ಬಿಎಸ್ವೈ ಅಭಿಮಾನೋತ್ಸವದ ಪೆಂಡಾಲ್ ನಿರ್ಮಾಣ ಕಾರ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೂಮಿಪೂಜೆ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 50 ವರ್ಷಗಳ ಸಾರ್ಥಕ ರಾಜಕೀಯ ಜೀವನ ಪೂರೈಸಿದ ಹಿನ್ನಲೆ ಮೇ9 ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾದ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆಗಳು ಆರಂಭಗೊಂಡಿದೆ.ಮಾದಾರ ಗುರುಪೀಠದ ಹಿಂಭಾಗದ ವಿಶಾಲವಾದ ಪ್ರದೇಶದಲ್ಲಿ 1 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಕುಳಿತುಕೊಳ್ಳಲು ಸ್ಥಳಾವಕಾಶದ ಪೆಂಡಾಲ್ ನಿರ್ಮಾಣ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು. ವಿವಿಧ ಮಠಾಧಿಪತಿಗಳು ಧ್ವಜಾರೋಹಣ ನೆರವೇರಿಸಿದರೆ, ಗೋಪೂಜೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಧಾರ್ಮಿಕ ಸ್ಪರ್ಶ ನೀಡಲಾಯಿತು.
ಬೇಸಿಗೆ ಆರಂಭವಾಗಿರುವ ಹಿನ್ನಲೆಯ ಕಾರ್ಯಕ್ರಮ ಆಯೋಜಿಸುವುದು ಸಂಘಟಕರಿಗೆ ಸವಾಲಿನ ಕೆಲಸವಾಗಿದೆ. ಆದಷ್ಟು ವಾತಾವರಣ ತಂಪಾಗಿಸುವ ನಿಟ್ಟಿನಲ್ಲಿ ಕೆಲಸಗಳು ನಡೆದಿವೆ. ಪೆಂಡಾಲ್ನಲ್ಲಿ ಕುಳಿತವರಿಗೆ ಬಿಸಿಲಿನ ಝಳ ತಟ್ಟುವುದ ತಡೆಯುವ ಸಂಬಂಧದ ಆಲೋಚನಗಳು ನಡೆದಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನಲೆ ಕಾರ್ಯಕ್ರಮವನ್ನು ಆದಷ್ಟು ಜನಶಕ್ತಿ ಪ್ರದರ್ಶನಕ್ಕೆ ಭೂಮಿಕೆಯಾಗಿ ಬಳಸಿಕೊಳ್ಳಲಾಗುತ್ತಿದೆ.ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕುಂಚಿಟಿಗ ಪೀಠದ ಶಾಂತವೀರ ಸ್ವಾಮೀಜಿ, ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ, ಶ್ರೀಕೃಷ್ಣಯಾದವಾನಂದ ಸ್ವಾಮೀಜಿ ಅವರುಗಳು ಧ್ವಜರೋಹಣ ನೆರವೇರಿಸಿ ಪೂಜಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಸಭೆ ಪ್ರತಿಪಕ್ಷದ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವರಾದ ಎ.ನಾರಾಯಣಸ್ವಾಮಿ, ಜಿಎಂ ಸಿದ್ದೇಶ್ವರ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಕರುಣಾಕರ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕ ಎಂ.ಚಂದ್ರಪ್ಪ, ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮುಂತಾದವರು ಪೆಂಡಾಲ್ ನಿರ್ಮಾಣದ ಪೂಜೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.