ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಿದರೆ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಅತಿ ಮುಖ್ಯ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದ್ದಾರೆ.

ಮಡಿಕೇರಿ: ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಿದರೆ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಅತಿ ಮುಖ್ಯ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದ್ದಾರೆ. ಕನ್ನಡಸಿರಿ ಸ್ನೇಹ ಬಳಗ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯಸ್ಥರಿಗೆ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಸಾಧನಸಿರಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಓದುವತ್ತ ಪ್ರೋತ್ಸಾಹಿಸಬೇಕು ಮತ್ತು ಉತ್ತೇಜನ ನೀಡಬೇಕು. ಅದನ್ನು ಬಿಟ್ಟು ಕುಗ್ಗಿಸುವ ಕೆಲಸ ಮಾಡಬಾರದು. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಹಿಂಸೆಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ಶಿಕ್ಷಕರು ಧನಾತ್ಮಕವಾಗಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಸಲಹೆ ಮಾಡಿದರು.

ಸಾಧಾರಣ ವಿದ್ಯಾರ್ಥಿಗಳನ್ನು ಇನ್ನಷ್ಟು ಪ್ರಗತಿಯತ್ತ ಕೊಂಡೊಯ್ಯಲು ಮಾನಿಟರಿಂಗ್ ಅಂಡ್ ಮೋಟಿವೇಷನ್ ಶಿಕ್ಷಣ ಮಾರ್ಗದರ್ಶಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಮಾತನಾಡಿ, ಜಿಲ್ಲೆಯಲ್ಲಿ 103 ಶಾಲೆಗಳು ಶೇ. 100ರಷ್ಟು ಫಲಿತಾಂಶ ಪಡೆದಿರುವುದು ವಿಶೇಷವಾಗಿದ್ದು, 103ರಲ್ಲಿ ಸರ್ಕಾರಿ ಪ್ರೌಢ ಶಾಲೆಗಳು 38, ಅನುದಾನಿತ 11, ಅನುದಾನ ರಹಿತ 37 ಹಾಗೂ ವಸತಿ ಶಾಲೆಗಳು 17 ಸೇರಿ 103 ಶಾಲೆಗಳಲ್ಲಿ ಶೇ. 100ರಷ್ಟು ಫಲಿತಾಂಶ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರಿಗೆ ಬೆನ್ನು ತಟ್ಟುವ ಕೆಲಸ ಮಾಡಲಾಗುತ್ತಿದೆ. ಕನ್ನಡ ಭಾಷೆಗೆ ಆದ್ಯತೆ ನೀಡಿ ಶೇ. 100ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಇಂತಹ ಶಾಲೆಗಳಿಗೆ ಗ್ರಂಥಾಲಯ ಬಳಸಿಕೊಳ್ಳಲು ಅನುಕೂಲ ಮಾಡಲಾಗುತ್ತಿದೆ. ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಜಿಲ್ಲೆಯಲ್ಲಿ ಇನ್ನಷ್ಟು ಫಲಿತಾಂಶ ಉತ್ತಮಗೊಳ್ಳಬೇಕು. ಜೊತೆಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು ಎಂದರು.

ಕುಶಾಲನಗರ ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಎಂ.ಡಿ. ರಂಗಸ್ವಾಮಿ ಮಾತನಾಡಿದರು. ಡಯಟ್ ಉಪ ನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್, ಎಂ. ಕೃಷ್ಣಪ್ಪ, ಟಿ.ಜೆ. ಅನಂದ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಜಿ. ಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರವಿ ಕೃಷ್ಣ, ಟಿ.ಆರ್. ರತ್ನಕುಮಾರ್, ಡಿ. ಚಂದನ ಮತ್ತಿತರರು ಇದ್ದರು.

ಕಸಾಪ ಮಾಜಿ ಅಧ್ಯಕ್ಷರಾದ ಕುಡೆಕಲ್ ಸಂತೋಷ್, ಮೂರ್ನಾಡು ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್, ಮೊಣ್ಣಂಡ ಶೋಭ ಸುಬ್ಬಯ್ಯ ಇತರರು ಇದ್ದರು. ಸಾಹಿತಿ ಉ.ರಾ. ನಾಗೇಶ್ ನಿರೂಪಿಸಿದರು. ಶಿಕ್ಷಕಿ ಉಷಾರಾಣಿ ಸ್ವಾಗತಿಸಿದರು. ಕುಮಾರ್ ವಂದಿಸಿದರು.