ಸರ್ಕಾರಿ ಆಡಳಿತವೇ ಜನರ ಬಾಗಿಲಿಗೆ ಹೋಗಿ ಸಮಸ್ಯೆ ಪರಿಹರಿಸಬೇಕೆಂಬ ಉದ್ದೇಶದಿಂದ ಸಿಎಂ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿ ಚಿಂತನೆಯೊಂದಿಗೆ ಪ್ರತಿ ಶನಿವಾರ ಈ ಕಾರ್ಯಕ್ರಮ ನಡೆಯಲಿದೆ. ಸೇವೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಪ್ರಜಾಸೇವೆ ಆಂದೋಲನವು ಸಾರ್ವಜನಿಕರ ಹಾಗೂ ಆಡಳಿತಾತ್ಮಕ ಸಮಸ್ಯೆ ಪರಿಹರಿಸಲು ಸಹಕಾರಿಯಾಗಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ದೂರು ಮುಕ್ತ ತಾಲೂಕನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಸಿ.ಎ.ಕೆರೆ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ತಮ್ಮ ಸಮಸ್ಯೆಗಳಿಗಾಗಿ ಅರ್ಜಿಗಳನ್ನು ಹಿಡಿದು ಕಚೇರಿಗಳಿಗೆ ಅಲೆದಾಡಬಾರದು ಎಂಬ ಹಿನ್ನೆಲೆಯಲ್ಲಿ ಪ್ರಜಾ ಸೇವೆ ಆರಂಭಿಸಿದ್ದೇವೆ ಎಂದರು.
ಸರ್ಕಾರಿ ಆಡಳಿತವೇ ಜನರ ಬಾಗಿಲಿಗೆ ಹೋಗಿ ಸಮಸ್ಯೆ ಪರಿಹರಿಸಬೇಕೆಂಬ ಉದ್ದೇಶದಿಂದ ಸಿಎಂ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿ ಚಿಂತನೆಯೊಂದಿಗೆ ಪ್ರತಿ ಶನಿವಾರ ಈ ಕಾರ್ಯಕ್ರಮ ನಡೆಯಲಿದೆ ಎಂದರು.ರಾಜ್ಯ, ಜಿಲ್ಲಾ ಮಟ್ಟದಲ್ಲಿ ಸಚಿವರು, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆದು ಎಲ್ಲಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ನೀಡುವ ಸಮಸ್ಯೆಗಳ ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಮಾಡಲಿದ್ದಾರೆ ಎಂದರು.
ಸಭೆಯಲ್ಲಿ ಸ್ಥಳದಲ್ಲೇ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಇತ್ಯರ್ಥಗೊಳ್ಳದ ಅರ್ಜಿದಾರರಿಗೆ ಪಾರದರ್ಶಕವಾಗಿ ವರದಿ ನೀಡಬೇಕು. ಅರ್ಜಿಗಳ ಸಮಸ್ಯೆಗಳನ್ನು ಬಗೆಹರಿಸಲು ವಿಳಂಬವಾದರೇ ಅಧಿಕಾರಿಗಳೇ ಹೊಣೆಗಾರರು. ಸೇವೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಅರ್ಜಿಗಳು ಸಭೆಯಲ್ಲಿ ಸ್ವೀಕೃತಗೊಂಡವು. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಲಾಯಿತು.
ಸಭೆಯಲ್ಲಿ ಮನ್ಮುಲ್ ನಿರ್ದೇಶಕ ಎ.ಎಸ್.ರಾಜೀವ್, ತಾಲೂಕು ಗ್ಯಾರಂಟಿ ಅಧ್ಯಕ್ಷ ಬಿ. ಬಸವರಾಜು, ತಹಸೀಲ್ದಾರ್ ಪರಶುರಾಮ್ ಸತ್ತೀಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್, ತಾಲೂಕು ವೈದ್ಯಾಧಿಕಾರಿ ರವಿ ಶಂಕರ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.