ಸಾರಾಂಶ
ಭವಿಷ್ಯದ ಸವಾಲು ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ರೂಪಿಸಬೇಕಾದ ಅವಶ್ಯಕತೆಯಿದೆ ಎಂದು ಪಿಎಸ್ಐ ನಾಗಪ್ಪ ತಿಳಿಸಿದರು.
ಶಿರಸಿ: ಭವಿಷ್ಯದ ಸವಾಲು ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ರೂಪಿಸಬೇಕಾದ ಅವಶ್ಯಕತೆಯಿದೆ ಎಂದು ಪಿಎಸ್ಐ ನಾಗಪ್ಪ ತಿಳಿಸಿದರು.
ಇಲ್ಲಿನ ಸ್ಕೊಡ್ವೆಸ್ ಸಂಸ್ಥೆ, ದೇಸಾಯಿ ಫೌಂಡೇಶನ್ ಸಹಯೋಗದಲ್ಲಿ ನಗರದ ಮಾರಿಗುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಾಲ ಆರೋಗ್ಯ ಮೇಳ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಆಧುನಿಕತೆಯ ಭರಾಟೆಯಲ್ಲಿ ಜೀವನ ರೂಪಿಸಿಕೊಳ್ಳಬೇಕಾದರೆ ಪ್ರತಿಯೊಬ್ಬರು ಒಂದಿಲ್ಲ ಒಂದು ರೀತಿಯ ಕೌಶಲ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷೆ ಶಿವಲೀಲಾ ಹಿರೇಮಠ, ಸಾರ್ವಜನಿಕರು ಸರ್ಕಾರಿ ಶಾಲೆ ಅಭಿವೃದ್ಧಿಪಡಿಸಲು ಕೈ ಜೋಡಿಸಬೇಕು ಮತ್ತು ಬಡ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಸಂಘ-ಸಂಸ್ಥೆಗಳು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಮನವಿ ಮಾಡಿದರು.
ಗುಜರಾತ್ ದೇಸಾಯಿ ಫೌಂಡೇಶನ್ ಹಿರಿಯ ಕಾರ್ಯಕ್ರಮಾಧಿಕಾರಿ ಪ್ರಣವ್ ಸಿಂಗ್ ಮತ್ತು ಪ್ರತೀಕ್ ಪಾರೇಖ್, ಮಹಿಳೆಯರು ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಕುರಿತು ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಪ್ರೊ. ಕೆ.ಎನ್. ಹೊಸಮನಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.
ಇದೇ ವೇಳೆ ಸ್ಕೊಡ್ವೆಸ್ ಸಂಸ್ಥೆಯ ಕಾರ್ಯದರ್ಶಿ ಹಾಗೂ ಮುಖ್ಯ ಹಣಕಾಸು ಮತ್ತು ಆಡಳಿತಾಧಿಕಾರಿ ಸರಸ್ವತಿ ಎನ್. ರವಿ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ದಯಾನಂದ ಅಗಾಸೆ, ಸಾಮಾಜಿಕ ಕಾರ್ಯಕರ್ತ ರಾಮು ಕಿಣಿ ಮಾತನಾಡಿದರು.
ಕಾರ್ಯಕ್ರಮದಲ್ಲಿ 1 ಸಾವಿರಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ವಿವಿಧ ರೀತಿಯ ವಿಜ್ಞಾನ ವಸ್ತು ಪ್ರದರ್ಶನ, ಆಟಿಕೆ ಹಾಗೂ ಮಕ್ಕಳಿಗೆ ಕಣ್ಣು, ಚರ್ಮ ಹಾಗೂ ಸಾಮಾನ್ಯ ಕಾಯಿಲೆಗಳ ಕುರಿತು ವೈದ್ಯಕೀಯ ತಪಾಸಣಾ ನಡೆಸಲಾಯಿತು.
ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ, ಹಿರೋಸ್ ಫಾರ್ ಹ್ಯೂಮ್ಯಾನಿಟಿಯ ಸಂಯೋಜಕರು, ಸಂಸ್ಥೆಯ ಕಾರ್ಯಕ್ರಮಾಧಿಕಾರಿ ರಿಯಾಜ್ ಸಾಗರ್ ಇದ್ದರು.