ಪ್ರತಿಭಾ ಕಾರಂಜಿ, ಕಲೋತ್ಸವದಲ್ಲಿ ಪ್ರತಿಭೆಗಳ ಗುರುತಿಸಿ

| Published : Sep 24 2024, 01:52 AM IST

ಪ್ರತಿಭಾ ಕಾರಂಜಿ, ಕಲೋತ್ಸವದಲ್ಲಿ ಪ್ರತಿಭೆಗಳ ಗುರುತಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳ ಮೂಲಕ ಶಿಕ್ಷಕರು ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಉತ್ತಮ ಪ್ರತಿಭೆಗಳನ್ನು ಗುರುತಿಸಿ, ಬೆಳಕಿಗೆ ತರುವ ಕಾರ್ಯ ಮಾಡಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

- ಹರಿಹರ ತಾಲೂಕುಮಟ್ಟದ ಪ್ರತಿಭಾ ಕಾರಂಜಿ- ಕಲೋತ್ಸವ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ ಹರಿಹರ

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳ ಮೂಲಕ ಶಿಕ್ಷಕರು ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಉತ್ತಮ ಪ್ರತಿಭೆಗಳನ್ನು ಗುರುತಿಸಿ, ಬೆಳಕಿಗೆ ತರುವ ಕಾರ್ಯ ಮಾಡಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

ನಗರದ ಸೆಂಟ್ ಮೇರಿ ಕಾನ್ವೆಂಟ್ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿರಳ ಅವಕಾಶಗಳಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹಂತ ಹಂತವಾಗಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ರಾಜ್ಯದ ಮೂಲೆ ಮೂಲೆಗಳಿಂದಲೂ ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಆಗುತ್ತಿದೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಅನೇಕರು ಪ್ರತಿಭಾವಂತ ವಿದ್ಯಾರ್ಥಿಗಳು ಎಲೆಮರೆಯ ಕಾಯಿಯಂತೆ ಇರುತ್ತಾರೆ. ಅವರನ್ನು ಹುಡುಕಿ ಪ್ರೋತ್ಸಾಹಿಸಿದಾಗ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆ ಆಗಲು ಸಾಧ್ಯ ಎಂದರು.

ತಹಸೀಲ್ದಾರ್ ಕೆ.ಎಂ. ಗುರುಬಸವರಾಜ ಮಾತನಾಡಿ, ಪಠ್ಯ ಅಧ್ಯಯನದ ಜೊತೆ ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಕ್ರೀಡಾಸಕ್ತಿ, ಕಲಾಸಕ್ತಿಗಳನ್ನು ಪೋಷಿಸಿ ಬೆಳೆಸಲು ಪ್ರತಿಭಾ ಕಾರಂಜಿ ನೆರವಾಗಿದೆ. ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಜಾನಪದ ಕಲೆ, ಗಾಯನ, ಬಯಲಾಟ, ಯಕ್ಷಗಾನ, ಅಭಿನಯ, ನಿರ್ದೇಶನ ಮುಂತಾದ ಕೌಶಲ್ಯವನ್ನು ಗುರ್ತಿಸಿ, ಪ್ರೋತ್ಸಾಹಿಸುವುದು ಶಿಕ್ಷಕರು, ಪೋಷಕರ ಜವಾಬ್ದಾರಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಕಲೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ಬಲವರ್ಧನೆ ಕಾರ್ಯಕ್ರಮ ಆಯೋಜಿಸುತ್ತಿದೆ. ಇಂದಿನ ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ 10 ಸಮೂಹ ಸಂಪನ್ಮೂಲ ಕೇಂದ್ರಗಳ ವಿದ್ಯಾರ್ಥಿಗಳ ಭಾಗವಹಿಸಿದ್ದಾರೆ. ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿ, ಅಲ್ಲಿ ಪ್ರಥಮ ಸ್ಥಾನ ಪಡೆದರೆ ರಾಜ್ಯಮಟ್ಟಕ್ಕೆ ಆಯ್ಕೆಯಾಗುತ್ತಾರೆ ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವೀರೇಶ್, ನಗರಸಭೆ ಸದಸ್ಯ ಆಟೋ ಹನುಮಂತಪ್ಪ, ಚಂದ್ರಪ್ಪ, ಶರಣ್ ಕುಮಾರ್ ಹೆಗಡೆ, ಈಶಪ್ಪ ಬೂದಿಹಾಳ್, ಮಾಲತಿ ಮೆನನ್, ಪ್ರಭಾಕರ್ ಇತರರು ಉಪಸ್ಥಿತರಿದ್ದರು.

- - -

ಕೋಟ್‌ ಗ್ರಾಮೀಣ ಪ್ರದೇಶದಲ್ಲಿ ಅನೇಕರು ಪ್ರತಿಭಾವಂತ ವಿದ್ಯಾರ್ಥಿಗಳು ಎಲೆಮರೆಯ ಕಾಯಿಯಂತೆ ಇರುತ್ತಾರೆ. ಅವರನ್ನು ಹುಡುಕಿ ಪ್ರೋತ್ಸಾಹಿಸಿದಾಗ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆ ಆಗಲು ಸಾಧ್ಯ

- ಬಿ.ಪಿ. ಹರೀಶ್‌, ಶಾಸಕ

- - -

-22ಎಚ್‍ಆರ್‍ಆರ್2:

ಹರಿಹರದ ಸೆಂಟ್ ಮೇರಿ ಕಾನ್ವೆಂಟ್ ಶಾಲಾ ಆವರಣದಲ್ಲಿ ನಡೆದ ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು.