ಉತ್ತರ ಕನ್ನಡ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷ, ಹಿರಿಯ ಮುತ್ಸದ್ದಿ ರಮಾನಂದ ನಾಯಕ ಹಿಚ್ಕಡ (78) ಗುರುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಅಂಕೋಲಾ

ಉತ್ತರ ಕನ್ನಡ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷ, ಹಿರಿಯ ಮುತ್ಸದ್ದಿ ರಮಾನಂದ ನಾಯಕ ಹಿಚ್ಕಡ (78) ಗುರುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ರಮಾನಂದ ನಾಯಕ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಒಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಅಜಾತಶತ್ರುವಾಗಿ ರಾಜಕೀಯವಾಗಿ ಎಲ್ಲ ಪಕ್ಷದವರಿಂದ ಗೌರವಕ್ಕೆ ಪಾತ್ರರಾದರು. ದೇಶಭಕ್ತಿ, ನಿಷ್ಠೆ ಮತ್ತು ತ್ಯಾಗದ ವಾತಾವರಣದಲ್ಲಿ ಬೆಳೆಯುವ ಮೂಲಕ ಸಮಾಜಸೇವೆಯ ಮೌಲ್ಯಗಳನ್ನು ಬಾಲ್ಯದಿಂದಲೇ ಅಳವಡಿಸಿಕೊಂಡರು.

ಶಿಕ್ಷಣ, ಆರೋಗ್ಯ, ರಸ್ತೆ, ಕುಡಿಯುವ ನೀರು, ಗ್ರಾಮೀಣ ಉದ್ಯೋಗ ಎಲ್ಲ ಕ್ಷೇತ್ರಗಳಲ್ಲಿಯೂ ವಿಶಿಷ್ಟ ಸೇವೆ ಸಲ್ಲಿಸಿದ ಕೀರ್ತಿ ಸಲ್ಲುತ್ತದೆ. ಉಕ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿದ್ದ ಅಂಕೋಲಾ ಹುಬ್ಬಳ್ಳಿ-ರೈಲು ಮಾರ್ಗದ ಕನಸು ಸಾಕಾರಗೊಳಿಸುವ ಹೋರಾಟಕ್ಕೆ ರಮಾನಂದ ನಾಯಕರು ತಮ್ಮ ಸಂಪೂರ್ಣ ಶಕ್ತಿಯನ್ನು ಸಮರ್ಪಿಸಿದರು.

ಮೃತರಿಗೆ ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವಿದೆ.ಸಂತಾಪ:

ರಮಾನಂದ ನಾಯಕರ ನಿಧನಕ್ಕೆ ಸಚಿವ ಮಂಕಾಳ ವೈದ್ಯ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಆರ್‌.ವಿ. ದೇಶಪಾಂಡೆ, ಶಿವರಾಮ ಹೆಬ್ಬಾರ, ಸತೀಶ ಸೈಲ್, ವಿಧಾನಪರಿಷತ್‌ ಸದಸ್ಯ ಗಣಪತಿ ಉಳ್ವೇಕರ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಪುರಸಭೆ ಮಾಜಿ ಅಧ್ಯಕ್ಷ ಭಾಸ್ಕರ ನಾರ್ವೇಕರ, ಕಾಂಗ್ರೆಸ್ ರಾಜ್ಯ ಪ್ರಮುಖ ಗೋಪಾಲಕೃಷ್ಣ ನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸುಜಾತಾ ಗಾಂವಕರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.ರೂಪಾಲಿ ನಾಯ್ಕ ಸಂತಾಪ:

ಆದರ್ಶ ರಾಜಕಾರಣಿ, ಜನಸೇವಕರಾದ ರಮಾನಂದ ನಾಯಕ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಸಂತಾಪ ವ್ಯಕ್ತಪಡಿಸಿದ್ದಾರೆ.ರಮಾನಂದ ನಾಯಕ ಜಿಲ್ಲಾ ಪರಿಷತ್ ವ್ಯವಸ್ಥೆ ಬಂದ ಆರಂಭದಲ್ಲೆ ಅಧ್ಯಕ್ಷ ಸ್ಥಾನಕ್ಕೇರಿ ಮಾದರಿಯಾಗಿ ಕೆಲಸ ಮಾಡಿದವರು. ಸರಳ, ಸಜ್ಜನರಾಗಿ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಕೊಂಡಿದ್ದರು.ಅದರಲ್ಲೂ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗಕ್ಕಾಗಿ ಸತತ ಹೋರಾಟ ಮಾಡುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದರು. ಅವರನ್ನು ಕಳೆದುಕೊಂಡಿರುವುದು ದುರ್ದೈವದ ಸಂಗತಿಯಾಗಿದ್ದು ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.