ದೇಶದ ಅಭಿವೃದ್ಧಿ ವೇಗಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ವಿಕಸಿತ ಭಾರತ @ 2047 ಗುರಿ ಮುಂದಿಟ್ಟುಕೊಂಡು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ
ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ ಸುದೀರ್ಘ ಸೇವೆ ಸ್ಮರಿಸುವ ಉದ್ದೇಶದಿಂದ ದೇಶಾದ್ಯಂತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬಳ್ಳಾರಿ ನಗರದಲ್ಲಿ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ (ಸಪ್ಲಿಮೆಂಟ್) ವಿತರಿಸುವ ಮೂಲಕ ಸಮಾಜಮುಖಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಡಾ. ಅರುಣಾ ಕಾಮಿನೇನಿ ನೇತೃತ್ವದಲ್ಲಿ ನಗರದ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ಪೌಷ್ಟಿಕ ಆಹಾರದ ಪೂರಕ ವಿತರಣೆ ಮಾಡಲಾಯಿತು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಉತ್ತಮ ಆರೋಗ್ಯ, ಆಯುಷ್ಯ ಮತ್ತು ನಿರಂತರ ದೇಶಸೇವೆಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.ಇದೇ ವೇಳೆ ಮಾತನಾಡಿದ ಶಾಸಕ ವೈ.ಎಂ. ಸತೀಶ್ ಅವರು, ಸೆ.17ರಿಂದ ಅ.17, 2026ರವರೆಗೆ ದೇಶಾದ್ಯಂತ ಒಂದು ತಿಂಗಳ ಕಾಲ ಬೃಹತ್ ಸೇವಾ ಸಂಕಲ್ಪ ಅಭಿಯಾನ ನಡೆಯುತ್ತಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಸಾರ್ವಜನಿಕ ಜೀವನದಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡ ಬಳಿಕ ಪ್ರಧಾನಮಂತ್ರಿಯಾಗಿ ನಿರಂತರವಾಗಿ ದೇಶಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.
ದೇಶದ ಅಭಿವೃದ್ಧಿ ವೇಗಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ವಿಕಸಿತ ಭಾರತ @ 2047 ಗುರಿ ಮುಂದಿಟ್ಟುಕೊಂಡು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸುದೀರ್ಘ ಸಾರ್ವಜನಿಕ ಸೇವೆ ಸ್ಮರಿಸುವ ಹಾಗೂ ಸಮಾಜದ ವಿವಿಧ ವರ್ಗಗಳಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸೇವಾ ಸಂಕಲ್ಪ ಅಭಿಯಾನ ಕೇವಲ ಒಂದು ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಜನರ ಅಗತ್ಯಗಳಿಗೆ ಸ್ಪಂದಿಸುವ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳು ಸ್ವಯಂಪ್ರೇರಣೆಯಿಂದ ಇಂತಹ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.ಆರೋಗ್ಯ, ರಕ್ತದಾನಕ್ಕೂ ಆದ್ಯತೆ: ಅಭಿಯಾನದ ಅಂಗವಾಗಿ ದೇಶದ ವಿವಿಧೆಡೆ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಸೇರಿದಂತೆ ಹಲವು ಸಮಾಜಸೇವಾ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಬಡವರು, ದುರ್ಬಲ ವರ್ಗಗಳು, ಮಕ್ಕಳು ಹಾಗೂ ಅಗತ್ಯವಿರುವವರಿಗೆ ನೆರವಾಗುವ ಕಾರ್ಯಕ್ರಮಗಳ ಮೂಲಕ ಸೇವೆಯ ಸಂದೇಶ ಜನರಿಗೆ ತಲುಪಿಸಲಾಗುತ್ತಿದೆ ಎಂದು ಶಾಸಕ ವೈ.ಎಂ. ಸತೀಶ್ ತಿಳಿಸಿದರು.
ಬಳ್ಳಾರಿಯಲ್ಲೂ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಗಮನದಲ್ಲಿಟ್ಟುಕೊಂಡು ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಮಾಡಲಾಗಿದೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಅತ್ಯಂತ ಅಗತ್ಯ. ಬಾಲ್ಯದಲ್ಲಿಯೇ ಪೌಷ್ಟಿಕಾಂಶದ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಮುಖ್ಯವಾಗಿದೆ. ಈ ಉದ್ದೇಶದಿಂದ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ವಿವರಿಸಿದರು.ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಮಕ್ಕಳಿಗೆ ಸಮತೋಲಿತ ಹಾಗೂ ಪೌಷ್ಟಿಕ ಆಹಾರ ದೊರೆಯುವಂತೆ ನೋಡಿಕೊಳ್ಳುವುದು ಕುಟುಂಬದ ಜತೆಗೆ ಸಮಾಜದ ಜವಾಬ್ದಾರಿಯೂ ಆಗಿದೆ. ಈ ನಿಟ್ಟಿನಲ್ಲಿ ಇಂತಹ ಸೇವಾ ಕಾರ್ಯಗಳು ಮಹತ್ವ ಪಡೆದುಕೊಳ್ಳುತ್ತವೆ ಎಂದು ತಿಳಿಸಿದರು.
ಅಂಗನವಾಡಿ ಸಿಬ್ಬಂದಿಗೆ ಗೌರವ: ಕಾರ್ಯಕ್ರಮದ ವೇಳೆ ನಗರದ ವಿವಿಧ ಅಂಗನವಾಡಿ ಕೇಂದ್ರಗಳ ಸಿಬ್ಬಂದಿ ಹಾಗೂ ಕಾರ್ಯಕರ್ತರನ್ನು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು. ಮಕ್ಕಳ ಪಾಲನೆ, ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವಪ್ರಾಥಮಿಕ ಶಿಕ್ಷಣದ ಜವಾಬ್ದಾರಿ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಅಭಿನಂದಿಸಲಾಯಿತು.ಸೀಮಿತ ಸೌಲಭ್ಯಗಳ ನಡುವೆಯೂ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಸಿಬ್ಬಂದಿಯ ಸೇವೆಯನ್ನು ಸಮಾಜ ಗುರುತಿಸಬೇಕು. ಮಕ್ಕಳ ಭವಿಷ್ಯ ರೂಪಿಸುವ ಕಾರ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಅವರ ಸೇವೆಗೆ ಗೌರವ ಸಲ್ಲಿಸುವ ಮೂಲಕ ಸೇವಾ ಮನೋಭಾವಕ್ಕೆ ಮತ್ತಷ್ಟು ಉತ್ತೇಜನ ನೀಡಲಾಗಿದೆ ಎಂದು ಮುಖಂಡರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸುವುದರ ಜತೆಗೆ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ಅಗತ್ಯತೆಗಳ ಬಗ್ಗೆಯೂ ಮಾಹಿತಿ ಪಡೆಯಲಾಯಿತು. ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು. ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಲಾಯಿತು.ಸೇವೆಯೇ ಸಂಕಲ್ಪ: ಸೇವಾ ಸಂಕಲ್ಪ ಅಭಿಯಾನದ ಮೂಲಕ ರಾಜಕೀಯ ಕಾರ್ಯಕ್ರಮಗಳಿಗಿಂತ ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ರಕ್ತದಾನ, ಆರೋಗ್ಯ ತಪಾಸಣೆ, ಪೌಷ್ಟಿಕ ಆಹಾರ ವಿತರಣೆ, ಸ್ವಚ್ಛತಾ ಕಾರ್ಯ, ಅಗತ್ಯವಿರುವವರಿಗೆ ನೆರವು ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನಸೇವೆಯ ಸಂದೇಶ ಸಮಾಜಕ್ಕೆ ನೀಡಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಜೀವನದ ಸೇವೆ ಸ್ಮರಿಸುವ ಸಂದರ್ಭವನ್ನು ಜನಪರ ಚಟುವಟಿಕೆಗಳೊಂದಿಗೆ ಜೋಡಿಸಿರುವುದು ಅಭಿಯಾನದ ಉದ್ದೇಶವಾಗಿದೆ. ಬಳ್ಳಾರಿಯಲ್ಲೂ ಮುಂದಿನ ದಿನಗಳಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಮುಖಂಡರು ತಿಳಿಸಿದರು.ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಡಾ.ಅರುಣ ಕಾಮಿನೇನಿ, ಜಿಲ್ಲಾ ಕಾರ್ಯದರ್ಶಿ ಡಾ. ರೇಣುಕಾ, ಕೌಲ್ಬಜಾರ್ ಮಂಡಳ ಅಧ್ಯಕ್ಷ ವಿ. ನಾಗರಾಜರೆಡ್ಡಿ, ಮಾಜಿ ಅಧ್ಯಕ್ಷ ಶಂಕರಪ್ಪ, ಉಪಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಜಿ. ಅವಿನಾಶ್ ನಾಯ್ಡು ಹಾಗೂ ಎಂ.ಪಿ. ರಾಜೇಶ್, ಅಲವೇಲಮ್ಮ, ರಾಜ್ಯ ಎಸ್ಸಿ ಮೋರ್ಚಾ ಪದಾಧಿಕಾರಿ ವಿಜಯಲಕ್ಷ್ಮಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ನೂರ್ ಭಾಷ, ಒಬಿಸಿ ಮೋರ್ಚಾ ಅಧ್ಯಕ್ಷ ಶೇಖಣ್ಣ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಂಗನವಾಡಿ ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.