ಧಾರವಾಡ ಗ್ರಾಮೀಣದಲ್ಲಿ ಪ್ರಹ್ಲಾದ ಜೋಶಿ ಪ್ರಚಾರ

| Published : Apr 25 2024, 01:04 AM IST

ಸಾರಾಂಶ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ, ಬಡಜನರ, ದಿನದಲಿತರ ಎಲ್ಲ ಸೌಲಭ್ಯಗಳನ್ನು ಕಿತ್ತುಕೊಂಡು ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಧಾರವಾಡ:

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬುಧವಾರ ತಾಲೂಕಿನ ತಿಮ್ಮಾಪುರ, ಕರಡಿಗುಡ್ಡ ಹಾಗೂ ಪುಡಕಲಕಟ್ಟಿ ಗ್ರಾಮದಲ್ಲಿ ಅಬ್ಬರದ ಪ್ರಚಾರ ನಡೆಸಿದರು.ಬಿಸಿಲ ಬೇಗೆಯ ಮಧ್ಯೆಯೂ ಹುಮ್ಮಸ್ಸಿನಿಂದ ಪ್ರಚಾರದಲ್ಲಿ ಭಾಗವಹಿಸಿದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜೋಶಿ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡು ಅಬ್ಬರದ ಪ್ರಚಾರ ನಡೆಸಿದರು. ತಾಲೂಕಿನ ತಿಮ್ಮಾಪುರ ಗ್ರಾಮದ ಹನುಮಂತ ದೇವರ ದೇವಸ್ಥಾನದ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗ್ರಾಮದಲ್ಲಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಜೋಶಿ, ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ, ಬಡಜನರ, ದಿನದಲಿತರ ಎಲ್ಲ ಸೌಲಭ್ಯಗಳನ್ನು ಕಿತ್ತುಕೊಂಡು ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ವಾಮ ಮಾರ್ಗದಲ್ಲಿ ರಾಜ್ಯ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ ಎಂದು ಕುಟುಕಿದರು.

ಪ್ರಚಾರದಲ್ಲಿ ಮಾಜಿ ಶಾಸಕರಾದ ಅಮೃತ ದೇಸಾಯಿ, ಸೀಮಾ ಮಸೂತಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಜೆಡಿಎಸ್ ರೈತ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿದಂತೆ ಹಲವರು ಇದ್ದರು.

ಜೋಶಿ ಪರ ಮತಯಾಚನೆ

ಹು-ಧಾ ಮಹಾನಗರ ಪಾಲಿಕೆಯ 41ನೇ ವಾರ್ಡಿನಲ್ಲಿರುವ ವಿಶ್ವೇಶ್ವರ ನಗರ ಹಾಗೂ ಆದರ್ಶ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ಸೇರಿದಂತೆ ಹಲವರು ಮತಯಾಚಿಸಿದರು.ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಪ್ರಹ್ಲಾದ ಜೋಶಿ ಅವರು ಕೇಂದ್ರದಿಂದ ಹೆಚ್ಚಿನ ಅನುದಾನ ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವವೇ ಮೆಚ್ಚುವ ಹಾಗೆ ಭಾರತವನ್ನು ಮುನ್ನಡೆಯುವಂತೆ ಮಾಡಿದ್ದಾರೆ. ಮತ್ತೊಮ್ಮೆ ಮೋದಿ ಪ್ರಧಾನಿಯನ್ನಾಗಿಸಲು ಪ್ರತಿಯೊಬ್ಬರೂ ಪ್ರಹ್ಲಾದ ಜೋಶಿ ಅವರಿಗೆ ಮತ ನೀಡಿ ಮತ್ತೊಮ್ಮೆ ಗೆಲ್ಲಿಸುವಂತೆ ಮನವಿ ಮಾಡಿದರು.ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ವೀರಣ್ಣ ಸವಡಿ, ಟಿ.ಎಂ. ಮೆಹರವಾಡೆ ಸೇರಿದಂತೆ ವಾರ್ಡಿನ ಪ್ರಮುಖರು, ಕಾರ್ಯಕರ್ತರು ಇದ್ದರು.