ಸಾರಾಂಶ
ಕನ್ನಡಪ್ರಭ ವಾರ್ತೆ ಕುಂದಾಪುರ
ನಶಿಸಿ ಹೋಗುತ್ತಿರುವ ಸಾಂಪ್ರದಾಯಿಕ ಕುಲಕಸುಬುಗಳಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಮರುಜೀವ ನೀಡುತ್ತಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಮಂಗಳವಾರ ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶಗಳ ವತಿಯಿಂದ ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಸರ್ಕಾರ ಈ ಯೋಜನೆಗಾಗಿ ೧೨ ಸಾವಿರ ಕೋಟಿ ರು.ಗಳನ್ನು ಕಾಯ್ದಿರಿಸಿದೆ. ಇದು ಗ್ರಾಮಮಟ್ಟದ ಶಕ್ತಿಯೋಜನೆಯಾಗಿ ಹೊರಹೊಮ್ಮಬೇಕಾಗಿದೆ. ಆದ್ದರಿಂದ ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಪಕ್ಷಭೇದ ಮರೆತು ಜನತೆಗೆ ತಲುಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ಕಾರ್ಯ ಶ್ಲಾಘನೀಯವಾದದ್ದು ಎಂದರು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಕಿಟ್ ವಿತರಿಸಿ, ವಿಕಸಿತ ಭಾರತಕ್ಕೆ ಪಿ.ಎಂ ಯೋಜನೆ ಸಹಕಾರಿಯಾಗಿ ಮುಂದಿನ ೨೦೪೦ರೊಳಗೆ ಭಾರತ ನವ ಭಾರತವಾಗಿ ಮೂಡಿ ಬರಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಕನ್ಯಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಾಲಿಗ್ರಾಮ ಅಂಚೆ ಇಲಾಖಾಧಿಕಾರಿ ಶಂಕರ ಲಂಬಾಣಿ, ಪ.ಪಂ. ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಅನುಸೂಯ ಹೇರ್ಳೆ ಇದ್ದರು. ಫಲಾನುಭವಿಗಳ ಪಟ್ಟಿಯನ್ನು ಸಂಸದರ ಆಪ್ತ ಸಹಾಯಕ ಹರೀಶ್ ಶೆಟ್ಟಿ ವಾಚಿಸಿದರು. ಪಪಂ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಸ್ವಾಗತಿಸಿದರು. ಪಟ್ಟಣ ಪಂಚಾಯಿತಿ ಸಿಬ್ಬಂದಿ ಸುಮಿತ್ರ ನಿರೂಪಿಸಿ ವಂದಿಸಿದರು.