ಫೆಬ್ರುವರಿ ತಿಂಗಳಲ್ಲಿ ಸಮಾವೇಶಕ್ಕೆ ಸಿದ್ಧತೆ: ಲಾಡ್‌

| Published : Jan 28 2024, 01:15 AM IST

ಫೆಬ್ರುವರಿ ತಿಂಗಳಲ್ಲಿ ಸಮಾವೇಶಕ್ಕೆ ಸಿದ್ಧತೆ: ಲಾಡ್‌
Share this Article
  • FB
  • TW
  • Linkdin
  • Email

ಸಾರಾಂಶ

. ಜಿಲ್ಲಾಮಟ್ಟದ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕಾಗಿ ಅವರ ದಿನಾಂಕ ಕೇಳಲಾಗಿದೆ ಎಂದು ಮಾಹಿತಿ ನೀಡಿದರು. ಬರುವ ಜ. 31 ರಂದು ಕುಂದಗೋಳದಲ್ಲಿ, ಫೆ. 2 ರಂದು ಹುಬ್ಬಳ್ಳಿಯಲ್ಲಿ ಮತ್ತು ಫೆ. 4ರಂದು ಧಾರವಾಡದಲ್ಲಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ.

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರಯೋಜನವನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ ಅರಿವು ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

ಜಿಪಂ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿದ ಅವರು, ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಮುದಾಯ, ವ್ಯಕ್ತಿಗಳಿಗೆ ಮುಟ್ಟಿಸಬೇಕು. ಗ್ಯಾರಂಟಿ ಯೋಜನೆಗಳ ಜತೆಗೆ ವಿವಿಧ ಇಲಾಖೆಗಳಿಗೆ ವಿವಿಧ ಯೋಜನೆಗಳಡಿ ಫಲಾನುಭವಿಗಳ ಸಂಖ್ಯೆ ನಿಗದಿಪಡಿಸಿ,ಗುರಿ ನೀಡಲಾಗಿದೆ. ಸರ್ಕಾರದಿಂದ ಹಂತಹಂತವಾಗಿ ಅನುದಾನವೂ ಬಿಡುಗಡೆ ಆಗುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಇಲಾಖಾ ಯೋಜನೆ ಅರ್ಹರಿಗೆ ತಲುಪಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಫೆಬ್ರುವರಿಯಲ್ಲಿ ಸಮಾವೇಶ:

ಫೆಬ್ರವರಿ ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲಿ ಫಲಾನುಭವಿಗಳ ಸಮಾವೇಶ ಮಾಡಲು ನಿರ್ಧರಿಸಲಾಗಿದೆ. ತಹಸೀಲ್ದಾರ ಮತ್ತು ತಾಪಂ ಇಓ ಅವರನ್ನು ನೊಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಸಂಘಟಿಸಬೇಕು. ಜಿಲ್ಲಾಮಟ್ಟದ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕಾಗಿ ಅವರ ದಿನಾಂಕ ಕೇಳಲಾಗಿದೆ ಎಂದು ಮಾಹಿತಿ ನೀಡಿದರು. ಬರುವ ಜ. 31 ರಂದು ಕುಂದಗೋಳದಲ್ಲಿ, ಫೆ. 2 ರಂದು ಹುಬ್ಬಳ್ಳಿಯಲ್ಲಿ ಮತ್ತು ಫೆ. 4ರಂದು ಧಾರವಾಡದಲ್ಲಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ. ಆಯಾ ತಾಲೂಕಿನ ತಹಸೀಲ್ದಾರ ಮತ್ತು ಇಓ ನೇತೃತ್ವದಲ್ಲಿ ಸಮಾವೇಶದ ಸಿದ್ದತೆ ಆರಂಭಿಸಿ, ನಿಗದಿತ ದಿನಂಕಗಳಂದು ಕಾರ್ಯಕ್ರಮ ಸಂಘಟಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹ್ಮದ್ ರೋಷನ್ ವೇದಿಕೆಯಲ್ಲಿದ್ದರು. ಸಭೆಯಲ್ಲಿ ಇಲಾಖೆ ಯೋಜನೆಗಳು ಮತ್ತು ಫಲಾನುಭವಿಗಳ ಕುರಿತು ಹೆಸ್ಕಾಂ ಧಾರವಾಡ ಗ್ರಾಮೀಣ ಇಇ ಎಂ.ಟಿ. ದೊಡ್ಡಮನಿ, ಶಹರ ಇಇ ಎಂ.ಎಂ. ನದಾಫ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ, ತೋಟಗಾರಿಕೆ ಇಲಾಖೆಯ ಕೆ.ಸಿ. ಬದ್ರಣ್ಣವರ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸ್ಮಾರ್ಟ ಸಿಟಿ ಯೋಜನೆ ವ್ಯವಸ್ಥಾಪಕ ರುದ್ರೇಶ ಗಾಳಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ರವಿ ಸಾಲಿಗೌಡರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಯೋಜನೆಗಳ ಪ್ರಗತಿ ತಿಳಿಸಿದರು.

ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಭಜಂತ್ರಿ, ಕೆಯುಐಡಿಎಫ್‌ಸಿ ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ಕಾರ್ಯನಿರ್ವಾಹಕ ಅಧಿಕಾರಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸೇರಿದಂತೆ ಎಲ್ಲ ತಾಲೂಕುಗಳ ತಹಸೀಲ್ದಾರರು, ತಾಪಂ ಇಓಗಳು ಇದ್ದರು.