35ನೇ ತುಮಕೂರು ದಸರಾ ಉತ್ಸವ ಆಚರಣೆಗೆ ಸಿದ್ಧತೆ

| Published : Aug 08 2025, 01:00 AM IST

35ನೇ ತುಮಕೂರು ದಸರಾ ಉತ್ಸವ ಆಚರಣೆಗೆ ಸಿದ್ಧತೆ
Share this Article
  • FB
  • TW
  • Linkdin
  • Email

ಸಾರಾಂಶ

ಈ ಬಾರಿಯ ದಸರಾ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ನಗರದ ಸ್ನೇಹ ಸಂಗಮ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಡೆದ ತುಮಕೂರು ದಸರಾ ಸಮಿತಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ

ಕನ್ನಡಪ್ರಭ ವಾರ್ತೆ, ತುಮಕೂರು

ಕಳೆದ 34 ವರ್ಷ ತುಮಕೂರು ದಸರಾ ಸಮಿತಿ ನಗರದಲ್ಲಿ ಸಾಂಪ್ರದಾಯಕವಾಗಿ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದೆ. ಈ ವರ್ಷವೂ ಅದೇ ಮಾದರಿಯಲ್ಲಿ ನಾಡ ಹಬ್ಬ ಆಚರಣೆ,, ಸಮಿತಿಯ ದಸರಾ ಮಹೋತ್ಸವ ಕಾರ್ಯಕ್ರಮಗಳಲ್ಲಿ ತಾವೂ ಜೊತೆಗಿದ್ದು ಸಹಕಾರ ನೀಡುವುದಾಗಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

ಈ ಬಾರಿಯ ದಸರಾ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ನಗರದ ಸ್ನೇಹ ಸಂಗಮ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಡೆದ ತುಮಕೂರು ದಸರಾ ಸಮಿತಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕರು, ತುಮಕೂರಿನಲ್ಲಿ ಆಚರಿಸಿಕೊಂಡು ಬರುತ್ತಿರುವ ದಸರಾ ಉತ್ಸವ ಜನಪ್ರಿಯವಾಗಿದೆ. ನಮ್ಮ ಸಂಸ್ಕೃತಿ, ಪರಂಪರೆಯನ್ನು ಮೆರೆಯುವ ದಸರಾ ಉತ್ಸವವನ್ನು ಸಂಪ್ರದಾಯಬದ್ಧವಾಗಿ ಆಚರಿಸುತ್ತಾ, ಅದರೊಂದಿಗೆ ನಮ್ಮ ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಾಡಹಬ್ಬವನ್ನು ಸಂಭ್ರಮದಿಂದ ಆಚರಿಸೋಣ ಎಂದರು.

ದಸರಾ ಸಮಿತಿ ಅಧ್ಯಕ್ಷ ಬಿ.ಎಸ್.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್, ಸೆಪ್ಟಂಬರ್ 22 ರಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ದಸರಾ ಮಹೋತ್ಸವ ಆಚರಿಸಲು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಸೆ.22ರಿಂದ 10 ದಿನಗಳ ಕಾಲ ನಡೆಯುವ ದಸರಾ ಮಹೋತ್ಸವದಲ್ಲಿ ಪ್ರತಿದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ದಸರಾ ಮಹೋತ್ಸವದ ಸಾಂಪ್ರದಾಯಕ ಆಚರಣೆಗಳ ಜೊತೆಗೆ ದೇಶಭಕ್ತಿ ಗೀತೆ, ಜನಪದ ಗೀತೆ, ನೃತ್ಯ, ಜಾನಪದ ಕಲೆಗಳ ಪ್ರದರ್ಶನ, ಮಲ್ಲಕಂಭ ಏರುವ ಸ್ಪರ್ಧೆ ಮತ್ತಿತರ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ಚರ್ಚಿಸಲಾಯಿತು. ವಿವಿಧ ಮಠಾಧೀಶರು, ಚುನಾಯಿತ ಪ್ರತಿನಿಧಿಗಳು, ನಾನಾ ಕ್ಷೇತ್ರಗಳ ಸಾಧಕರು, ಸಂಘಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.

ತುಮಕೂರು ದಸರಾ ಸಮಿತಿ ಅಧ್ಯಕ್ಷ ಬಿ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬಿ.ಎಸ್.ಮಲ್ಲೇಶಯ್ಯ(ಮಹೇಶ್), ಉತ್ಸವ ಸಮಿತಿ ಅಧ್ಯಕ್ಷ ಡಾ.ಎಸ್.ಪರಮೇಶ್, ಗೌರವಾಧ್ಯಕ್ಷ ಎಸ್.ಪಿ.ಚಿದಾನಂದ್, ಕಾಯಾಧ್ಯಕ್ಷ ಡಾ.ಲಕ್ಷ್ಮಿಕಾಂತ್, ನಿಕಟಪೂರ್ವ ಅಧ್ಯಕ್ಷ ಡಾ.ರಮೇಶ್‌ಬಾಬು, ಸಮಿತಿ ಸಂಯೋಜಕ ಗೋವಿಂದರಾವ್, ಖಜಾಂಚಿ ಜಿ.ಎಸ್.ಬಸವರಾಜು, ಕಾರ್ಯದರ್ಶಿ ಕೆ.ಶಂಕರ್ ಉಪ್ಪಾರಹಳ್ಳಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.