ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಂಬರುವ ಗಣೇಶ ಚುತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪಿಒಪಿ ಗಣೇಶಮೂರ್ತಿಗಳ ಹಾವಳಿ ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಹಾಗೂ ಶಾಸಕ ಎಸ್‌.ಸುರೇಶ್‌ ಕುಮಾರ್‌ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಗಣೇಶ ಹಬ್ಬವು ಸಮೀಪಿಸುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮಾರುಕಟ್ಟೆಯಲ್ಲಿ ಪಿಒಪಿ ಗಣೇಶಮೂರ್ತಿಗಳ ಹಾವಳಿ ವಿಪರೀತವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ನಮ್ಮ ಜಲಮೂಲಗಳು ಮತ್ತು ಪರಿಸರ ತೀವ್ರವಾಗಿ ಹಾಳಲಾಗುತ್ತದೆ ಮತ್ತು ಗಣೇಶನ ಮೇಲಿನ ಸಾಂಪ್ರದಾಯಿಕ ಶ್ರದ್ಧೆ ಹಾಗೂ ಪಾವಿತ್ರ್ಯತೆಗೂ ಧಕ್ಕೆಯಾಗುತ್ತಿದೆ. ಕಳೆದ ಜೂ.28ರ ಮನ ಕೀ ಬಾತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವಂತೆ ಹಾಗೂ ಪಿಒಪಿ ಮೂರ್ತಿಗಳನ್ನು ತ್ಯಜಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಜಿಬಿಎಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲ:

ಈ ಗಂಭೀರ ವಿಚಾರದ ಕುರಿತು ಜೂ.29ರಂದು ನಾನು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರಿಗೆ ಪತ್ರ ಬರೆದು ಗಮನಕ್ಕೆ ತಂದಿದ್ದೆ. ಬಳಿಕ ಜು.12ರಂದು ಮತ್ತೊಂದು ನೆನಪೋಲೆ ಕಳುಹಿಸಿದ್ದೆ. ಇದಕ್ಕೆ ಅವರು ಜು.13ರಂದು ಈ ಬಗ್ಗೆ ನನಗೆ ಉತ್ತರ ನೀಡುವುದಾಗಿ ತಿಳಿಸಿದ್ದರು. ಆದರೆ, ಈವರೆಗೂ ಜಿಬಿಎ ಅಥವಾ ಸಂಬಂಧಪಟ್ಟವರಿಂದ ನನಗೆ ಯಾವುದೇ ರೀತಿಯ ಉತ್ತರ ಅಥವಾ ಪ್ರಕ್ರಿಯೆ ಬಂದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಮಧ್ಯಪ್ರವೇಶಿಸಿ, ಕಟ್ಟುನಿಟ್ಟಿನ ಆದೇಶಕ್ಕೆ ಆಗ್ರಹ:

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ. ಹೀಗಾಗಿ ಬೆಂಗಳೂರು ಅಭಿವೃದ್ಧಿ ಸಚಿವರಾದ ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಮಧ್ಯ ಪ್ರವೇಶಿಸಬೇಕು. ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.