ಮಾದಕ ವಸ್ತುಗಳ ವಿಮುಕ್ತವಾದ ಸಮಾಜವನ್ನು ನಿರ್ಮಾಣ ಮಾಡುತ್ತೇವೆ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕನ್ನಡಪ್ರಭ ವಾರ್ತೆ ಮೈಸೂರು
ಮಾದಕ ವಸ್ತುಗಳ ವಿಮುಕ್ತವಾದ ಸಮಾಜವನ್ನು ನಿರ್ಮಾಣ ಮಾಡುತ್ತೇವೆ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ನಗರದ ಕರ್ನಾಟಕ ಪೊಲೀಸ್ ಅಕಾಡೆಮಿ (ಕೆಪಿಎ) ಕವಾಯತು ಮೈದಾನದಲ್ಲಿ ಭಾನುವಾರ ಬೆಳಗ್ಗೆ ನಡೆದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ (ಪಿಎಸ್ಐ) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಮಾತನಾಡಿದ ಅವರು, ಇನ್ಸ್ಪೆಕ್ಟರ್, ಎಸ್ಐ ಅವರವರ ಠಾಣಾ ವ್ಯಾಪ್ತಿಯಲ್ಲಿ ಯಾರು ಡ್ರಗ್ಸ್ ತಯಾರು ಮಾಡುತ್ತಾರೆ, ಮಾರಾಟ ಮಾಡುತ್ತಾರೆ, ಎಲ್ಲಿ ಮಾರಾಟ ಮಾಡುತ್ತಾರೆ, ಯಾರಿಗೆ ಕೊಡುತ್ತಾರೆ ಎನ್ನುವಂತಹ ವಿಷಯಗಳು ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಮಾಡುವುರದಲ್ಲಿ ಪೊಲೀಸರು ಜವಾಬ್ದಾರಿ ಬಹಳ ಹೆಚ್ಚಿನದಾಗಿದೆ ಎಂದರು.ಸೈಬರ್ ಅಪರಾಧಗಳನ್ನು ನಿಗ್ರಹಿಸಲು ಸೂಕ್ತ ತರಬೇತಿ ನೀಡಿದ್ದು, ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು. ಬಲಾಢ್ಯರ ಕೈಯಲ್ಲಿ ಯಾವತ್ತೂ ಅಧಿಕಾರ ಇರಬಾರದು. ಬಲಾಢ್ಯರ ಕೈಯಲ್ಲಿ ಅಧಿಕಾರ ಇದ್ದರೆ ಸಮಾನತೆಯ ಸಮಾಜವನ್ನು ನಿರ್ಮಾಣ ಮಾಡುವುದಕ್ಕೆ ಸಾಧ್ಯವಿಲ್ಲ. ಈ ಮಾತುಗಳನ್ನು ಪೊಲೀಸರು ಜ್ಞಾಪಕದಲ್ಲಿ ಇರಿಸಿಕೊಳ್ಳಬೇಕು. ಏಕೆಂದರೆ ಹಣ ಬಲದಿಂದ ಬಲಾಢ್ಯರು, ಶ್ರೀಮಂತರು ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವಂತಹ ಕೆಲಸವನ್ನು ಮಾಡುತ್ತಾರೆ. ಅದರಿಂದ ಶ್ರೀಮಂತರ ಆಸೆಯ ಆಮಿಷಗಳಿಗೆ ಒಳಗಾಗದೇ ಸಮಾಜದಲ್ಲಿ ಸ್ವಾಸ್ಥ್ಯವನ್ನು ಕಾಪಾಡುವ, ಕಾನೂನು ರಕ್ಷಣೆ ಮಾಡುವ ಕೆಲಸವನ್ನು ಧೈರ್ಯದಿಂದ ಮಾಡಬೇಕು. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಧೈರ್ಯ ಇರಬೇಕು. ಧೈರ್ಯ ಪ್ರದರ್ಶನ ಮಾಡುವ ಕೆಲಸ ಮಾಡಿ ಎಂದು ಅವರು ಆಶಿಸಿದರು.
ಪೊಲೀಸರು ಎಷ್ಟೇ ಕಷ್ಟವಾದರೂ ನ್ಯಾಯ ವಿತರಣೆ ಸಮಯದಲ್ಲಿ ನ್ಯಾಯವನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಪೊಲೀಸರು ಸಮಾಜದಲ್ಲಿ ವೈರುಧ್ಯತೆಗಳನ್ನು ಪರಿಗಣಿಸದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ನ್ಯಾಯ ವಿತರಣೆಯೇ ಬಹಳ ಮುಖ್ಯ. ಎಲ್ಲರಿಗೂ ರಕ್ಷಣೆ ಸಿಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಎಂದು ನಮ್ಮ ಸಂವಿಧಾನದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದೆ. ಹೀಗಾಗಿ, ನ್ಯಾಯ ವಿತರಣೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದರು.ಪೊಲೀಸ್ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ ಮುಖ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿದ್ದು, ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಹೀಗಾಗಿ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಅವರು ತಿಳಿಸಿದರು.ಕೆಪಿಎ ಸಿಬ್ಬಂದಿಗೆ₹2 ಲಕ್ಷ ಬಹುಮಾನ:
ಇದೇ ವೇಳೆ ಕರ್ನಾಟಕ ಪೊಲೀಸ್ ಅಕಾಡೆಮಿ ಸಿಬ್ಬಂದಿಗೆ ₹2 ಲಕ್ಷ ಬಹುಮಾನ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿರ್ಗಮನ ಪಥಸಂಚಲನ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದೀರಾ ಎಂದು ಸಿದ್ದರಾಮಯ್ಯ ಶ್ಲಾಘಿಸಿದರು.-ಕೋಟ್-8000 ಎಸ್ಐ ಹುದ್ದೆ ಭರ್ತಿ
327 ಎಸ್ಐಗಳು ಸೇವೆಗೆ ಸೇರ್ಪಡೆಯಾಗುತ್ತಿದ್ದು, ಖಾಲಿಯಿದ್ದ 4911 ಹುದ್ದೆಗಳನ್ನು ಮೂರು ವರ್ಷಗಳಲ್ಲಿ ಭರ್ತಿ ಮಾಡಲಾಗಿದೆ. ಖಾಲಿ ಇರುವ 8000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಅದನ್ನು ಮಾಡಿಯೇ ತೀರುತ್ತೇವೆ.- ಸಿದ್ದರಾಮಯ್ಯ, ಮುಖ್ಯಮಂತ್ರಿ.