ಸಾರಾಂಶ
ಲೈಂಗಿಕ ಕಾರ್ಯಕರ್ತರು ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಕೋಶ ಸಮಿತಿ ಸಭೆ ಆಯೋಜಿಸುವಂತೆ ಪ್ರತಿಬಿಂಬ ಸೇವಾ ಸಂಸ್ಥೆಯ ಪ್ರತಿನಿಧಿಗಳು ರಾಮನಗರದ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅವರಿಗೆ ಮನವಿ ಸಲ್ಲಿಸಿದರು.
ಲೈಂಗಿಕ ಅಲ್ಪಸಂಖ್ಯಾತರಿಗೆ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ ರಾಮನಗರ: ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರು ಹಾಗೂ ಲೈಂಗಿಕ ಕಾರ್ಯಕರ್ತರು ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಕೋಶ ಸಮಿತಿ ಸಭೆ ಆಯೋಜಿಸುವಂತೆ ಪ್ರತಿಬಿಂಬ ಸೇವಾ ಸಂಸ್ಥೆಯ ಪ್ರತಿನಿಧಿಗಳು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅವರಿಗೆ ಮನವಿ ಸಲ್ಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸ್ಥೆ ಅಧ್ಯಕ್ಷ ಪ್ರಕಾಶ್ ರಾಜ್, ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರು ಹಾಗೂ ಮಹಿಳಾ ಲೈಂಗಿಕ ಕಾರ್ಯಕರ್ತರ ಪೈಕಿ ಬಹುತೇಕರಿಗೆ ಸ್ವಂತ ಮನೆಗಳು ಇಲ್ಲ, ಬಾಡಿಗೆಗೆ ಮನೆ ಸಿಗುತ್ತಿಲ್ಲ, ಬಾಡಿಗೆಗೆ ಮನೆ ಸಿಕ್ಕರೂ ಅತಿಯಾದ ಬಾಡಿಗೆ ಕೊಡಲಾಗದೆ ಪರಿತಪಿಸುತ್ತಿದ್ದಾರೆ. ಹೀಗಾಗಿ ಇವರಿಗೆ ಆದ್ಯತೆ ಮೇರೆಗೆ ಸ್ವಂತ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದೇವೆಂದರು.ಆರೋಗ್ಯ ಇಲಾಖೆ ಅವರನ್ನು ಕಡೆಗಣಿಸುತ್ತಿದೆ. ಇವರ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸೇವಾ ಸೌಲಭ್ಯಗಳು ಸಿಗುತ್ತಿಲ್ಲ, ಪೌಷ್ಟಿಕ ಆಹಾರ ಕೊರತೆ ಇದೆ. ಹೀಗಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಗಳನ್ನು ಆಯೋಜಿಸಿ ಸಮಸ್ಯೆಗಳಿಗೆ ಪರಿಹರಿಸಬೇಕು ಎಂದು ವಿನಂತಿಸಿದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಮುಖ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಮುದಾಯದ ಸದಸ್ಯರು ಮತ್ತು ಲೈಂಗಿಕ ವೃತ್ತಿ ನಿರತ ಮಹಿಳೆಯರ ಬದುಕು, ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ಅಪರ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.2017ರ ಕರ್ನಾಟಕ ಟಿ.ಜಿ.ಪಾಲಿಸಿಯ ಶಿಫಾರಸ್ಸಿನಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಕೋಶ ಸಮಿತಿ ವತಿಯಿಂದ ಸಭೆ ಆಯೋಜಿಸಬೇಕು ಎಂದು ಒತ್ತಾಯಿಸಲಾಗಿದೆ ಎಂದರು.