ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿ ಬರ ಪರಸ್ಥಿತಿ ಎದುರಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರ ರೈತರ ಪರವಾಗಿ ನಿಲ್ಲಲಿದೆ. ಶೇ.17ರಷ್ಟು ಬಿತ್ತನೆಯಾಗಿದೆ. ಬಹುತೇಕ ಕಡೆ ಬಿತ್ತನೆಯೇ ಆಗಿಲ್ಲ. ರೈತರ ಈ ನೈಜ ಸ್ಥಿತಿಯನ್ನು ಖುದ್ದು ವೀಕ್ಷಿಸಲಾಗಿದೆ. ಸಮಗ್ರ ಹಾಗೂ ವೈಜ್ಞಾನಿಕ ವರದಿ ಸಲ್ಲಿಸಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ. ಪಾಟೀಲರು ಹೇಳಿದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾನುವಾರ ಬೆಳಿಗ್ಗೆ ಬರ ಅವಲೋಕನಾ ಪ್ರವಾಸ ಕೈಗೊಂಡ ಸಚಿವರು, ಮದಭಾವಿ, ಶಿವಣಗಿ, ದೇವರ ಹಿಪ್ಪರಗಿ, ಬಮ್ಮನಜೋಗಿ, ಕನ್ನೊಳಿ ಸೇರಿ ವಿವಿಧ ಪ್ರದೇಶಗಳ ವ್ಯಾಪ್ತಿಯ ಕೃಷಿಕರ ತೋಟಗಳಿಗೆ ತೆರಳಿ ಹತ್ತಿ, ಕಬ್ಬು ಸೂರ್ಯಕಾಂತಿ, ತೊಗರಿ ಸೇರಿದಂತೆ ವಿವಿಧ ಬೆಳೆಗಳ ಪ್ರಸ್ತುತ ಸ್ಥಿತಿ ಅವಲೋಕಿಸಿ ಮಾತನಾಡಿದರು. ಬಿತ್ತಿದ ಬೆಳೆಗಳು ಸಂಪೂರ್ಣ ಹಾನಿಗೀಡಾಗುವ ಪರಿಸ್ಥಿತಿಯಿದೆ. ಹಾಗಾಗಿ ಖುದ್ದು ಬರ ಪರಿಸ್ಥಿತಿ ವೀಕ್ಷಿಸಿ, ರೈತರನ್ನು ಕಷ್ಟದಿಂದ ಪಾರು ಮಾಡುವ ಸದುದ್ದೇಶದಿಂದ ಸರ್ಕಾರದಿಂದ ಸೂಕ್ತ ಒದಗಿಸುವುದಾಗಿ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಮಳೆ ಬರುತ್ತಿತ್ತು. ಆದರೆ ಬಿರುಸಾದ ಗಾಳಿಯಿಂದಾಗಿ ಮಳೆಯಾಗಿಲ್ಲ. ಹೀಗಾಗಿ ಜಿಲ್ಲೆಯಾದ್ಯಂತ ಒಣ ಹವೆ ಮುಂದುವರಿದಿದೆ. ಜಿಲ್ಲೆಯ ಬರ ಪರಿಸ್ಥಿತಿಯನ್ನು ಮುಂಗಾರು ಆರಂಭದಿಂದಲೇ ನಾನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೆ. ಹೀಗಾಗಿ ನಿರಂತರವಾಗಿ ಬರ ಪರಿಸ್ಥಿತಿ ಪೂರ್ವಭಾವಿ ಸಭೆಗಳನ್ನು ನಡೆಸಿ, ಎಲ್ಲ ಮಾಹಿತಿ ಕಲೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಸೂಕ್ತ ಪರಿಹಾರ ಕೊಡಿಸುವುದರಿಂದ ವಿಮುಖನಾಗುವುದಿಲ್ಲ ಎಂದು ಹೇಳಿದರು. ಕುಡಿಯುವ ನೀರಿಗೆ ತೊಂದರೆಯಿಲ್ಲ: ಜಿಲ್ಲೆಯಲ್ಲಿ ವಾಡಿಕೆಯಷ್ಟು ಆಗಬೇಕಾದ ಮಳೆಯಾಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಬೆಳೆಗಳು ಒಣಗುವ ಹಂತದಲ್ಲಿವೆ. ಆದರೆ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಏನಿಲ್ಲ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿದೆ. ಹಾಗಾಗಿ ಕುಡಿಯುವ ನೀರಿಗೆ ತೊಂದರೆ ಏನಿಲ್ಲ ಎಂದು ಹೇಳಿದರು.

ವೈಜ್ಞಾನಿಕ ವರದಿ ಸಲ್ಲಿಕೆಗೆ ಸೂಚನೆ:


ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ತಪ್ಪುಗಳಾಗದಂತೆ ವೈಜ್ಞಾನಿಕವಾಗಿ ವರದಿ ಸಲ್ಲಿಸಿ, ಬರ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಆಗಸ್ಟ್ ಅಂತ್ಯದಲ್ಲಿ ಬರ ಘೋಷಣೆ ಸಾಧ್ಯತೆ: ಕೇಂದ್ರ ಸರ್ಕಾರ ಆಗಸ್ಟ್ ಅಂತ್ಯದಲ್ಲಿ ಬರ ಪರಿಸ್ಥಿತಿ ಘೋಷಿಸಬಹುದು. ಬರ ಪರಿಸ್ಥಿತಿ ಎದುರಾದಾಗ ಕೇಂದ್ರ ಸರ್ಕಾರ ವಾಡಿಕೆಯಂತೆ ಆಗಸ್ಟ್ ಅಂತ್ಯದಲ್ಲಿ ಅಧಿಕೃತವಾಗಿ ಬರ ಘೋಷಣೆ ಮಾಡುವ ಸಾಧ್ಯತೆಯಿದೆ. ಕಳೆದ ವರ್ಷ ಜಿಲ್ಲೆಯಲ್ಲಿ 97 ಸಾವಿರ ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಅವರಿಗೆ ₹235 ಕೋಟಿ ಬೆಳೆ ವಿಮೆ ಮಂಜೂರಾಗಿದೆ. ಈ ವರ್ಷ 2.54 ಲಕ್ಷ ರೈತರು ಬೆಳೆ ವಿಮೆಗೆ ರೈತರು ನೋಂದಾಯಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.

ಮಳೆ ಅಭಾವದಿಂದಾಗಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಬಿತ್ತನೆ ಮಾಡಿದ ಪೈರು ಒಣಗುತ್ತಿರುವುದನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದ ಸಚಿವರು, ಸ್ಥಳದಲ್ಲಿದ್ದ ರೈತರು ಹಾಗೂ ಕೃಷಿ ಅಧಿಕಾರಿಗಳಿಂದ ಬೆಳೆಹಾನಿ ಸಮಗ್ರ ಮಾಹಿತಿ ಪಡೆದುಕೊಂಡರು. ರೈತರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದ ಸಚಿವ ಡಾ.ಎಂ.ಬಿ.ಪಾಟೀಲರು, ಜಿಲ್ಲೆಯಾದ್ಯಂತ ಭೇಟಿ ನೀಡಿ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ಸುದೀರ್ಘ ವೀಕ್ಷಣೆ ನಡೆಸಿ ಪೂರ್ಣಪ್ರಮಾಣದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ ತಕ್ಷಣ ಸರ್ಕಾರ ಸೂಕ್ತ ನಿರ್ಧಾರ ಕ್ರಮ ಕೈಗೊಳ್ಳಲಿದೆ. ರೈತರ ಪ್ರತಿಯೊಂದು ಸಂಕಷ್ಟಕ್ಕೂ ಸರ್ಕಾರ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ, ಅವರ ಹಿತರಕ್ಷಣೆಗೆ ಸದಾ ಬದ್ಧವಾಗಿರುತ್ತದೆ ಎಂದು ಸಚಿವರು ಹೇಳಿದರು.

ಮದಭಾವಿಗೆ ಸಚಿವರ ಭೇಟಿ: ನಂತರ ಮದಭಾವಿ ಗ್ರಾಮಕ್ಕೆ ತೆರಳಿ ತೊಗರಿ ಹಾಗೂ ಹತ್ತಿ ಬೆಳೆ ವೀಕ್ಷಿಸಿದರು. ಗ್ರಾಮದ ರೈತ ಸೋಮನಿಂಗ ಬೀರಪ್ಪ ಹಿರೇಕುರುಬರ ಅವರ ಎರಡು ಎಕರೆ ಮಳೆಯಾಶ್ರಿತ ಜಮೀನಿಗೆ ಸಚಿವರು ಭೇಟಿ ನೀಡಿ, ಬೆಳೆ ವೀಕ್ಷಣೆ ಮಾಡಿ ರೈತರ ಸಮಸ್ಯೆ ಆಲಿಸಿದರು.

ಶೀಘ್ರದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ: ​ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಕ್ಷಣವೇ ಸೂಕ್ತ ಹಾಗೂ ನಿಖರವಾದ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದ ಸಚಿವರು, ಸರ್ಕಾರ ಸಂಕಷ್ಟದಲ್ಲಿರುವ ರೈತರ ಪರವಾಗಿ ನಿಲ್ಲಲು ಸಂಪೂರ್ಣ ಬದ್ಧವಾಗಿದೆ. ಸದ್ಯದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಶಾಸಕರಾದ ವಿಠ್ಠಲ ಕಟಕಧೊಂಡ, ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಪಂಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಬಿರಾದಾರ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸಿದ್ರಾಮಯ್ಯ ಬರಗಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.