ಹೊಸಪೇಟೆ: ಜನಸಂಖ್ಯೆ ನಿಯಂತ್ರಣದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ಲಿಂಗರಾಜು ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದು ಕೇವಲ ಒಂದು ದಿನದ ಕಾರ್ಯಕ್ರಮವಲ್ಲ; ಈ ಅಭಿಯಾನದ ಮೂಲಕ ನಿರಂತರವಾಗಿ ಜನಸಂಖ್ಯಾ ನಿಯಂತ್ರಣ ಹಾಗೂ ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸುರಕ್ಷಿತ ಸಮಯದಲ್ಲಿ ಗರ್ಭಧಾರಣೆ ಹಾಗೂ ಒಂದು ಮಗುವಿನಿಂದ ಮತ್ತೊಂದು ಮಗುವಿನ ಜನನದ ನಡುವೆ ಕನಿಷ್ಠ 3 ವರ್ಷಗಳ ಆರೋಗ್ಯಕರ ಅಂತರ ಕಾಯ್ದುಕೊಳ್ಳುವುದು ತಾಯಿ​ಮಗು ಇಬ್ಬರ ಆರೋಗ್ಯದ ದೃಷ್ಟಿಯಿಂದಲೂ ಅಗತ್ಯವಾಗಿದೆ ಎಂದರು.

ಅನಗತ್ಯ ಗರ್ಭಧಾರಣೆಯನ್ನು ತಡೆಯಲು ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಒಂಕಿ ವ್ಯವಸ್ಥೆ, ಚುಚ್ಚುಮದ್ದು ಹಾಗೂ ಗರ್ಭನಿರೋಧಕ ಮಾತ್ರೆಗಳನ್ನು ಬಳಸಿಕೊಳ್ಳುವ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಬಹುದು. ಕುಟುಂಬ ಯೋಜನೆ ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಲ್ಲ. ಪುರುಷರಲ್ಲೂ ಸುರಕ್ಷಿತ ಸಂತಾನಹರಣ ಚಿಕಿತ್ಸಾ ವಿಧಾನಗಳಿದ್ದು, ಮಹಿಳೆಯರ ಆರೋಗ್ಯದ ಹಿತದೃಷ್ಟಿಯಿಂದ ಪುರುಷರು ಸಹ ಈ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಡಿಎಚ್‌ಒ ಸಲಹೆ ನೀಡಿದರು.

ಅನಗತ್ಯ ಗರ್ಭಧಾರಣೆಯಿಂದ ಭವಿಷ್ಯದಲ್ಲಿ ತಾಯಂದಿರು ಮತ್ತು ಮಕ್ಕಳಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು. ಜನಸಂಖ್ಯೆ ನಿಯಂತ್ರಣದಿಂದ ಮಾತ್ರ ಆರೋಗ್ಯವಂತ ಸಮಾಜ ಮತ್ತು ಭವ್ಯ ಭಾರತದ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.


ಜಾಥಾವು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ (ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣ) ಉದ್ಘಾಟನೆಗೊಂಡು ನಂತರ ಪುಣ್ಯಮೂರ್ತಿ ಸರ್ಕಲ್, ಬಸ್ ನಿಲ್ದಾಣ, ಡಾ.ಪುನೀತ್ ರಾಜಕುಮಾರ್ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಚಲಿಸಿ ದೊಡ್ಡ ಮಸೀದಿ ಮಾರ್ಗದಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸಮಪ್ತಿಗೊಂಡಿತು.

ಈ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜಂಬಯ್ಯ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ವಿನಯ್, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಧಿಕಾ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಭಾಸ್ಕರ್, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನ ಗೌಡ , ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.