ಕೊಡಗಿನ ಆರಾಧ್ಯ ದೈವ ಶ್ರೀ ಪಾಡಿಗುತ್ತಪ್ಪ ದೇವಸ್ಥಾನದ ಸನ್ನಿಹಿತದಲ್ಲಿರುವ ಮಲ್ಮ ಬೆಟ್ಟಕ್ಕೆ ಹೊಂದಿಕೊಂಡಿರುವ ಸುಮಾರು ಎಪ್ಪತ್ತು ಎಕರೆ ಕೃಷಿ ಭೂಮಿಯನ್ನು ಖರೀದಿಸಿರುವ ವ್ಯಕ್ತಿಯೊಬ್ಬರು ಇದೀಗ ಅದನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಲು ಮುಂದಾಗಿರುವುದು ವಿಷಾದನೀಯ ಸಂಗತಿಯಾಗಿದೆ. ಈ ಬಗ್ಗೆ ಗ್ರಾಮಸ್ಥರು ಸಭೆ ಸೇರಿ ಬೃಹತ್ ಹೋರಾಟಕ್ಕೆ ಮುಂದಾಗಿದ್ದು, ತನ್ನ ಸಂಪೂರ್ಣ ಸಹಮತ ಮತ್ತು ಬೆಂಬಲ ವ್ಯಕ್ತಪಡಿಸುತ್ತೇನೆ ಎಂದು ಸಮಾಜ ಸೇವಕ ಎಡಿಕೇರಿ ಪ್ರಸನ್ನ ಹೇಳಿದ್ದಾರೆ.

ಮಡಿಕೇರಿ: ಕೊಡಗಿನ ಆರಾಧ್ಯ ದೈವ ಶ್ರೀ ಪಾಡಿಗುತ್ತಪ್ಪ ದೇವಸ್ಥಾನದ ಸನ್ನಿಹಿತದಲ್ಲಿರುವ ಮಲ್ಮ ಬೆಟ್ಟಕ್ಕೆ ಹೊಂದಿಕೊಂಡಿರುವ ಸುಮಾರು ಎಪ್ಪತ್ತು ಎಕರೆ ಕೃಷಿ ಭೂಮಿಯನ್ನು ಖರೀದಿಸಿರುವ ವ್ಯಕ್ತಿಯೊಬ್ಬರು ಇದೀಗ ಅದನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಲು ಮುಂದಾಗಿರುವುದು ವಿಷಾದನೀಯ ಸಂಗತಿಯಾಗಿದೆ. ಈ ಬಗ್ಗೆ ಗ್ರಾಮಸ್ಥರು ಸಭೆ ಸೇರಿ ಬೃಹತ್ ಹೋರಾಟಕ್ಕೆ ಮುಂದಾಗಿದ್ದು, ತನ್ನ ಸಂಪೂರ್ಣ ಸಹಮತ ಮತ್ತು ಬೆಂಬಲ ವ್ಯಕ್ತಪಡಿಸುತ್ತೇನೆ ಎಂದು ಸಮಾಜ ಸೇವಕ ಎಡಿಕೇರಿ ಪ್ರಸನ್ನ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡಗು ಹಾಗೂ ಕೊಡಗಿನ ವಿಶಿಷ್ಟ ಸಂಸ್ಕೃತಿ, ಪರಂಪರೆ ಮತ್ತು ಪ್ರಕೃತಿ ರಕ್ಷಣೆಗೆ ಸದಾ ಮುಂದೆ ಬರುತ್ತೇನೆ ಎಂದು ಹೇಳಿದ್ದಾರೆ.

ಈ ಪ್ರದೇಶವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಿಸರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಇಲ್ಲಿನ ಪ್ರಕೃತಿ ಸೌಂದರ್ಯ, ಪರಿಸರ ಸಮತೋಲನ ಹಾಗೂ ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಭೂಮಿಯ ಬಳಕೆಯ ಕುರಿತು ಸಂಬಂಧಿತ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ನಮ್ಮ ಪರಂಪರೆ, ಸಂಸ್ಕೃತಿ ಹಾಗೂ ಪ್ರಕೃತಿ ಸಂಪತ್ತಿನ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಜೂ. 20ರಂದು ನೆಲಜಿ ಗ್ರಾಮಸ್ಥರ ಸಹಯೋಗದಲ್ಲಿ ಬಲ್ಲಾಮವಟಿ ಗ್ರಾಪಂ ಸಭಾಂಗಣದಲ್ಲಿ ನೆಲಜಿ, ಬಲ್ಲಾಮಾವಟಿ ಪುಲಿಕೋಟು, ಕುಂಜಿಲ, ಕಕ್ಕಬೆ, ಪೇರೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಎಲ್ಲ ಸ್ವಾಭಿಮಾನಿ ಜನಸಮೂಹ ಪಕ್ಷಭೇದ ಮರೆತು ವಿಶೇಷ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಸುವ ಪ್ರಯತ್ನವನ್ನು ತೀವ್ರವಾಗಿ ವಿರೋಧಿಸಿ, ಸರ್ಕಾರದ ವತಿಯಿಂದ ನಿಯೋಜಿಸಲ್ಪಟ್ಟ ನೋಡಲ್ ಅಧಿಕಾರಿ, ಪಿಡಿಒ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ಗ್ರಾಮಸ್ಥರ ಆತಂಕ ಮತ್ತು ಅಭಿಪ್ರಾಯಗಳನ್ನು ಮನವರಿಕೆ ಮಾಡಿಕೊಡಲಾಯಿತು.

ಜೊತೆಗೆ ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಿಸರದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅನಪೇಕ್ಷಣೀಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂಬ ಎಚ್ಚರಿಕೆಯನ್ನು ಗ್ರಾಮಸ್ಥರು, ನಾಡಿನ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಅಧಿಕಾರಿಗಳಿಗೆ ಸ್ಪಷ್ಟವಾಗಿ ತಿಳಿಸಿದರು.

ಈ ಸಭೆಯು ಗ್ರಾಮಸ್ಥರ ಒಗ್ಗಟ್ಟು, ಸ್ವಾಭಿಮಾನ ಹಾಗೂ ತಮ್ಮ ನೆಲ-ಜಲ, ಸಂಸ್ಕೃತಿ ಹಾಗೂ ಪರಿಸರ ಸಂರಕ್ಷಣೆಯ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.