ನರಸಾಪುರದಲ್ಲಿ ಇಎಸ್‌ಐ ಆಸ್ಪತ್ರೆಗೆ ಪ್ರಧಾನಿ ಶಂಕು

| Published : Oct 30 2024, 12:30 AM IST

ಸಾರಾಂಶ

ವೇಮಗಲ್ ಮತ್ತು ನರಸಾಪುರ ಭಾಗದಲ್ಲಿ ಕೈಗಾಕಾ ಪ್ರದೇಶದಲ್ಲಿನ ಕಾರ್ಮಿಕರಿಗೆ ಆರೋಗ್ಯ ಭಾಗ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಹಿಂದೆ ಮಾಜಿ ಸಂಸದ ಎಸ್.ಮುನಿಸ್ವಾಮಿ ಅವರ ಪರಿಶ್ರಮವಿದೆ. ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಕೂಡ ಒತ್ತು ನೀಡಿತ್ತು.

ಕನ್ನಡಪ್ರಭ ವಾರ್ತೆ ಕೋಲಾರತಾಲೂಕಿನ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ೧೦೦ ಹಾಸಿಗೆಗಳ ಇಎಸ್‌ಐ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ವರ್ಚುವಲ್ ವೇದಿಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಸೇರಿದಂತೆ ಸಚಿವರು ಭಾಷಣ ಮಾಡಿದರು, ನರಸಾಪುರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರ ಭಾಷಣವನ್ನು ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ, ಈ ಆಸ್ಪತ್ರೆ ಪ್ರಾರಂಭದ ಹಿಂದೆ ಮಾಜಿ ಸಂಸದ ಎಸ್.ಮುನಿಸ್ವಾಮಿ ಅವರ ಪರಿಶ್ರಮವಿದೆ. ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಕೂಡ ಒತ್ತು ನೀಡಿತ್ತು. ಮುಂದಿನ ದಿನಗಳಲ್ಲಿ ಕಾರ್ಮಿಕರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಸಿಗಲಿದೆ. ೩೨ ತಿಂಗಳಲ್ಲಿ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ವೇಮಗಲ್ ಮತ್ತು ನರಸಾಪುರ ಭಾಗದಲ್ಲಿ ಕೈಗಾಕಾ ಪ್ರದೇಶದಲ್ಲಿನ ಕಾರ್ಮಿಕರಿಗೆ ಆರೋಗ್ಯ ಭಾಗ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಗುತ್ತಿಗೆದಾರರು ಕಾಮಗಾರಿ ಗುಣಮಟ್ಟ ಕಾಪಾಡಬೇಕು ಎಂದರು.ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿದರು. ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ಇಎಸ್‌ಐಸಿ ಅಧಿಕಾರಿ ರಾಜೇಶ್ ಕುಮಾರ್, ಅಕ್ಷತಾ, ಜಿಲ್ಲಾ ಅಧೀಕ್ಷಕ ಕೆಜಿಎಫ್‌ನ ರವಿ ಚಂದ್ರಶೇಖರ್ ಇದ್ದರು.