ಪ್ರಯಾಸ್ ಯೋಜನೆ ಮಕ್ಕಳ ಕಲಿಕಾ ಪ್ರಕ್ರಿಯೆಗೆ ಪೂರಕ

| Published : Aug 16 2025, 12:00 AM IST

ಸಾರಾಂಶ

ಯೋಜನೆ ಯಶಸ್ವಿಗೆ ಶುಭ ಹಾರೈಸಿದ ಅವರು, ವೈದ್ಯಾಧಿಕಾರಿಗಳು ಆರಂಭಿಸಿದ ಮಕ್ಕಳ ತಪಾಸಣಾ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಗರದ ವಾರ್ಡ್ ನಂ.10ರ ಕರಿನಂಜನಪುರ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತ ಸರ್ಕಾರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮೈಸೂರು ಇವರ ಸಹಯೋಗದಲ್ಲಿ ಅಂಗನವಾಡಿ ಮಕ್ಕಳಲ್ಲಿರಬಹುದಾದ ವಾಕ್-ಶ್ರವಣ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷಿ ಪ್ರಯಾಸ್ ಯೋಜನೆಗೆ( ಮಕ್ಕಳ ವಾಕ್, ಶ್ರವಣ ಪರೀಕ್ಷೆ) ಕಾರ್ಯಕ್ರಮವನ್ನು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಉದ್ಘಾಟಿಸಿದರು.

ಯೋಜನೆ ಯಶಸ್ವಿಗೆ ಶುಭ ಹಾರೈಸಿದ ಅವರು, ವೈದ್ಯಾಧಿಕಾರಿಗಳು ಆರಂಭಿಸಿದ ಮಕ್ಕಳ ತಪಾಸಣಾ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಇಡೀ ರಾಜ್ಯದಲ್ಲಿಯೇ ಮೊದಲ ಬಾರಿಗೆ ನಮ್ಮ ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾಡಳಿತ ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಪ್ರಯಾಸ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಕಲಿಕಾ ಪ್ರಕ್ರಿಯೆ ಪೂರಕವಾಗಿರುವ ಉತ್ತಮ ಯೋಜನೆಯಾಗಿದೆ ಎಂದರು.

ಕೆಲ ಮಕ್ಕಳಿಗೆ ಮಾತಿನ ತೊಂದರೆ, ಕಿವಿ ಸಮಸ್ಯೆ ಹುಟ್ಟಿನಿಂದಲೇ ಬರುವುದು ಸಹಜ. ಅಂತಹ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯವಿರುವ ಚಿಕಿತ್ಸೆ ನೀಡಿ ಗುಣಪಡಿಸುವುದು ಅವಶ್ಯವಾಗಿದೆ. ಇದು ಮಕ್ಕಳ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೂ ಅನುಕೂಲವಾಗಲಿದೆ. ಯೋಜನೆಯ ಸದ್ಭಳಕೆಗಾಗಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯೊಂದಿಗೆ ಜಿಲ್ಲಾಡಳಿತ ಒಡಂಬಡಿಕೆ ಮಾಡಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ಇದೊಂದು ವಿನೂತನ ಕಾರ್ಯಕ್ರಮವಾಗಿದೆ. ಮಕ್ಕಳಿಗೆ ಕಿವಿ ಕೇಳಿಸದಿರುವುದು, ಸ್ಪಷ್ಟವಾಗಿ ಮಾತು ಬಾರದಿರುವುದು ಪೋಷಕರಿಗೆ ತಡವಾಗಿ ಗೊತ್ತಾಗಬಹುದು. ಗ್ರಾಮೀಣ ಭಾಗದ ಜನರು ಬಡವರಿದ್ದು, ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ಆಗದಿರಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ 6 ತಿಂಗಳಿನಿಂದ 6 ವರ್ಷದವರೆಗಿನ ಎಲ್ಲಾ ಮಕ್ಕಳನ್ನು ಗುರುತಿಸಿ ವಾಕ್ ಮತ್ತು ಶ್ರವಣ ತಜ್ಞರಿಂದ ಉಚಿತ ಚಿಕಿತ್ಸೆ ಸೌಲಭ್ಯ ನೀಡಲು ಜಿಲ್ಲಾಡಳಿತ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದರು.

ದೇಶದ ಜನಸಂಖ್ಯೆಯಲ್ಲಿ 46 ಕೋಟಿ ಜನರಿಗೆ ಮಾತು ಅಥವಾ ಕಿವಿ ಸಮಸ್ಯೆ ಇದ್ದು, ಈ ಪೈಕಿ 3.5ಕೋಟಿ ಮಕ್ಕಳಿರುವುದು ವಿಷಾಧನೀಯ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಮಕ್ಕಳಲ್ಲಿರಬಹುದಾದ ವಾಕ್ ಹಾಗೂ ಶ್ರವಣ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡಿ ಗುಣಪಡಿಸುವುದು, ಅಂಗನವಾಡಿ ಸಿಬ್ಬಂದಿಗೆ ವಾಕ್ ಮತ್ತು ಶ್ರವಣ ದೋಷದ ಪ್ರಾರಂಭಿಕ ಲಕ್ಷಣಗಳನ್ನು ಗುರುತಿಸುವ ಬಗ್ಗೆ ತರಬೇತಿ ಏರ್ಪಡಿಸುವುದು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ವಾಕ್-ಶ್ರವಣ ದೋಷವುಳ್ಳ ವ್ಯಕ್ತಿಗಳಿಗೆ ಸಮಗ್ರ ತಪಾಸಣೆ ಹಾಗೂ ಚಿಕಿತ್ಸೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ತಯಾರಿಸುವುದು ಪ್ರಯಾಸ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಒಟ್ಟು 440 ಅಂಗನವಾಡಿ ಕೇಂದ್ರಗಳಲ್ಲಿ 37800 ಮಕ್ಕಳಿದ್ದು, ಈ ಪೈಕಿ ಪ್ರಸಕ್ತ ಸಾಲಿನಲ್ಲಿ 35326 ಮಕ್ಕಳ ತಪಾಸಣೆ ಗುರಿ ಹೊಂದಲಾಗಿದೆ. ಈ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಸಿದ್ದತಾ ಸಭೆ ನಡೆಸಿ ಯೋಜನೆಯ ರೂಪುರೇಷೆಗಳ ಬಗ್ಗೆ ಅಗತ್ಯ ಸಲಹೆ, ಮಾರ್ಗದರ್ಶನ ನೀಡಲಾಗಿದೆ. ಪ್ರಯಾಸ್ ಯೋಜನೆಗೆ ಇಂದು ಉಸ್ತುವಾರಿ ಸಚಿವರು ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಮುಂದಿನ ತಿಂಗಳಿನಲ್ಲಿ ಅಂಗನವಾಡಿ ಸಿಬ್ಬಂದಿಗೆ ವಾಕ್-ಶ್ರವಣ ದೋಷದ ಗುಣಲಕ್ಷಣಗಳನ್ನು ಪತ್ತೆಹಚ್ಚುವ ಬಗ್ಗೆ ನುರಿತ ತಜ್ಞ (ಮಾಸ್ಟರ್ ಟ್ರೈನರ್)ರಿಂದ ತರಬೇತಿ ಕೊಡಿಸಲಾಗುವುದು. ಬಳಿಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಹೇಳಿದರು.

ಬಳಿಕ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಇತರೆ ಗಣ್ಯರು ಡಿ.ಎಂ.ಎಫ್ ನಿಧಿಯಿಂದ ಆರೋಗ್ಯ ಇಲಾಖೆಗೆ ಕೊಡುಗೆಯಾಗಿ ನೀಡಿರುವ ಸಂತಾನ ಹರಣ ಶಸ್ತ್ರಚಿಕಿತ್ಸಾ ವಾಹನಕ್ಕೆ ಹಸಿರು ನಿಶಾನೆ ತೋರಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವೈದ್ಯಾಧಿಕಾರಿಗಳು, ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.