ಸಾರಾಂಶ
ಚನ್ನಪಟ್ಟಣ: ಸಮಾಜದ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ಕರ್ತವ್ಯ ಶ್ಲಾಘನೀಯ. ಜೀವದ ಹಂಗು ತೊರೆದು ಶ್ರಮಿಸುವ ಪೊಲೀಸರ ಬಗ್ಗೆ ಸಮಾಜ ಗೌರವ ಭಾವನೆ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಯಶವಂತ ಜಿ.ಗುರುಕರ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಪೊಲೀಸರು ಸುಸ್ಥಿರ ಸಮಾಜದ ಆಧಾರ ಸ್ತಂಭಗಳು. ದೇಶಕ್ಕಾಗಿ ಪ್ರಾಣ ತ್ಯಾಗಮಾಡಿರುವ ಪೊಲೀಸರ ಸ್ಮರಣೆ ನಮ್ಮೆಲ್ಲರ ಕರ್ತವ್ಯ. ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಹುತಾತ್ಮ ಪೊಲೀಸರ ಕುಟುಂಬದವರಿಗೆ ನಮ್ಮ ಇಲಾಖೆಯಲ್ಲಿ ಆಗಬೇಕಾದ ಯಾವುದೇ ಕೆಲಸವಿದ್ದರೂ ತ್ವರಿತವಾಗಿ ಮಾಡಿಕೊಡುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಿದ್ದೇನೆ. ಪೊಲೀಸರ ಸಮಸ್ಯೆಗಳ ನಿವಾವರಣೆಗೆ ಜಿಲ್ಲಾಡಳಿತ ಸಿದ್ಧ ಎಂದರು.ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾತನಾಡಿ, ಪೊಲೀಸ್ ಹುತಾತ್ಮರ ಸ್ಮರಣಾರ್ಥ ದೇಶಾದ್ಯಂತ ಪ್ರತಿ ವರ್ಷ ಅಕ್ಟೋಬರ್ ೨೧ರಂದು ಪೊಲೀಸ್ ಹುತ್ಮಾತರ ದಿನಾಚರಣೆ ಆಚರಿಸಲಾಗುತ್ತಿದೆ. ಈ ವರ್ಷ ದೇಶಕ್ಕಾಗಿ ಕರ್ತವ್ಯದಲ್ಲಿದ್ದು ಹೋರಾಡುತ್ತಾ ವೀರ ಮರಣ ಹೊಂದಿರುವ ೨೧೬ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಸರುಗಳನ್ನು ವಾಚಿಸಿ ಸ್ಮರಿಸಿದರು. ದೇಶ ಹಾಗೂ ಸಮಾಜದ ಆಸ್ತಿ ಪಾಸ್ತಿ ರಕ್ಷಣೆ ಹಾಗೂ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಾಲು ತೋಪು ಹಾರಿಸಿ ಗೌರವ ಅರ್ಪಿಸಲಾಯಿತು.ಸಮಾರಂಭದಲ್ಲಿ ಜಿಪಂ ಸಿಇಒ ದಿಗ್ವಿಜಯ್ ಬೊಡ್ಕೆ, ಎಎಸ್ಪಿ ಸುರೇಶ್, ರಾಮಚಂದ್ರಯ್ಯ, ಡಿವೈಎಸ್ಪಿ ಗಿರಿ, ವೃತ್ತ ನಿರೀಕ್ಷಕರಾದ ರವಿಕಿರಣ್, ಕೃಷ್ಣ, ಜಿಲ್ಲಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಪೊಟೋ೨೨ಸಿಪಿಟಿ೧:ರಾಮನಗರದ ಜಿಲ್ಲಾನಗರದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.