ಬಂಟ್ವಾಳ: ವ್ಯಕ್ತಿ ತನಗೆ ಸಿಕ್ಕಿದ ಅವಕಾಶವನ್ನು ಜವಾಬ್ದಾರಿ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿಕೊಂಡು, ಪರಿಶುದ್ಧ ಮಾತುಗಳ ಮೂಲಕ ಸಮಾಜದೊಂದಿಗೆ ಬೆರೆತಾಗ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ.ಸಿದ್ದಕಟ್ಟೆ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ನಡೆದ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಕುಂಭಶ್ರೀ ಪದವಿ ಪೂರ್ವ ಕಾಲೇಜು ವೇಣೂರಿನ ಪ್ರಾಂಶುಪಾಲ ಶ್ರೀನಿವಾಸ ನಾಯ್ಕ ರವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶ್ರಮಪಟ್ಟು ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದರು.ಪ್ರಾಂಶುಪಾಲ ಉದಯಕುಮಾರ್ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಅರ್ಥಶಾಸ್ತ್ರ ಉಪನ್ಯಾಸಕ ಭಾಸ್ಕರ ಎಂ. ಸ್ವಾಗತಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕಿ ರೇಖಾ ಬಾಳಿಗಾ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ಸಂಜಯ್ ಬಿ.ಎಸ್. ನಿರೂಪಿಸಿ, ವಂದಿಸಿದರು.