ಸಾರಾಂಶ
- ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚನೆ । ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಭೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆ ಬಾಲಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಯಿಂದ ಬಿಡುಗಡೆಗೊಳಿಸುವ ಜೊತೆಗೆ ಪುನರ್ವಸತಿ ಕಲ್ಪಿಸಲು ಒತ್ತು ನೀಡಬೇಕು. ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಬಗ್ಗೆ ಧ್ವನಿಸುರುಳಿ ಪ್ರಚಾರ ಮೂಲಕ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನಾ ಸೊಸೈಟಿ ಅಧ್ಯಕ್ಷ ಡಾ. ಎಂ.ವಿ. ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಆಯೋಜಿಸಲಾದ ಕಾರ್ಯಕಾರಿ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬಾಲಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಬಿಡುಗಡೆ ಮತ್ತು ಪುನರ್ವಸತಿಗೊಳಿಸುವ ಬಗ್ಗೆ ದೊಡ್ಡ ಉದ್ದಿಮೆಗಳು ಫ್ಯಾಕ್ಟರಿಗಳು, ಡಾಬಾ ಹೋಟೆಲ್, ಶಾಪ್ಗಳಲ್ಲಿನ ಬಾಲಕಾರ್ಮಿಕರನ್ನು ಬಿಡುಗಡೆಗೊಳಿಸಿ, ಪುನರ್ವಸತಿ ಕಲ್ಪಿಸಬೇಕು. ಇಟ್ಟಂಗಿ ಭಟ್ಟಿಗಳಲ್ಲಿ, ಮಂಡಕ್ಕಿ ಭಟ್ಟಿಗಳಲ್ಲಿ, ಕೆಲಸ ಮಾಡಲು ಬೇರೆ ಬೇರೆ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯದಿಂದ ಕುಟುಂಬ ಸಮೇತರಾಗಿ 150 ರಿಂದ 200 ಕಾರ್ಮಿಕರು ವಲಸೆ ಬರುತ್ತಾರೆ. ಅವರ ಮಕ್ಕಳನ್ನು ಶಾಲೆಗೆ ಬರುವಂತೆ ಪೋಷಕರ ಮನವೊಲಿಸುವ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಬೇಕು. ಸಿ.ಆರ್.ಸಿ. ಸೆಂಟರ್ ಸಂಪರ್ಕಿಸಿ, ಮಕ್ಕಳಿಗೆ ಶಿಕ್ಷಣಕ್ಕೆ ಅನುಕೂಲ ಆಗುವಂತಹ ಚಟುವಟಿಕೆಗಳ ಆಟಿಕೆಗಳನ್ನು ನೀಡಿ, ಅರಿವು ಮೂಡಿಸುವುದು ಎಂದರು.
ಸಮೀಕ್ಷೆ ನಡೆಸಬೇಕು:ಎಸ್ಸಿಪಿ- ಟಿಎಸ್ಪಿ ಅನುದಾನ ನೀಡಿರುವ ಮಾರ್ಗದರ್ಶನದಂತೆ ಗ್ರಾಮಿಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಭೇಟಿ ನೀಡಿ, ವಾಸ್ತವತೆ ಸಮಿಕ್ಷೆ ನಡೆಸಬೇಕು. ಅಲ್ಲಿರುವ ಮಕ್ಕಳ ಬಗ್ಗೆ ಪರಿಶೀಲಿಸಿ, ಕನಿಷ್ಠ ಹತ್ತನೇ ತರಗತಿಯವರೆಗೆ ಶಿಕ್ಷಣ ಪಡೆಯುವಂತೆ ಮಕ್ಕಳಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿಗಳಿಗೆ ಹಾಗೂ ಸಿಆರ್ಪಿಗಳಿಗೆ ಡಿಸಿ ಸೂಚಿಸಿದರು.
ಕೈಗಾರಿಕೆ ಮತ್ತು ಹೋಟೆಲ್ಗಳಲ್ಲಿ ಕೆಲಸಗಳಲ್ಲಿ ಹೆಚ್ಚಾಗಿ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಜಿಲ್ಲಾ ಕಾರ್ಯ ಪಡೆಯಲ್ಲಿ ನೇಮಕಗೊಂಡಿರುವ ಎಲ್ಲ ಇಲಾಖೆ ಅಧಿಕಾರಿಗಳು ಮಾಸಿಕ ತಪಾಸಣೆಗಳಲ್ಲಿ ಭಾಗವಹಿಸಿ ಬಾಲಕಾರ್ಮಿಕರು ಕಂಡುಬಂದಲ್ಲಿ ಅವರಲ್ಲಿ ಅರಿವು ಮೂಡಿಸಿ, ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ನಂತರ ಮಕ್ಕಳ ಕುಟುಂಬಕ್ಕೆ ಸಾಮಾಜಿಕ ಭದ್ರತೆಯಡಿ ಸರ್ಕಾರದ ಸೇವೆಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಸಹಕರಿಸುವಂತೆ ಹೇಳಿದರು.ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಡಿಡಿಪಿಐ ಕೊಟ್ರೇಶ್, ಜಿಲ್ಲಾ ಮಕ್ಕಳ ಘಟಕದ ರಕ್ಷಣಾಧಿಕಾರಿ ಕವಿತ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
- - -ಬಾಕ್ಸ್
* ಮೊರಾರ್ಜಿ ಶಾಲೆಗಳಿಗೆ ದಾಖಲಿಸಿಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರೆಣ್ಣವರ್ ಮಾತನಾಡಿ, ಅನಿರೀಕ್ಷಿತ ದಾಳಿಯಲ್ಲಿ ಸಿಕ್ಕ ಮಕ್ಕಳನ್ನು ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ದಾಖಲಿಸುವುದು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಪಡೆದು ಪುನಃ ಶಾಲೆಗೆ ದಾಖಲಿಸಿಕೊಳ್ಳುವುದು ಮಕ್ಕಳು ಶಾಲೆಯಿಂದ ಹೊರಗೆ ಉಳಿಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದರು. ನವೆಂಬರ್ ತಿಂಗಳಿಂದ ಆನಗೋಡು, ಕುಕ್ಕುವಾಡ, ಹರಿಹರದಲ್ಲಿ ಕಬ್ಬು ಕಟಾವು ಮಾಡಲು ಮಹಾರಾಷ್ಟ್ರದಿಂದ ಕಾರ್ಮಿಕ ಕುಟುಂಬ ವಲಸೆ ಬರುತ್ತಾರೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆ ಗಮನಕ್ಕೆ ತಂದರು. ಆಗ, ಅಂತಹ ಮಕ್ಕಳನ್ನು ಗಮನಿಸಿ, ಅವರು ಶಿಕ್ಷಣದಿಂದ ವಂಚಿತರಾಗದಂತೆ ನಾವೆಲ್ಲರೂ ಶ್ರಮಿಸೋಣ ಎಂದರು.
- - - -5ಕೆಡಿವಿಜಿ36ಃ:ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಯಿತು.