ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲಾ ಪೊಲೀಸ್ ಗಣೇಶೋತ್ಸವ ಶಾಂತಿಯುತ, ಸೌಹಾರ್ದಯುತವಾಗಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ನಡೆಸಲು ಪೊಲೀಸ್ ಇಲಾಖೆ ಸಂಪೂರ್ಣ ಸನ್ನದ್ಧವಾಗಿದೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಪೊಲೀಸ್ ಗಣೇಶೋತ್ಸವ ಶಾಂತಿಯುತ, ಸೌಹಾರ್ದಯುತವಾಗಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ನಡೆಸಲು ಪೊಲೀಸ್ ಇಲಾಖೆ ಸಂಪೂರ್ಣ ಸನ್ನದ್ಧವಾಗಿದೆ.ಜಿಲ್ಲಾದ್ಯಂತ ಸೆ.14ರಿಂದ ಗೌರಿ-ಗಣೇಶ ಹಬ್ಬ ಆಚರಿಸಲಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ 3,393 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಅವುಗಳಲ್ಲಿ 87 ಅತಿ ಸೂಕ್ಷ್ಮ, 366 ಸೂಕ್ಷ್ಮ ಎಂದು ಗುತುರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ಧಾರ್ಥ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾನೂನು ಸುವ್ಯವಸ್ಥೆ ಬಂದೋಬಸ್ತ್ ಕರ್ತವ್ಯಕ್ಕಾಗಿ ಜಿಲ್ಲೆಯ 1,079 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರೊಂದಿಗೆ 650 ಗೃಹ ರಕ್ಷಕ ಸಿಬ್ಬಂದಿ, 10 ಡಿಎಆರ್ ತುಕುಡಿಗಳು, ಐದು ಕೆಎಸ್ ಆರ್ ಪಿ ತುಕುಡಿಗಳು ಮತ್ತು 350 ಎನ್ಸಿಸಿ ಸ್ವಯಂಸೇವಕರನ್ನು ನಿಯೋಜಿಸಲಾಗಿದೆ.ಗಣೇಶೋತ್ಸವದ ಸಂದರ್ಭದಲ್ಲಿ ಗಣೇಶ ಮಂಡಳಿಯವರು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಎಲ್ಲ ಗಣೇಶ ಮಂಡಳಿಯವರಿಗೆ ಈಗಾಗಲೇ ತಿಳಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಸಮಾಜ ಘಾತುಕ ವ್ಯಕ್ತಿಗಳ ವಿರುದ್ಧ ಮುಂಜಾಗೃತಾ ಕ್ರಮದ ಅಡಿಯಲ್ಲಿ 674 ಜನರ ಮೇಲೆ 264 ಪಿಎಆರ್ ಪ್ರಕರಣಗಳನ್ನು ದಾಖಲಿಸಲಾಗಿದೆ.ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾದ್ಯಂತ 12,282ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 2026ನೇ ಸಾಲಿನಲ್ಲಿ ಹೊಸದಾಗಿ 600 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿರುತ್ತದೆ. ಮೆರವಣಿಗೆ ಮಾರ್ಗಗಳಲ್ಲಿ 2,061 ಸಿಸಿಟಿವಿ ಕ್ಯಾಮೆರಾಗಳನ್ನು ಹೆಚ್ಚವರಿಯಾಗಿ ಅಳವಡಿಸಲಾಗಿರುತ್ತದೆ. ಡ್ರೋಣ್ ಮೂಲಕ ಕಣ್ಣಾವಲು ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.ಗಣೇಶೋತ್ಸವ ಪ್ರಯುಕ್ತ ಜಾಹೀರಾತು ಫಲಕಗಳನ್ನು ತಯಾರಿಸುವವರೊಂದಿಗೆ ಸಭೆ ನಡೆಸಿ ಯಾವುದೇ ರೀತಿಯ ಪ್ರಚೋದನಕಾರಿ ಅಂಶಗಳನ್ನು ಮುದ್ರಿಸದಂತೆ ತಿಳಿವಳಿಕೆ ನೀಡಲಾಗಿರುತ್ತದೆ.ಗಣೇಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ, ಉಪವಿಭಾಗ, ವೃತ್ತ ಹಾಗೂ ಪೊಲೀಸ್ ಠಾಣಾ ಮಟ್ಟದಲ್ಲಿ ಈಗಾಗಲೇ 335 ಶಾಂತಿ ಸಮಿತಿ ಸಭೆಗಳನ್ನು ನಡೆಸಲಾಗಿದೆ. ಗಣೇಶೋತ್ಸವ ಸಮಿತಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರಿಗೆ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸೂಚನೆಗಳನ್ನು ನೀಡಲಾಗಿದ್ದು, ಎಲ್ಲರೂ ಪರಸ್ಪರ ಸಹಕಾರದಿಂದ ಹಬ್ಬ ಆಚರಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.