ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ

| Published : Sep 15 2024, 01:52 AM IST

ಸಾರಾಂಶ

ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹೊಮ್ಮಿಸಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದು ರಾಜ್ಯ ರೈತ ಸಂಘದ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್ ತಿಳಿಸಿದರು. ಉದ್ಯಮಿಗಳು ತಮ್ಮ ಗ್ರಾಮಗಳಲ್ಲಿ ಇರುವಂತಹ ಶಾಲೆಗಳಿಗೆ ಪೂರಕವಾದ ವ್ಯವಸ್ಥೆಗಳನ್ನ ಹಾಗೂ ಸಹಾಯವನ್ನು ಮಾಡುವುದರಿಂದ ಸರ್ಕಾರಿ ಶಾಲೆಗಳು ಹಾಗೂ ಗ್ರಾಮೀಣ ಮಠದ ಶಾಲೆಗಳನ್ನು ಉಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹೊಮ್ಮಿಸಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದು ರಾಜ್ಯ ರೈತ ಸಂಘದ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್ ತಿಳಿಸಿದರು.

ತಾಲೂಕಿನ ಹಾರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಹಾರನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪ್ರತಿಭಾ ಕಾರಂಜಿಯಂತಹ ಸಮಾರಂಭದಲ್ಲಿ ಭಾಗವಹಿಸುವುದರಿಂದ ನಿಮ್ಮಲ್ಲಿ ಅಡಗಿರುವಂತಹ ಪ್ರತಿಭೆಗಳನ್ನು ಪರಿಚಯಿಸಿದಂತೆ ಆಗುತ್ತದೆ. ಈ ವೇದಿಕೆ ಸದುಪಯೋಗವನ್ನು ಪಡೆದುಕೊಳ್ಳುವುದರಿಂದ ಮುಂದೆ ಉತ್ತಮವಾದ ವೇದಿಕೆಗಳು ಹಾಗೂ ಅವಕಾಶಗಳು ಲಭಿಸಲು ಅನುಕೂಲವಾಗುತ್ತದೆ ಎಂದರು.

ಉದ್ಯಮಿಗಳು ತಮ್ಮ ಗ್ರಾಮಗಳಲ್ಲಿ ಇರುವಂತಹ ಶಾಲೆಗಳಿಗೆ ಪೂರಕವಾದ ವ್ಯವಸ್ಥೆಗಳನ್ನ ಹಾಗೂ ಸಹಾಯವನ್ನು ಮಾಡುವುದರಿಂದ ಸರ್ಕಾರಿ ಶಾಲೆಗಳು ಹಾಗೂ ಗ್ರಾಮೀಣ ಮಠದ ಶಾಲೆಗಳನ್ನು ಉಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಹಾರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿಗೆ ಪಾಠ ಮಾಡುತ್ತಿರುವ ಶಿಕ್ಷಕರುಗಳಿಗೆ ರೈತ ಸಂಘದ ರಾಜ್ಯ ಸಂಚಾಲಕ ಪ್ರಸನ್ನ ಕುಮಾರ್‌ರವರು ರೈತ ಸಂಘದ ವತಿಯಿಂದ ಸಹಾಯಧನದ ಚೆಕ್‌ಗಳನ್ನು ವಿತರಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜು, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಶಾಂತಮ್ಮ, ಬಿಆರ್‌ಪಿ ಬೀರಪ್ಪ ಶಿಕ್ಷಕರ ರುದ್ರಪ್ಪ, ರೈತ ಸಂಘದ ಜವನಳ್ಳಿ ನಿಂಗಪ್ಪ ಜಿಲ್ಲಾ ಸಂಚಾಲಕರು ಹಾಗೂ ಉಸ್ತುವಾರಿಯಾದ ಅಯುಬ್ ಪಾಷಾ, ತಾಲೂಕು ರೈತ ಸಂಘದ ಅಧ್ಯಕ್ಷ ಬೀರಪ್ಪ ಉಪಸ್ಥಿತರಿದ್ದರು.

ಪೋಟೋ

ಅರಸೀಕೆರೆ ತಾಲೂಕಿನ ಹಾರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು.