ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಜನಸಂಖ್ಯೆಯನ್ನು ನಿಯಂತ್ರಣ ಮಾಡದಿದ್ದರೆ ದೇಶದ ಅಭಿವೃದ್ಧಿಗೆ ಹಿನ್ನಡೆಯಾಗುವುದರ ಜೊತೆಗೆ ಮುಂದಿನ ಪೀಳಿಗೆಗೆ ಮೂಲ ಸೌಕರ್ಯದ ಕೊರತೆ ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಹೇಳಿದರು.ನಗರದ ತಾವರೆಗೆರೆಯ ಎಸ್.ಬಿ.ಸಮುದಾಯ ಭವನದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಮಾತನಾಡಿ, ಜನಸಂಖ್ಯೆ ಬೆಳೆದಂತೆ ಭೂಮಿ ಬೆಳೆಯುವುದಿಲ್ಲ. ಜನಸಂಖ್ಯೆಯ ಪ್ರಮಾಣ ಹೆಚ್ಚುತ್ತಾ ಹೋದಂತೆ ಜನರಿಗೆ ಬದುಕಲು ಭೂಮಿಯ ಮೇಲೆ ಜಾಗ ಕೂಡ ಸಿಗುವುದಿಲ್ಲ ಎಂದು ಹೇಳಿದರು.
ಜನಸಂಖ್ಯೆ ನಿಯಂತ್ರಣಕ್ಕೆ ಹೆಚ್ಚು ಜಗೃತಿ ಕಾರ್ಯಕ್ರಮಗಳನ್ನು ಮಾಡಬೇಕು. ಇದರಿಂದ ಜನರ ಮನಸ್ಸಿಗೂ ಅರಿವು ಮೂಡಿಸಿದಂತಾಗುತ್ತದೆ. ಜೊತೆಗೆ ಎಷ್ಟೋ ಬಾಲ್ಯ ವಿವಾಹಗಳು ಕಡಿಮೆಯಾಗುತ್ತವೆ ಎಂದು ಹೇಳಿದರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಮಾತನಾಡಿ, ಎಷ್ಟೋ ಹೆಣ್ಣುಮಕ್ಕಳು ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ ಇರುತ್ತಾರೆ. ಇದಕ್ಕೆ ಮನೆಯಲ್ಲಿ ಪೋಷಕರು ಸಹಕಾರ ನೀಡಿ ಅವರ ಸಾಧನೆಗೆ ಬೆಂಬಲ ನೀಡಬೇಕು. ಇಲ್ಲವಾದಲ್ಲಿ ಹೆಣ್ಣು ಮಕ್ಕಳ ಜೀವನ ಮದುವೆ, ಸಂಸಾರ ಎಂಬ ಜಂಜಾಟದಲ್ಲಿ ಮುಳುಗಿ ಹೋಗುತ್ತದೆ. ಇದರಿಂದ ಅವರ ಸಾಧನೆಯ ಮಟ್ಟವೂ ಕುಂಠಿತವಾಗುತ್ತದೆ ಮತ್ತು ಅವರ ಮನಸ್ಸಿನ ಮೇಲೂ ಪ್ರಭಾವ ಬೀರುತ್ತದೆ ಎಂದು ಎಚ್ಚರಿಸಿದರು.
ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ವೀಡಿಯೋ ರೀಲ್ಸ್, ಕಿರುಚಿತ್ರ, ಪೋಸ್ಟರ್ ರಚನೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.ಮಿಮ್ಸ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ.ಆರ್.ಗಾಯಿತ್ರಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲೆ ಎಚ್.ಎಂ.ಮಮತಾ, ಜಿಲ್ಲಾ ರೋಗವಾಹಕ ಆಶ್ರಿತರೋಗ ನಿಯಂತ್ರಣಾಧಿಕಾರಿ ಡಾ.ಎನ್.ಕಾಂತರಾಜ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎನ್ ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕುಮಾರ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ.ಕೆ.ಆರ್.ಶಶಿಧರ್, ತಾಲೂಕು ಆರೋಗ್ಯಾಧಿಕಾರಿ ಜವರೇಗೌಡ, ಕೆ.ಬಿ, ಸಮುದಾಯ ವೈದ್ಯ ಶಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ.ವಿನಯ್ ಇತರರಿದ್ದರು.