ಸಾರಾಂಶ
ಕೆಲ ವಸ್ತುಗಳ ಮೇಲಿನ ಜಿಎಸ್ಟಿ ಕಡಿತ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ಇದರಿಂದ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲ ರಾಜ್ಯ ಸರ್ಕಾರಗಳು ಆರ್ಥಿಕ ಮುಗ್ಗಟ್ಟಿಗೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ ರಾಜ್ಯ ಸರ್ಕಾರಗಳಿಗೆ ಕಡಿಮೆಯಾಗುವ ಹಣವನ್ನು ಕೇಂದ್ರ ಸರ್ಕಾರ ಭರಿಸಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ, ತುಮಕೂರು
ಕೆಲ ವಸ್ತುಗಳ ಮೇಲಿನ ಜಿಎಸ್ಟಿ ಕಡಿತ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ಇದರಿಂದ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲ ರಾಜ್ಯ ಸರ್ಕಾರಗಳು ಆರ್ಥಿಕ ಮುಗ್ಗಟ್ಟಿಗೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ ರಾಜ್ಯ ಸರ್ಕಾರಗಳಿಗೆ ಕಡಿಮೆಯಾಗುವ ಹಣವನ್ನು ಕೇಂದ್ರ ಸರ್ಕಾರ ಭರಿಸಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಒತ್ತಾಯಿಸಿದರು.ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶೇ. 28 ಇದ್ದ ಜಿಎಸ್ಟಿಯನ್ನು ಶೇ 18ಕ್ಕೆ, ಹಾಗೆಯೇ ಶೇ. 18 ರಿಂದ ಶೇ. 5ಕ್ಕೆ ಜಿಎಸ್ಟಿಯನ್ನು ಇಳಿಕೆ ಮಾಡಿದೆ. ಇದು ಜನಸಾಮಾನ್ಯರ ಹಿತದೃಷ್ಠಿಯಿಂದ ಒಳ್ಳೆಯದು ಹಾಗಾಗಿ ನಾನು ಸ್ವಾಗತ ಮಾಡುತ್ತೇನೆ. ಆದರೆ ಜಿಎಸ್ಟಿ ಕಡಿಮೆ ಮಾಡಿರುವುದರಿಂದ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಬರಬೇಕಾಗಿರುವ ಜಿಎಸ್ಟಿ ಪಾಲು ಕಡಿಮೆಯಾಗುತ್ತದೆ. ಇದರಿಂದ ರಾಜ್ಯ ಸರ್ಕಾರಗಳು ಆರ್ಥಿಕ ಮುಗ್ಗಟ್ಟಿಗೆ ಸಿಲುಕುವ ಸಾಧ್ಯತೆಯಿದೆ. ಹಾಗಾಗಿ ಕೇಂದ್ರ ಸರ್ಕಾರ ಜಿಎಸ್ಟಿ ಪಾಲಿನಲ್ಲಿ ಕಡಿಮೆಯಾಗುವ ಹಣವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಈ ಹಿಂದೆ ರೈತರ 50 ಸಾವಿರ ಹಾಗೂ 1 ಲಕ್ಷ ರೂ. ವರೆಗಿನ ಸಾಲನ್ನು ಮನ್ನಾ ಮಾಡಲಾಗಿತ್ತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುಮಾರು 44 ಸಾವಿರ ರೈತರ 1 ಲಕ್ಷ ರು.ನಂತೆ ೨೫೨ ಕೋಟಿ ರು. ಸಾಲ ಮನ್ನಾ ಮಾಡಲಾಗಿತ್ತು. ಇನ್ನು ಅನೇಕ ರೈತರ ಖಾತೆಗಳಿಗೆ ಸಾಲ ಮನ್ನಾದ ಹಣ ಜಮಾ ಆಗಿಲ್ಲ. ಕೂಡಲೇ ಈ ಹಣವನ್ನು ಸರ್ಕಾರ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.ಅಭಿನಂದನೆ.....
ತುಮಕೂರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ನ ಮುಂದಿನ 5 ವರ್ಷಗಳ ಅವಧಿಗೆ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ನನ್ನನ್ನು ಅಧ್ಯಕ್ಷರಾಗಿ, ಉಪಾಧ್ಯಕ್ಷರನ್ನಾಗಿ ಜಿ.ಜೆ. ರಾಜಣ್ಣರವರನ್ನು ಆಡಳಿತ ಮಂಡಳಿಯ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಈ ಮೂಲಕ ಮುಂದಿನ 5 ವರ್ಷಗಳ ಅವಧಿಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜವಾಬ್ದಾರಿಯನ್ನು ನಿರ್ವಹಿಸುವ ಅಧಿಕಾರವನ್ನು ನನಗೆ ನೀಡಿದ್ದಾರೆ ಎಂದ ಅವರು, ನಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದ ಬ್ಯಾಂಕ್ನ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರುಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ರೈತರಿಗೆ ಸ್ವಾಭಿಮಾನ ಬದುಕು ಬ್ಯಾಂಕ್ ಧ್ಯೇಯ.....ನಮ್ಮ ಜಿಲ್ಲೆಯ ರೈತಾಪಿ ಜನರು, ಧ್ವನಿ ಇಲ್ಲದ ಜನರಿಗೆ ಹಣಕಾಸಿನ ಸಾಲ ಸೌಲಭ್ಯವನ್ನು ಕೊಟ್ಟು ಅವರು ಕೂಡಾ ಸ್ವಾಭಿಮಾನದ ಬದುಕನ್ನು ಕಟ್ಟಿಕೊಂಡು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಎಲ್ಲಿಯವರೆಗೆ ರೈತಾಪಿ ವರ್ಗ ಆರ್ಥಿಕವಾಗಿ ಸದೃಢರಾಗುವುದಿಲ್ಲವೋ ಅಲ್ಲಿಯವರೆಗೆ ದೇಶವೂ ಕೂಡ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದರು. ನಬಾರ್ಡ್ನಿಂದ 2300 ಕೋಟಿಯಷ್ಟು ಹಣ ಬರುತ್ತಿದೆ. ನಬಾರ್ಡ್ನಿಂದ ಬರುವ ಸಂಪನ್ಮೂಲ ಕಡಿಮೆಯಾಗಿದ್ದರೂ ಸಹ ಸಾರ್ವಜನಿಕರಿಂದ ಹೆಚ್ಚಿನ ಠೇವಣಿ ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ. ರೈತರು ಹೆಚ್ಚು ಹೆಚ್ಚು ನಮ್ಮ ಬ್ಯಾಂಕ್ನಲ್ಲಿ ಖಾತೆ ಹೊಂದಿ, ಠೇವಣಿ ಇಡಲು ಸಹ ಉತ್ತೇಜಿಸಲಾಗುತ್ತಿದೆ ಎಂದು ಅವರು ಹೇಳಿದರು. ರೈತರಿಗೆ ಅಗತ್ಯಕ್ಕೆ ತಕ್ಕಂತೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನಿಡಲಾಗುತ್ತಿದೆ ಎಂದು ಅವರು ತಿಳಿಸಿದರು.