ಸಾರಾಂಶ
ರಾಮನಗರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ಮೇಲೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುಡಿವ ನೀರು ಪೂರೈಕೆ ಹಾಗೂ ಮೇವಿನ ವ್ಯವಸ್ಥೆಗಾಗಿ ಪ್ರತಿ ಪಂಚಾಯಿತಿಗೆ 10 ಲಕ್ಷ ರು, ತಾಲೂಕಿಗೆ 1 ಕೋಟಿ ರು.ಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳ ಖಾತೆಗೆ 10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮಕ್ಕೆ ಕಳೆದ ಸಾಲಿನಲ್ಲಿ 1 ಕೋಟಿ ರು. ಅನುದಾನ ನೀಡಲಾಗಿತ್ತು. ಇದರಲ್ಲಿ 49 ಹೊಸ ಬೋರ್ವೆಲ್ ಕೊರೆಸಲಾಗಿದೆ. ಅದೇ ರೀತಿ ಕೊಳವೆಬಾವಿ ದುರಸ್ತಿಗಾಗಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಕುಡಿಯುವ ನೀರು ಸರಬರಾಜು ಮಾಡಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ನಲ್ಲಿ ಯಾವುದೇ ಸಂಸ್ಥೆಗಳು ಭಾಗವಹಿಸಿಲ್ಲ. ಆದ್ದರಿಂದ ತಾಪಂವಾರು ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮವಹಿಸಬೇಕು. ಯಾವುದೇ ಲೋಪದೋಷ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿ ಕ್ರಮವಹಿಸಲಾಗುವುದು ಎಂದರು.ಆನೆದಾಳಿ ನಿಯಂತ್ರಿಸಲು ಕ್ರಮ:
ಜಿಲ್ಲೆಯು ಕಾವೇರಿ ಮತ್ತು ಬನ್ನೇರುಘಟ್ಟ ಅರಣ್ಯ ಪ್ರದೇಶಗಳನ್ನು ಒಳಗೊಂಡಿದ್ದು ಅಂದಾಜು 400 ಆನೆಗಳು ಇರುವುದಾಗಿ ಇವುಗಳಲ್ಲಿ 30ರಿಂದ 40 ಆನೆಗಳು ಹೆಚ್ಚಾಗಿ ಕಾವೇರಿ ಅರಣ್ಯ ಪ್ರದೇಶದಲ್ಲಿ ಓಡಾಟವಿರುತ್ತದೆ. ಈವೆರೆಗೆ 10 ಜನರು ಆನೆದಾಳಿಗೆ ಒಳಪಟ್ಟು ಮೃತಪಟ್ಟಿದ್ದಾರೆ. ಮೃತರಿಗೆ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೆ 33 ಕಿಮೀ ಬ್ಯಾರಿಕೇಡ್ ನಿರ್ಮಿಸಲು ಅನುಮತಿ ದೊರಕಿದ್ದು ಈ ಕಾಮಗಾರಿಯು ಪ್ರಗತಿಯಲಿದೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ 1800 ಜನರಿಗೆರ ಇ-ಸ್ವತ್ತು ವಿತರಿಸಲಾಗಿದೆ. ನಮೂನೆ 6-10 ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು ಕೆಲವು ತಾಂತ್ರಿಕ ಸಮಸ್ಯೆಯಿಂದಾಗಿ ವಿಳಂಬವಾಗುತ್ತಿದ್ದು ಇದನ್ನು ಕೂಡಲೇ ಇತ್ಯರ್ಥ ಪಡಿಸಲಾಗುವುದು. ರುದ್ರಭೂಮಿಗೆ ಜಮೀನನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಗ್ರಾಮಗಳಲ್ಲಿ ಸ್ಮಶಾನದ ಸಮಸ್ಯೆ ಇರುವುದರಿಂದ ಅಗತ್ಯವಿರುವ ಕಡೆ ಜಾಗ ಗುರುತಿಸಿ ಕೂಡಲೇ ಅವುಗಳನ್ನು ನಿರ್ಮಿಸಲು ಕ್ರಮವಹಿಸುವಂತೆ ಸೂಚಿಸಿದರು.
ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಬಾಕಿ ಇರುವ ಫಲಾನುಭವಿಗಳ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಯೋಜನೆಗಳನ್ನು ಫಲನುಭವಿಗಳಿಗೆ ದೊರಕಿಸಿಕೊಡಲು ಅಧಿಕಾರಿಗಳು ಕ್ರಮವಹಿಸುವಂತೆ ರಾಮಲಿಂಗಾರೆಡ್ಡಿ ತಿಳಿಸಿದರು.ಸಭೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಶಾಸಕ ಎಚ್.ಸಿ. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ , ಅ.ದೇವೆಗೌಡ, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್ಪಿ ಕಾರ್ತಿಕ್ ರೆಡ್ಡಿ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.1ಕೆಆರ್ ಎಂಎನ್ 11.ಜೆಪಿಜಿ
ರಾಮನಗರ ಜಿಪಂ ಸಭಾಂಗಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಜನತಾದರ್ಶನ-ಜನರಿಗೆ ಸ್ಪಂದಿಸುವ ಕಾರ್ಯಕ್ರಮ
ಮಾಗಡಿ: ಜಿಲ್ಲಾ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳಿಗೆ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ನೀಡಲು ಕಳೆದ 4 ತಿಂಗಳಿಂದ ಜನತಾ ದರ್ಶನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಕೌಂಟರ್ಗಳನ್ನು ನಿರ್ಮಿಸಲಾಗಿದ್ದು, ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.ತಾಲೂಕಿನ ಸೋಲೂರು ಗ್ರಾಮದ ಆರ್ಯ ಈಡಿಗರ ಸಂಸ್ಥಾನ ಮಠದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಕರೆ ನೀಡಿದರು.
ಜನತಾ ದರ್ಶನ ಕಾರ್ಯಕ್ರಮ ಜನರಿಗೆ ಸ್ಪಂದಿಸುವ ಕಾರ್ಯಕ್ರಮವಾಗಬೇಕು. ಜನರ ಸಮಸ್ಯೆಗಳನ್ನು ಪರಿಶೀಲಿಸಿ ಕಾನೂನು ಚೌಕಟ್ಟಿನಲ್ಲಿ ಪರಿಹರಿಸಬೇಕು. ಜನರ ಸಮಸ್ಯೆಗಳಿಗೆ ಪರಿಹಾರ ದೊರೆತಾಗಲೇ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಎಲ್ಲಾ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಲು ತಮ್ಮ ಸಮಯ ನೀಡಬೇಕು ಎಂದರು.ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು.
ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್ಪಿ ಕಾರ್ತಿಕ್ ರೆಡ್ಡಿ, ಉಪ ವಿಭಾಗಾಧಿಕಾರಿ ಬಿನೋಯ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.1ಕೆಆರ್ ಎಂಎನ್ 12.ಜೆಪಿಜಿ
ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನತಾದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.