ಕಾಂಗ್ರೆಸ್‌ ಹಿಂದೂ ವಿರೋಧಿ ನೀತಿಗೆ ಪೊಲೀಸ್‌ ತಾಳ: ರೇಣುಕಾಚಾರ್ಯ

| Published : Jun 05 2025, 01:50 AM IST

ಕಾಂಗ್ರೆಸ್‌ ಹಿಂದೂ ವಿರೋಧಿ ನೀತಿಗೆ ಪೊಲೀಸ್‌ ತಾಳ: ರೇಣುಕಾಚಾರ್ಯ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಕಚೇರಿಯಾಗಿ ಮಾಡಿಕೊಂಡಿದ್ದು, ಪೊಲೀಸ್ ಅಧಿಕಾರಿಗಳು ಸಹ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಗೆ ತಾಳ ಹಾಕುತ್ತ, ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.

ಠಾಣೆಗಳೇ ಕಾಂಗ್ರೆಸ್ ಕಚೇರಿ, ಖಾಕಿ ಅಧಿಕಾರಿಗಳೇ ಏಜೆಂಟ್‌ । ಸರ್ಕಾರ ವಿಸರ್ಜಿಸಿದರೆ ಬಿಜೆಪಿಗೆ ಅಧಿಕಾರ

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಕಚೇರಿಯಾಗಿ ಮಾಡಿಕೊಂಡಿದ್ದು, ಪೊಲೀಸ್ ಅಧಿಕಾರಿಗಳು ಸಹ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಗೆ ತಾಳ ಹಾಕುತ್ತ, ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಏಜೆಂಟರಂತೆ ಹಿಂದೂ ವಿರೋಧಿ ನೀತಿಗೆ ತಾಳ ಹಾಕುತ್ತಿರುವ ವರ್ತನೆಯನ್ನು ಪೊಲೀಸ್ ಅಧಿಕಾರಿಗಳು ಮುಂದುವರಿದರೆ ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯ ವಿರುದ್ದವೇ ಜನತೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದರು.

ಕಾಂಗ್ರೆಸ್ ಮುಖಂಡರು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಆರೆಸ್ಸೆಸ್‌ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲ ವಿರುದ್ಧ ಗಡೀಪಾರು ಆದೇಶ ನೀಡುವಂತೆ ಮಾಡಲಾಗಿದೆ. ಹಿಂದು ಸಂಘಟನೆ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯಾದಾಗ ಹತ್ಯೆ ಖಂಡಿಸಿ ಮಾತನಾಡಿದ್ದೇ ಪ್ರಚೋದನಾಕಾರಿ ಎನ್ನುವುದಾದರೆ ಡಿಜೆ ಹಳ್ಳಿ, ಕೆ.ಜೆ. ಹಳ್ಳಿ ಪ್ರಕರಣ ಹಿಂದಿನ ರೂವಾರಿ, ಲೂಟಿಕೋರ ಜಮೀರ್ ಅಹಮ್ಮದ್ ಮತ್ತಿತರ ವಿರುದ್ಧ ಕಾಂಗ್ರೆಸ್ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.

ವಿಧಾನಸೌಧ ಮೊಗಸಾಲೆಯಲ್ಲೇ ಪಾಕಿಸ್ಥಾನದ ಜಿಂದಾಬಾದ್ ಅಂತಾ ಘೋಷಣೆ ಕೂಗಿದವರ ವಿರುದ್ಧ ಯಾವ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆ ಯಾವ ಪ್ರಕರಣ ದಾಖಲಿಸಿದೆ ಎಂದು ಮೊದಲು ಬಹಿರಂಗಪಡಿಸಲಿ. ತನ್ನ ಮತ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡುತ್ತ, ಹಿಂದೂಗಳ ವಿರುದ್ಧವೇ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ಇಂತಹ ಗಂಭೀರ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಲು ಪೂಲೀಸ್ ಇಲಾಖೆ ಮುಂದಾಗಿಲ್ಲ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಡಲು ಕಾರಣರಾದ, ಹಿಂದೂ ಮುಖಂಡರು, ಕಾರ್ಯಕರ್ತರ ಹತ್ಯೆ ತಡೆಯುವಲ್ಲಿ ವಿಫಲರಾದ ಡಾ.ಜಿ.ಪರಮೇಶ್ವರ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಬತ್ತಕ್ಕೆ 2369 ರು. ಬೆಂಬಲ ಬೆಲೆ ಘೋಷಣೆ ಮಾಡಿದೆ. ಉಳಿದ ಬೆಳೆಗಳಿಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಿದೆ. ರಾಜ್ಯ ಸರ್ಕಾರವೂ ಬೆಳೆದ ಬೆಲೆಗಳಿಗೆ ಬೆಂಬಲ ಬೆಲೆ ನೀಡಬೇಕು. ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯಲು ಸಿದ್ಧವಾಗುತ್ತಿರುವ ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ, ಗೊಬ್ಬರ ಪೂರೈಸುವ ಕೆಲಸ ಮಾಡಲಿ. ಬಿತ್ತನೆ ಬೀಜ, ಗೊಬ್ಬರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ನೀರು, ಹಾಲು, ಆಲ್ಕೋಹಾಲ್‌ ಹೀಗೆ ಎಲ್ಲದರ ಮೇಲೂ ತೆರಿಗೆ ವಿಧಿಸುವ ಮೂಲಕ ರಾಜ್ಯದ ಜನರನ್ನು ಕೊಳ್ಳೆ ಹೊಡೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವಾಗ ಅಧಿಕಾರದಿಂದ ಇಳಿಯುತ್ತದೋ ಎಂಬುದನ್ನು ರಾಜ್ಯದ ಜನತೆ ಕಾಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಕನಿಷ್ಠ ಮಾನ, ಮರ್ಯಾದೆ ಇದ್ದರೆ ತಕ್ಷಣ ಮುಖ್ಯಮಂತ್ರಿ ಸರ್ಕಾರವನ್ನು ವಿಸರ್ಜಿಸಿ, ಚುನಾವಣೆಗೆ ಬರಲಿ. ರಾಜ್ಯದಲ್ಲಿ ಬಿಜೆಪಿ ಕನಿಷ್ಠ 150 ಸ್ಥಾನ ಗೆದ್ದು, ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಭವಿಷ್ಯ ನುಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ, ಬಿ.ಎಂ.ಸತೀಶ ಕೊಳೇನಹಳ್ಳಿ, ಎಚ್.ಪಿ.ವಿಶ್ವಾಸ ಇತರರು ಇದ್ದರು.