ಭಾರತೀನಗರ ರೋಟರಿ ಸಂಸ್ಥೆಯಿಂದ ಗರ್ಭಿಣಿ ಮತ್ತು ಶಿಶು ಆರೋಗ್ಯ ಕಾರ್ಯಕ್ರಮ

| Published : Aug 07 2024, 01:02 AM IST

ಸಾರಾಂಶ

ಗರ್ಭಾವಸ್ಥೆಯು ಮಹಿಳೆಯ ಜೀವನದಲ್ಲಿ ಅತ್ಯಂತ ಸಂತೋಷದಾಯಕ ಹಂತದಲ್ಲಿ ಒಂದಾಗಿದೆ. ಮಗುವಿನ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಗರ್ಭಾವಸ್ಥೆಯಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರ ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಕನ್ನಡಪ್ರಭ ವಾರ್ತೆ ಭಾರತೀನಗರ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಟರಿ ಸಂಸ್ಥೆಯಿಂದ ಗರ್ಭಿಣಿ ಮತ್ತು ಶಿಶು ಆರೋಗ್ಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ಅರ್ಜುನ್‌ಕುಮಾರ್ ಮಾತನಾಡಿ, ಗರ್ಭಾವಸ್ಥೆಯು ಮಹಿಳೆಯ ಜೀವನದಲ್ಲಿ ಅತ್ಯಂತ ಸಂತೋಷದಾಯಕ ಹಂತದಲ್ಲಿ ಒಂದಾಗಿದೆ ಎಂದರು.

ಮಗುವಿನ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಗರ್ಭಾವಸ್ಥೆಯಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರ ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದರು.

ಬೆಳೆಯುತ್ತಿರುವ ಭ್ರೂಣಕ್ಕೆ ಸರಿಯಾದ ಬೆಳವಣಿಗೆಗೆ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಅಗತ್ಯವಿದೆ. ಹಾಗಾಗಿ ಹಾಲು, ಮೊಸರು, ತರಕಾರಿ, ಬೆಣ್ಣೆ, ತುಪ್ಪ, ಮೊಳಕೆ ಕಾಳುಗಳು, ವಿವಿಧ ಬಗೆಯ ಸೊಪ್ಪು-ತರಕಾರಿ, ಹಣ್ಣುಗಳನ್ನು ಬಳಕೆ ಮಾಡಬೇಕು ಎಂದರು.

ಮಕ್ಕಳ ತಜ್ಞೆ ಡಾ.ಮಧುರ ಪ್ರದೀಪ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಗರ್ಭಿಣಿಯರು ಫಾಸ್ಟ್‌ಫುಡ್‌ಗಳನ್ನು ಅತೀ ಹೆಚ್ಚಾಗಿ ಬಳಕೆ ಮಾಡುತ್ತಿದ್ದಾರೆ. ಇದರಿಂದ ಮಗುವಿನ ಆರೋಗ್ಯದಲ್ಲಿ ಭೀಕರ ಸಮಸ್ಯೆಗಳು ಎದುರಾಗಿ ಮಗುವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗುತ್ತದೆ ಎಂದು ಎಚ್ಚರಿಸಿದರು.

ರೋಟರಿ ಸಂಸ್ಥೆ ಅಧ್ಯಕ್ಷ ಎಸ್.ಕೆ.ಶಶಿಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವೈದ್ಯಾಧಿಕಾರಿ ಡಾ.ಸೌಮ್ಯ, ಹೆಲ್ತ್ ಇನ್ಸ್‌ಪೆಕ್ಟರ್ ಶಿವರಾಜು, ರೋಟರಿ ಸಂಸ್ಥೆ ಪದಾಧಿಕಾರಿಗಳಾದ ಕೆ.ಕುಮಾರ್‌ರಾಜು, ಕೆ.ಎಚ್.ಮರಿಸ್ವಾಮಿ, ಮರಿಚನ್ನೇಗೌಡ, ಎಂ.ಆರ್.ಮಧು, ಶ್ರೀನಿವಾಸ್, ಕುರಿಕೆಂಪನದೊಡ್ಡಿ ಶಿವಲಿಂಗೇಗೌಡ, ದೇವರಹಳ್ಳಿ ನಂದೀಶ್, ಶಿವಮ್ಮಶಿವಕುಮಾರ್, ಶಿವರತ್ನಮಣಿ, ಶಿವರಾಮೇಗೌಡ ಸೇರಿದಂತೆ ಹಲವರಿದ್ದರು.

ಕೃಷಿಕ ಪ್ರಶಸ್ತಿ ನೀಡಲು ರೈತರಿಂದ ಅರ್ಜಿ ಆಹ್ವಾನ

ಪಾಂಡವಪುರ:2024-25ನೇ ಸಾಲಿನ ರಾಜ್ಯ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ಆಸಕ್ತ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ.

ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯುವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿರುವ ರೈತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.ಜಿಲ್ಲೆಯ 10 ರೈತರಿಗೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಲಾ 25 ಸಾವಿರ ರು., ತಾಲೂಕಿನ 5 ರೈತರಿಗೆ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಲಾ 10 ಸಾವಿರ ರು. ನಗದು ಬಹುಮಾನ ನೀಡಲಾಗುವುದು. ಆಸಕ್ತ ರೈತರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 31 ರಂದು ಸಂಜೆ 5 ಒಳಗೆ ತಲುಪಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಪ್ರಕಟಣೆಯಲ್ಲಿ ಕೋರಿದ್ದಾರೆ.