, ಯೋಜನೆ ಘೋಷಿಸಿದ ನಂತರದಿಂದ ಅನುದಾನ ನೀಡಿಲ್ಲ. ಹೀಗಾಗಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಹಾಗೂ ಪ್ರಹ್ಲಾದ್ ಜೋಶಿ ಸೇರಿ ರಾಜ್ಯದ ಎಲ್ಲ ಸಂಸದರ ನಿಯೋಗವನ್ನು ಪ್ರಧಾನಿ ಅವರ ಬಳಿಗೆ ಕರೆದೊಯ್ದು ಹಣ ಬಿಡುಗಡೆಗೆ ಒತ್ತಡ ಹೇರಬೇಕು ಎಂದು ಚರ್ಚಿಸಿ, ನಿರ್ಧರಿಸಲಾಯಿತು.ಸಭೆಯಲ್ಲಿ ಮಾತನಾಡಿದ ಟಿ.ಬಿ.ಜಯಚಂದ್ರ, ಯೋಜನೆಗೆ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಭಾಸ್ವಾಧೀನ ಪ್ರಕ್ರಿಯೆಗೆ ತೊಡಕುಂಟಾಗಿದೆ. ಅದನ್ನು ಆದಷ್ಟು ಬೇಗ ನಿವಾರಣೆ ಮಾಡಿ, ರೈತರಿಗೆ ಸೂಕ್ತ ಪರಿಹಾರ ನೀಡಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್‌, ವಿಶ್ವೇಶ್ವರಯ್ಯ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಇದ್ದರು.