ರಾಮನಗರ: ವಿಧಾನ ಪರಿಷತ್ ಚುನಾವಣೆ ಗೆಲ್ಲಲು ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದ್ದು, ಬಿಡದಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್‌ಪಿ)ಸಭೆ ನಡೆಸಲಿದೆ. ಇದಕ್ಕಾಗಿ ರೆಸಾರ್ಟ್ ನಲ್ಲಿ ಸಿದ್ಧತೆಗಳು ಪೂರ್ಣಗೊಂಡಿದೆ

ರಾಮನಗರ: ವಿಧಾನ ಪರಿಷತ್ ಚುನಾವಣೆ ಗೆಲ್ಲಲು ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದ್ದು, ಬಿಡದಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್‌ಪಿ)ಸಭೆ ನಡೆಸಲಿದೆ. ಇದಕ್ಕಾಗಿ ರೆಸಾರ್ಟ್ ನಲ್ಲಿ ಸಿದ್ಧತೆಗಳು ಪೂರ್ಣಗೊಂಡಿದೆ.

ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ಆಯೋಜಿಸಿರುವ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್‌ ಎಲ್ಲಾ ಶಾಸಕರು ಹಾಗೂ ಕಾಂಗ್ರೆಸ್ ಅನ್ನು ಬೆಂಬಲಿಸಲಿರುವ ಶಾಸಕರು ಭಾಗಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ನೇತೃತ್ವದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಪೊಲೀಸರ ಜೊತೆಗೆ ಚರ್ಚಿಸಿ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು.

ಶಾಸಕ ಬಾಲಕೃಷ್ಣರವರು ಈಗಾಗಲೇ ವಂಡರ್‌ಲಾ ರೆಸಾರ್ಟ್‌ನ ಎಲ್ಲಾ ರೂಮ್‌ಗಳನ್ನು ಪಕ್ಷದ ನಾಯಕರು ಹಾಗೂ ಶಾಸಕರಿಗಾಗಿ ಬುಕ್ ಮಾಡಿದ್ದಾರೆಂದು ಹೇಳಲಾಗಿದೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತಗಳ ರಕ್ಷಣೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಾಗಿದ್ದು ತಮ್ಮ ತವರು ಜಿಲ್ಲೆಯಲ್ಲಿಯೇ ಸಿಎಲ್‌ಪಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಬಿಡದಿಯ ವಂಡರ್‌ಲಾ ರೆಸಾರ್ಟ್ ಸೇಫ್ ಎಂದು ಪರಿಗಣಿಸಿದ್ದು ಮಂಗಳವಾರ ಸಂಜೆ 6 ಗಂಟೆಗೆ ರೆಸಾರ್ಟ್‌ನಲ್ಲಿ ಶಾಸಕಾಂಗ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಕಾರ್ಯಾಧ್ಯಕ್ಷರು, ಸಚಿವರು, ಶಾಸಕರು ಮತ್ತು ರಾಜ್ಯದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.

ಜೂ.16 ಮತ್ತು 17ರಂದು ವಂಡರ್‌ಲಾ ರೆಸಾರ್ಟ್‌ನಲ್ಲಿಯೇ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾವಣೆ ಕುರಿತು ಶಾಸಕರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ. ಜೂ.18 ರಂದು ರೆಸಾರ್ಟ್‌ನಿಂದ ಎಲ್ಲಾ ಶಾಸಕರು ನೇರವಾಗಿ ವಿಧಾನಸೌಧಕ್ಕೆ ತೆರಳಿ ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

15ಕೆಆರ್ ಎಂಎನ್ 4.ಜೆಪಿಜಿ

ಬಿಡದಿ ವಂಡರ್ ಲಾ ರೆಸಾರ್ಟ್ ನಲ್ಲಿ ಶಾಸಕ ಬಾಲಕೃಷ್ಣ ಸಿದ್ದತೆಗಳನ್ನು ವೀಕ್ಷಣೆ ಮಾಡಿದರು.