ಮಡಿಕೇರಿಯಲ್ಲಿ ಮನೆ ಮನೆಗೆ ‘ಗೃಹ ಆರೋಗ್ಯ ಕಾರ್ಯಕ್ರಮ’ ಅನುಷ್ಠಾನ ಪೂರ್ವಭಾವಿ ಸಭೆ

| Published : Jan 04 2025, 12:30 AM IST

ಮಡಿಕೇರಿಯಲ್ಲಿ ಮನೆ ಮನೆಗೆ ‘ಗೃಹ ಆರೋಗ್ಯ ಕಾರ್ಯಕ್ರಮ’ ಅನುಷ್ಠಾನ ಪೂರ್ವಭಾವಿ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನೆರವೇರಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಭಾರತದಲ್ಲಿ ಒಟ್ಟಾರೆ ಮರಣಗಳಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದ ಶೇ.೬೧.೮ ಸಾವು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು ಶೀಘ್ರ ಪತ್ತೆ ಮತ್ತು ತ್ವರಿತ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಳ್ಳಲು ಗೃಹ ಆರೋಗ್ಯ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ..

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ‘ಗೃಹ ಆರೋಗ್ಯ ಕಾರ್ಯಕ್ರಮ’ದ ಬಗ್ಗೆ ಮಾಹಿತಿ ನೀಡಿ, ೩೦ ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಮನೆ ಮನೆಗೆ ತೆರಳಿ ಸಾಂಕ್ರಾಮಿಕ ವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ಮಾಡಲಾಗುತ್ತದೆ. ಯೋಜನೆಯಡಿ ಎಲ್ಲಾ ಸಾರ್ವಜನಿಕರ ಆರೋಗ್ಯ ಮಟ್ಟ ಸುಧಾರಿಸುವ ಮತ್ತು ಸಾಂಕ್ರಾಮಿಕ ವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿ ಹೊಂದಿದೆ ಎಂದರು.

ಕೊಡಗಿನಲ್ಲಿ ಜ.೬ ರಿಂದ ಈ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು. ಜನತೆಯ ಮನೆ ಮನೆ ಬಾಗಿಲಿಗೆ ಆರೋಗ್ಯ ಸೇವೆ ಸಲ್ಲಿಸುವುದು ರಾಜ್ಯ ಸರ್ಕಾರದ ಯೋಜನೆ. ಸಮುದಾಯ ಆರೋಗ್ಯ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರನ್ನು ಒಳಗೊಂಡ ೧೫೦ ತಂಡಗಳು ವಾರದಲ್ಲಿ ೩ ದಿನ ಪ್ರತಿ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಉಚಿತ ಔಷಧಿ ತಲುಪಿಸಲಾಗುತ್ತದೆ.

ಈಗಾಗಲೇ ಕ್ರಿಯಾ ಯೋಜನೆ ತಯಾರಿಸಲಾಗಿದೆ. ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭ ಕೊರಳಿನ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆಗಳು, ನಿದ್ರಾಹೀನತೆ ಈ ಕಾಯಿಲೆಗಳ ಬಗ್ಗೆ ತಪಾಸಣೆ ಮಾಡಲಿದ್ದಾರೆ. ಕ್ಯಾನ್ಸರ್ ಚಿಹ್ನೆ ಲಕ್ಷಣಗಳು ಕಂಡುಬಂದಲ್ಲಿ ತಜ್ಞ ವೈದ್ಯರ ಮೂಲಕ ರೋಗ ನಿರ್ಣಯ ಖಾತ್ರಿಪಡಿಸಿ ಮುಂದಿನ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಚ್‌ಒ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಗೃಹ ಆರೋಗ್ಯ ಕಾರ್ಯಕ್ರಮ ಸರಿಯಾಗಿ ಮನೆ ಮನೆಗೆ ತಲುಪಿಸಿ ಯಶಸ್ವಿಗೊಳಿಸಲು ನಿರ್ದೇಶನ ನೀಡಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಇಂದೂಧರ್, ಡಾ.ಚೇತನ್, ಡಾ.ಯತಿರಾಜ್ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಡಿಪಿಸಿ ಡಾ.ಶಾಂಭವಿ, ಡಿಪಿಎಂ ದೇವರಾಜು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.