ಸಂಭವನೀಯ ಪ್ರವಾಹ ಪರಿಸ್ಥಿತಿ ತಡೆಗೆ ಸಿದ್ಧತೆ ಮಾಡಿಕೊಳ್ಳಿ

| Published : Jul 01 2025, 12:47 AM IST

ಸಾರಾಂಶ

ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ಟಾಸ್ಕ್‌ಪೋರ್ಸ್‌ಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ಟಾಸ್ಕ್‌ಪೋರ್ಸ್‌ಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಜರುಗಿದ ಕಂದಾಯ ಇಲಾಖೆ‌ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಮುಂಗಾರು ಪ್ರಾರಂಭವಾಗಿದ್ದು, ವಾಡಿಕೆಗಿಂತ ಹೆಚ್ಚಿನ‌ ಮಳೆ ಆಗುತ್ತಿದೆ. ಎಲ್ಲ ನದಿಗಳ ಒಳ ಹರಿವು ಹೆಚ್ವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಸಂಭವನೀಯ ಪ್ರವಾಹಕ್ಕೆ‌ ಒಳಗಾಗಬಹುದಾದ ಗ್ರಾಮಗಳಲ್ಲಿನ ಜನ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ‌ ಅಗತ್ಯ ಬಿದ್ದರೇ ಪೊಲೀಸ್‌ ಸಿಬ್ಬಂದಿ ಸಹಾಯ ಪಡೆದುಕೊಳ್ಳುವಂತೆ ಸೂಚಿಸಿದರು.ಸಾರ್ವಜನಿಕೆಗೆ ತೊಂದರೆಯಾದರೆ ಪರಿಹಾರ ವಿತರಿಸಿ ಬರುವುದು ಅಧಿಕಾರಿಗಳ ಕೆಲಸವಲ್ಲ. ತೊಂದರೆಯಾಗುವ ಮುಂಚೆಯೇ ಸಾರ್ವಜನಿಕರಿಗೆ ತಿಳಿಹೇಳಿ ಅನಾಹುತಗಳನ್ನು ತಪ್ಪಿಸುವ ನೀರಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.ಹಾನಿಗಳನ್ನು ತಡೆಗಟ್ಟಲು ಮುಂಚಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಪಂಚಾಯತಿ ಪಿಡಿಒ ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ಪ್ರವಾಹ ನಿರ್ವಹಣೆಗೆ ಶ್ರಮಿಸಬೇಕು. ಜಿಲ್ಲೆಯಲ್ಲಿರುವ ಪಂಚಾಯತಿ ಸರ್ವೇ ಈಗಾಗಲೇ ಮಾಡಲಾಗಿದ್ದು, ಪ್ರವಾಹ ಮಳೆಹಾನಿ ಪ್ರದೇಶಗಳನ್ನು ಗುರುತಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಕಡ್ಡಾಯವಾಗಿ ಜಾಗೃತಿ ಜನರನ್ನು ಸ್ಥಳಾಂತರಕ್ಕೆ ಕ್ರಮ ವಹಿಸಬೇಕು. ಶಿಥಿಲಾವಸ್ಥೆಯಲ್ಲಿ ಇರುವಂತಹ ಶಾಲೆ,‌ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸದಂತೆ ನಿಗಾವಹಿಸಲು‌ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದರ ಜತೆಗೆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿ ಇರುವಂತಹ‌ ಮನೆಗಳನ್ನು ಗುರುತಿಸಿ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು‌ ಮನ ಒಲಿಸುವಂತೆ ತಿಳಿಸಿದರು.ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಪರಿಹಾರವನ್ನು ಮಾರ್ಗಸೂಚಿಗಳನ್ವಯ ವಿತರಿಸಬೇಕು. ಅತಿವೃಷ್ಟಿ ಸಂದರ್ಭದಲ್ಲಿ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯದ ಬೋಟ್‌ಗಳ ವ್ಯವಸ್ಥೆ ಮಾಡಿಕೊಳ್ಳುವುದರ ಜೊತೆಗೆ ಅವುಗಳ‌ ನಿರ್ವಹಣೆಯನ್ನು ಮಾಡಬೇಕು. ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನೀರಿಕ್ಷಕರು ತಮ್ಮ‌ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆ, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳನ್ನು ಗುರುತಿಸಿ ಅವುಗಳ ಬಳಕೆ ನಿಷೇದಿಸಬೇಕು. ಅಲ್ಲದೇ ಹಳ್ಳ,ನದಿಗಳ ಹತ್ತಿರ ಜನ-ಜಾನುವಾರುಗಳ ಸಂಚಾರ‌ ನಿರ್ಬಂಧಿಸಬೇಕು. ಈ ಕಾರ್ಯದಲ್ಲಿ ಗ್ರಾಮ ಪಂಚಾಯತ ಹಾಗೂ ಪೊಲಿಸ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಸಂಭವನೀಯ ಅನಾಹುತ ತಪ್ಪಿಸಲು ‌ಮುಂದಾಗುವಂತೆ ತಿಳಿಸಿದರು.ಜಿಲ್ಲೆಯಲ್ಲಿ ಪೋಡಿಮುಕ್ತ ಗ್ರಾಮ ಅಭಿಯಾನವನ್ನು ಹಮ್ಮಿಕೊಳ್ಳಬೇಕು. ತಹಸೀಲ್ದಾರ್‌, ಉಪವಿಭಾಗಾಧಿಕಾರಿಗಳ ಹಂತದಲ್ಲಿ‌ನ ಕೋರ್ಟ್‌ ಕೇಸ್‌ಗಳನ್ನು ತ್ವರಿತವಾಗಿ ವಿಲೇ ಮಾಡಬೇಕು. ಗ್ರಾಮಲೆಕ್ಕಾಧಿಕಾರಿಗಳಿಗೆ ಸ್ಥಳೀಯವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಲು ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸಲು ಸ್ಥಳಾವಕಾಶ ಒದಗಿಸಲಾಗಿದೆ ಎಂದರು.ಕಂದಾಯ ಇಲಾಖೆಗೆ ಸಂಬಂಧಿಸಿದ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ವಿನಾಕಾರಣ ಸಾರ್ವಜನಿಕರ ಕಚೇರಿ ಅಲೆದಾಟವನ್ನು ತಪ್ಪಿಸಬೇಕು. ಈ ಕಾರ್ಯದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಸಾಮಾಜಿಕ ಭದ್ರತೆ ಯೋಜನೆಯಡಿ ನೀಡಲಾಗುತ್ತಿರುವ ವಿವಿಧ ಪಿಂಚಣಿಗಳು ಅರ್ಹ ಫಲಾನುಭವಿಗಳಿಗೆ ದೊರಕುವಂತಾಗಬೇಕು.‌ ಜಿಲ್ಲೆಯಲ್ಲಿ ಅನರ್ಹರಿಗೆ ಪಿಂಚಣಿ ನೀಡಲಾಗುತ್ತಿರುವ ಕುರಿತು ದೂರುಗಳು ಬಂದಿದ್ದು‌, ಈ ಕುರಿತು ಪರಿಶೀಲಿಸಿ ವರದಿ ನೀಡಲು ಸೂಚಿಸಿದರು.

ಕಂದಾಯ ಗ್ರಾಮದಡಿ ಹಕ್ಕು ಪತ್ರ ವಿತರಣೆಗೆ ಕ್ರಮ‌ ವಹಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರ ವಿತರಣೆಗೆ ತ್ವರಿತ ಕ್ರಮ‌ ಜರುಗಿಸಬೇಕು. ಈ ಕುರಿತು ತಹಸೀಲ್ದಾರರು ಕ್ಷೇತ್ರ ಭೇಟಿ ಮಾಡಿ ಬಿಟ್ಟು ಹೋದಂತಹ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು‌ ಕ್ರಮ‌ ವಹಿಸುವಂತೆ ತಿಳಿಸಿದರು.

ಆಸ್ತಿಗಳ‌ ಭದ್ರತೆಗೆ ಆಧಾರ ಸಂಖ್ಯೆ ಜೊಡಣೆಯಾಗಿದ್ದು, ಇದನ್ನು ಇನ್ನೂ‌ ಭದ್ರಪಡಿಸಲು ಈ-ಕೆವೈಸಿ ಮಾಡಲಾಗುತ್ತಿದೆ. ಇದರಿಂದಾಗಿ ಒಬ್ಬರ ಆಸ್ತಿ‌ ಇನ್ನೊಬ್ಬರ ಆಸ್ತಿ‌ ಪಾಲಾಗದಂತೆ ಮಾಡಬಹುದಾಗಿದೆ ಎಂದರು.ಅನುಮತಿ ಇಲ್ಲದೇ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗಾಗಿ ಬಳಸಲಾಗುತ್ತಿದ್ದು, ಈ ಕುರಿತು ಪರಿಶೀಲಿಸಬೇಕು. ಕೃಷಿಯೇತರ ಚಟುವಟಿಕೆಗಳಿಗಾಗಿ ಬಳಸಲಾಗುವ ಭೂಮಿಯನ್ನು ಪಹಣಿಯಲ್ಲಿ ದಾಖಲಿಸುವುದರಿಂದ ಭೂಮಿ ಮಾರಾಟದಲ್ಲಿ ಆಗುವಂತಹ‌ ಮೋಸವನ್ನು ತಡೆಗಟ್ಟ ಬಹುದಾಗಿದೆ ಎಂದರು.ಭೂ ಸುರಕ್ಷಾ ಯೋಜನೆಯಡಿ ಕಂದಾಯ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣ ಕಾರ್ಯವನ್ನು ಇನ್ನಷ್ಟು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಕಾರ್ಯದಲ್ಲಿ ಉದಾಸಿನ ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಸಿದ ಅವರು ಭೂ ಸುರಕ್ಷ ಯೋಜನೆಯಡಿ ಪ್ರಗತಿ ಸಾಧಿಸದೆ ಇರುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕ್ರಮಕ್ಕೆ ಸೂಚನೆ ನೀಡಿದರು. ಕಂದಾಯ ಇಲಾಖೆಯ‌ ಎಲ್ಲ ಕಚೇರಿಗಳು ಇ-ಆಫೀಸನಡಿ ಕಾರ್ಯ ನಿರ್ವಹಿಸಬೇಕು. ಅದೇ ರೀತಿ ನಾಡ ಕಚೇರಿಗಳೂ ಇ-ಆಫೀಸನಲ್ಲಿಯೇ ಕಡತಗಳನ್ನು‌ ಮಂಡಿಸಬೇಕು.‌ ಈ ಕುರಿತು ಸಿಬ್ಬಂದಿಗಳಿಗೆ ಇ-ಆಫೀಸ್ ಬಳಕೆ ಕುರಿತು ತರಬೇತಿ ನೀಡಬೇಕು. ಜಿಲ್ಲೆಯಲ್ಲಿ ರಚನೆಯಾಗಿರುವ ಹೊಸ ತಾಲೂಕುಗಳಿಗೆ ಪ್ರಜಾಸೌಧ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಅಲ್ಲದೆ ಶೀಥಿಲಾವಸ್ಥೆಯಲ್ಲಿರುವ ನಾಡಕಚೇರಿಗಳ ದುರಸ್ಥಿಗೂ ಕ್ರಮ‌ ವಹಿಸಲಾಗುವದು ಎಂದು ಅವರು ತಿಳಿಸಿದರು.ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ನೆರೆಯ ಮಹಾರಾಷ್ಟ್ರದಲ್ಲಿ ಮಳೆ‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ‌ ಜಿಲ್ಲೆಯಲ್ಲಿನ ನದಿಗಳ ಒಳಹರಿವು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ‌ ಸಾಧಿಸಲಾಗುತ್ತಿದೆ ಎಂದು ತಿಳಿಸಿದರು.ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ, ಕಂದಾಯ ಇಲಾಖೆ ಆಯುಕ್ತರಾದ ಪಿ.ಸುನೀಲಕುಮಾರ, ಜಿಪಂ ಸಿಇಒ ರಾಹುಲ ಶಿಂಧೆ, ಪ್ರಶಿಕ್ಷಣಾರ್ಥಿ ಐ.ಎ.ಎಸ್. ಅಧಿಕಾರಿ ಅಭಿನವ ಜೈನ್, ಅಪರ‌‌ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್‌ರು, ಕಂದಾಯ ಇಲಾಖೆ ಸಿಬ್ಬಂದಿ ಸಭೆಯಲ್ಲಿ ಹಾಜರಿದ್ದರು.