ಕನ್ನಡಪ್ರಭ ವಾರ್ತೆ ಅಥಣಿ

ಪೋಲಿಯೋ ಎಂಬ ಅಂಗವೈಕಲ್ಯ ಉಂಟುಮಾಡುವ ಮಾರಕ ಕಾಯಿಲೆಯನ್ನು ಬುಡಸಮೇತ ಕಿತ್ತೊಗೆಯುವಲ್ಲಿ ಭಾರತವು ವಿಶ್ವಕ್ಕೇ ಮಾದರಿಯಾಗಿದೆ. ಈ ಸಾಧನೆಯನ್ನು ಕಾಯ್ದುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಹೀಗಾಗಿ, ೫ ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು, ಪೋಲಿಯೋ ಮುಕ್ತ ಭಾರತದ ಸಂಕಲ್ಪಕ್ಕೆ ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪೋಲಿಯೋ ಕೇವಲ ವೈದ್ಯಕೀಯ ಚಿಕಿತ್ಸೆಯಲ್ಲ, ಅದು ನಮ್ಮ ಮುಂದಿನ ಪೀಳಿಗೆಗೆ ನಾವು ನೀಡುತ್ತಿರುವ ಸುರಕ್ಷತಾ ಕವಚ. ಒಂದು ಕ್ಷಣದ ನಿರ್ಲಕ್ಷ್ಯ ಮಕ್ಕಳ ಭವಿಷ್ಯದ ಮೇಲೆ ದೀರ್ಘಕಾಲದ ಪರಿಣಾಮ ಬೀರಬಾರದು. ರೋಗಗಳ ನಿರ್ಮೂಲನೆಯಲ್ಲಿ ಜಾಗೃತಿಯೇ ಪ್ರಮುಖ ಅಸ್ತ್ರ. ಪೋಷಕರು ಯಾವುದೇ ಆತಂಕ ಅಥವಾ ಮೂಢನಂಬಿಕೆಗಳಿಗೆ ಒಳಗಾಗದೆ, ಜವಾಬ್ದಾರಿಯುತವಾಗಿ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆತಂದು ಹನಿ ಹಾಕಿಸಬೇಕು.ಅಲ್ಲದೆ, ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಮನೆ ಮನೆಗೆ ತೆರಳಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡಬೇಕೆಂದು ಸಲಹೆ ನೀಡಿದರು.ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಮಾತನಾಡಿ, ಅಥಣಿ ಪಟ್ಟಣ ಸೇರಿ ತಾಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ೨೫೮ ಬೂತ್ ಗಳನ್ನು ಆರಂಭಿಸಲಾಗಿದೆ. ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಅಭಿಯಾನವನ್ನು ಯಶಸ್ವಿಗೊಳಿಸಲು ಸಾಮಾಜಿಕ ಹೊಣೆಗಾರಿಕೆಯಾಗಿ ಸ್ವೀಕರಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಪುರಸಭೆ ಸದಸ್ಯರಾದ ರಾಜು ಗುಡೋಡಗಿ, ಮಲ್ಲೇಶ ಹುದ್ದಾರ, ಭಾರತೀಯ ವೈದ್ಯರ ಸಂಘದ ಅಧ್ಯಕ್ಷ ಡಾ.ಸ್ಮಿತಾ ಚೌಗಲೆ ಸೇರಿದಂತೆ ರೋಟರಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.