ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರಿನ ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ ನಡೆಯಿತು.
ಕುಶಾಲನಗರ: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರಿನ ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ ನಡೆಯಿತು.
ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತದೆ. ಜಿಲ್ಲಾಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಪ್ರತಿ ಹಂತದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕರ್ತರ ವ್ಯಕ್ತಿತ್ವ ರೂಪಿಸಲು, ಶಿಸ್ತು ಮೂಡಿಸಲು ಸಹಕಾರಿಯಾಗಲಿದೆ. ನಿರ್ದಿಷ್ಟ ಗುರಿ ಹೊಂದಿರುವ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ ಎಂದರು.ಕೇವಲ ಅಧಿಕಾರ ಗಳಿಸುವುದು ಮಾತ್ರ ನಮ್ಮ ಉದ್ದೇಶವಲ್ಲ. ಉತ್ತಮ ಸೇವೆ ಸಲ್ಲಿಸಲು ಅಧಿಕಾರ ನಮಗೆ ಒಂದು ಸಾಧನವಷ್ಟೆ. ಪಕ್ಷದ ಮೂಲ ತತ್ವ ಸಿದ್ದಾಂತ, ಪರಂಪರೆಯನ್ನು ಇಂದಿನ ಆಧುನಿಕ ಕಾಲಘಟ್ಟದ ಕಾರ್ಯಕರ್ತರಿಗೆ ಸ್ಮರಿಸಿ ಪಕ್ಷದೊಳಗೆ ಯಾವ ರೀತಿ ಕಾರ್ಯನಿರ್ವಹಿಸಬೇಕು, ಜನರಿಗೆ ಹೇಗೆ ಸೇವೆ ಸಲ್ಲಿಸಬೇಕು ಎಂಬುದನ್ನು ತಿಳಿಸಲು ಪ್ರಶಿಕ್ಷಣ ಕಾರ್ಯಕ್ರಮದ ಮೂಲಕ ಸಾಧ್ಯ ಎಂದರು.ಇಂದಿನ ರಾಜ್ಯ ಸರಕಾರ ಕುರ್ಚಿ ಕಿತ್ತಾಟದಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಮರೆತಿದೆ. ಈ ಸರ್ಕಾರಕ್ಕೆ ಪರ್ಯಾಯವಾಗಿ ಜನ ಸೇವೆಗೆ ಬಿಜೆಪಿ ಅನಿವಾರ್ಯ ಎಂಬ ಜನಾಭಿಪ್ರಾಯ ಹೊರಹೊಮ್ಮಬೇಕಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮವಹಿಸಿ ಕಾರ್ಯನಿರ್ವಹಿಸೋಣ. ಜಿಲ್ಲೆಯಲ್ಲಿ ಕೂಡ ಮತ್ತೆ ಬಿಜೆಪಿ ವೈಭವ ಮರುಕಳಿಸುವಂತಾಗಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಮಾಜಿ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಬೇರೆ ಪಕ್ಷಗಳಿಂತೆ ಬಿಜೆಪಿ ಪಕ್ಷಕ್ಕೆ ಮಾಲೀಕರಿಲ್ಲ. ಬಿಜೆಪಿಯಲ್ಲಿ ಕಾರ್ಯಕರ್ತರೇ ಪಕ್ಷದ ಮಾಲೀಕರು. ಕಾರ್ಯಕರ್ತರನ್ನೇ ನಾಯಕನ್ನಾಗಿ ಬೆಳೆಸುವ ವ್ಯವಸ್ಥೆಯನ್ನು ನಂಬಿರುವ ರಾಜಕೀಯ ಪಕ್ಷ. ಕಾರ್ಯಕರ್ತರು ಎಷ್ಟೇ ಹಿರಿಯರಾದರೂ, ಅನುಭವಿಗಳಾದರೂ ಕೂಡ ಕಾಲಕಾಲಕ್ಕೆ ಅವರನ್ನು ಮತ್ತಷ್ಟು ಹುರಿಗೊಳಿಸುವ ಅಗತ್ಯವಿದೆ. ಅದರ ಅಂಗವಾಗಿ ಈ ಪ್ರಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇಲ್ಲಿ ಔಪಚಾರಿಕವಾಗಿ, ಅನೌಪಚಾರಿಕವಾಗಿ ಹಲವು ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯವಿದೆ. ವೈಯಕ್ತಿಕ ಅಭ್ಯಾಸಗಳನ್ನು, ವ್ಯಕ್ತಿಗತ ಸ್ವಭಾವಗಳನ್ನು ಪಕ್ಷದ ನೆಲೆಗಟ್ಟಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಪ್ರಶಿಕ್ಷಣ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಕೊಡಗು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಬಿ.ಬಿ. ಭಾರತೀಶ್, ಕಾರ್ಯಕ್ರಮ ಸಂಯೋಜಕರಾದ ಮನು ಮುತ್ತಪ್ಪ, ಮೈಸೂರು ವಿಭಾಗದ ಸಂಯೋಜಕ ರಾಜೇಶ್, ಪ್ರಮುಖರಾದ ಸ್ವಾಮಿ, ಫಣೀಶ್, ಕಾರ್ಯಾಗಾರದ ಪ್ರಬಂಧಕರಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ರಕ್ಷಿತ್ ಮಾವಜಿ, ಸುಮನ್ ಗೌಡ, ಪ್ರವೀಣ್ ಮಲ್ಲಜಿರ, ನವನೀತ್ ಪೊನ್ನೆಟ್ಟಿ, ರಾಮನಾಥನ್ ಮತ್ತಿತರರು ಇದ್ದರು.