ನೀಟ್ ಪರೀಕ್ಷಾ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಮುದಾಯ, ಕಾಂಗ್ರೆಸ್‌ ಹಾಗೂ ಪ್ರಗತಿಪರ ಸಂಘಟನೆಗಳು ರಾಜ್ಯಾದ್ಯಂತ ವಿಜಯೋತ್ಸವ ಹಾಗೂ ಸಂಭ್ರಮಾಚರಣೆ ಆಚರಿಸಿದವು.

ಕನ್ನಡಪ್ರಭ ವಾರ್ತೆ, ಬೆಂಗಳೂರು

ನೀಟ್ ಪರೀಕ್ಷಾ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಮುದಾಯ, ಕಾಂಗ್ರೆಸ್‌ ಹಾಗೂ ಪ್ರಗತಿಪರ ಸಂಘಟನೆಗಳು ರಾಜ್ಯಾದ್ಯಂತ ವಿಜಯೋತ್ಸವ ಹಾಗೂ ಸಂಭ್ರಮಾಚರಣೆ ಆಚರಿಸಿದವು.

ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ನೂರಾರು ಪ್ರತಿಭಟನಾನಿರತ ವಿದ್ಯಾರ್ಥಿಗಳು ವಂದೇ ಮಾತರಂ, ರಾಷ್ಟ್ರಗೀತೆ ಹಾಡಿ ಸಂಭ್ರಮಾಚರಣೆ ನಡೆಸಿದರು. ಮೆಲೋಡಿ ಚಾಕೊಲೇಟ್ ಹಂಚುವ ಮೂಲಕ ಸಂವಿಧಾನಕ್ಕೆ ಸಿಕ್ಕ ಗೆಲುವು ಎಂದು ಸಂಭ್ರಮಪಟ್ಟರು.

ಶಿವಮೊಗ್ಗದಲ್ಲಿ ಶನಿವಾರ ಸಂಜೆ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಕೊಪ್ಪಳದ ಅಶೋಕ ಸರ್ಕಲ್‌ನಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಮರೇಗೌಡ ಭಯ್ಯಾಪುರ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಪಟಾಕಿ ಸಿಡಿಸಿ, ಸಂಭ್ರಮಿಸಲಾಯಿತು. ಬೆಳಗಾವಿಯಲ್ಲಿ ಚೆನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಸಂಭ್ರಮಾಚರಣೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ರಾಹುಲ್‌ ಗಾಂಧಿ ಪರ ಘೋಷಣೆ ಕೂಗಿದರು. ಇದೇ ವೇಳೆ, ರಾಜ್ಯದ ಇತರೆಡೆಯೂ ಸಂಭ್ರಮಾಚರಣೆಗಳು ನಡೆದ ಬಗ್ಗೆ ವರದಿಯಾಗಿದೆ.

ಇದು ಕೇವಲ ಸಚಿವರ ರಾಜೀನಾಮೆಯಲ್ಲ, ಸತ್ಯಕ್ಕೆ ಸಂದ ಜಯ ಎಂದು ಹರ್ಷೋದ್ಘಾರ ಮಾಡಿದರು. ಇಡೀ ಪರಿಸರವು ''''''''ಜೈ ಹಿಂದ್'''''''', ವಿದ್ಯಾರ್ಥಿಗಳ ಒಗ್ಗಟ್ಟಿಗೆ ಜಯವಾಗಲಿ'''''''' ಎಂಬ ಘೋಷಣೆಗಳಿಂದ ಮಾರ್ದನಿಸಿತು. ಸಂಭ್ರಮಾಚರಣೆಯಲ್ಲಿ ಅಂಬೇಡ್ಕರ್, ಗಾಂಧಿ, ಭಗತ್ ಸಿಂಗ್, ಸುಭಾಷ್ ಚಂದ್ರ ಭೋಸ್, ಸಾವಿತ್ರಿ ಬಾಯಿಫುಲೆ ಸೇರಿದಂತೆ ಮಹಾತ್ಮರ ಭಾವಚಿತ್ರಗಳು ರಾರಾಜಿಸಿದವು. ಪ್ರತಿಭಟನೆಯಲ್ಲಿ ಎಐಎಸ್‌ಎಫ್, ಎಸ್‌ಎಫ್‌ಐ, ಎಐಡಿಎಸ್‌ಒ, ಎಐಎಸ್‌ಎ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ವೇಳೆ, ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಧರ್ಮೇಂದ್ರ ಪ್ರಧಾನ್‌ಗೆ ಧಿಕ್ಕಾರ ಕೂಗಿ, ವಿದ್ಯಾರ್ಥಿಗಳ ಹೋರಾಟಕ್ಕೆ ಜೈಕಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.