ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಆದ್ಯತೆ: ಮುನಿಯಪ್ಪ

| Published : Mar 03 2024, 01:33 AM IST

ಸಾರಾಂಶ

ದೊಡ್ಡಬಳ್ಳಾಪುರ/ಕುಂದಾಣ: ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ದೊಡ್ಡಬಳ್ಳಾಪುರ/ಕುಂದಾಣ: ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಜಿಲ್ಲಾಡಳಿತದ ಭವನದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ವರ್ಷ ಜಿಲ್ಲಾದ್ಯಂತ ಬರಗಾಲ ಎದುರಾಗಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಇದುವರೆಗೆ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಮುಂಜಾಗ್ರತೆಯಿಂದ ಜನರಿಗೆ ಕುಡಿವ ನೀರು ಸಮಸ್ಯೆ ಆಗದಂತೆ ಕ್ರಮ ವಹಿಸಿ, ಜಲಜೀವನ್ ಮಿಷನ್ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಿ, ಮೋಟಾರ್ ಪಂಪ್ ಅಳವಡಿಸಿ ನೀರು ಪೂರೈಸಿ, ಖಾಸಗಿ ಕೊಳವೆಬಾವಿ ಹಾಗೂ ನೀರಿನ ಟ್ಯಾಂಕರ್‌ಗಳನ್ನು ಅತಿ ಅವಶ್ಯಕತೆ ಇದ್ದಾಗ ಮಾತ್ರ ಬಳಸಿಕೊಳ್ಳಿ. ಜಿಲ್ಲೆಯ ಯಾವುದೇ ಗ್ರಾಮ, ನಗರ ಪ್ರದೇಶಗಳಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣವಾಗದಂತೆ, ಜಾನುವಾರುಗಳಿಗೆ ಮೇವು ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆ:

ಜಿಲ್ಲೆಯಲ್ಲಿ ಇರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಪರಿಶೀಲನೆ ಮಾಡಿ. ಅಗತ್ಯ ಇರುವ ಸ್ಥಳದಲ್ಲಿ ಹೊಸದಾಗಿ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ. ಕೃಷಿ, ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿ, ಬೆಳೆ ಪರಿಹಾರವನ್ನು ಅರ್ಹ ರೈತರಿಗೆ ತಲುಪಿಸಬೇಕು. ಬೆಳೆ ವಿಮೆ ಯೋಜನೆ ಅಡಿ ನೋಂದಾಯಿತ ರೈತರಿಗೆ ಪ್ರೋತ್ಸಾಹ ನೀಡಿ. ರೇಷ್ಮೆ ಬೆಳೆಯನ್ನು ವಿಮಾ ಯೋಜನೆಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದರು.

ಆಂಬ್ಯುಲೆನ್ಸ್‌ ಸೇವೆ ಸಮರ್ಪಕಗೊಳಿಸಿ:

ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಸೇವೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಜನರ ಆರೋಗ್ಯ ಹಿತದೃಷ್ಟಿಯಿಂದ ಸಮರ್ಪಕ ಔಷಧಿಗಳು ಎಲ್ಲಾ ಪ್ರಾಥಮಿಕ, ಸಮುದಾಯ, ತಾಲ್ಲೂಕು ಆಸ್ಪತ್ರೆಗೆಳಲ್ಲಿ ಶೇಖರಿಸಿಡಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಆಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಿ. ಅವಶ್ಯವಿದ್ದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಿ ಎಂದರು.

ಜಮೀನು ಸರ್ವೇಗೆ ಕಾಲಮಿತಿ:

ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ರೈತರ ಜಮೀನು ಸರ್ವೆ ಕಾರ್ಯ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಿ. ಜಿಲ್ಲೆಯನ್ನು 6 ತಿಂಗಳಲ್ಲಿ ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳ ಜಾಗಕ್ಕೆ ಸೂಕ್ತ ಬಂದೋಬಸ್ತ್ ಮಾಡಬೇಕಿದ್ದು, ಒಂದು ತಿಂಗಳ ಒಳಗಾಗಿ ಸರ್ವೆ ಕಾರ್ಯ ನಡೆಸಿ, ಒತ್ತುವರಿ ಆಗಿದ್ದಲ್ಲಿ ತೆರವುಗೊಳಿಸಿ ಕಲ್ಲು ಹಾಕಿಸಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ಅಗತ್ಯ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಶರತ್ ಬಚ್ಚೇಗೌಡ, ಧೀರಜ್ ಮುನಿರಾಜು, ಎಂಎಲ್ಸಿ ಎಸ್.ರವಿ, ಜಿಲ್ಲಾಧಿಕಾರಿ ಡಾ. ಶಿವಶಂಕರ್‌, ಜಿಪಂ ಸಿಇಒ ಡಾ.ಅನುರಾಧ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಎಚ್.ನಟರಾಜ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಎಎಸ್ಪಿ ಪುರುಷೋತ್ತಮ್, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಜಿಲ್ಲಾ , ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್‌.............

ಅನ್ನಭಾಗ್ಯ: 2 ಲಕ್ಷ ಫಲಾನುಭವಿಗಳಿಗೆ 11.81 ಕೋಟಿ ರು.

ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 2,02,289 ಫಲಾನುಭವಿಗಳಿಗೆ 11,81,37,760 ರು. ಹಣ ಜಮೆಯಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 2,02,878 ಫಲಾನುಭವಿಗಳು ನೋಂದಣಿ ಆಗಿದ್ದು ಶೇಕಡ 90 ಪ್ರಗತಿ ಸಾಧಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ನೆಲಮಂಗಲ ವಿಭಾಗದಲ್ಲಿ 3,37,531 ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಯುವನಿಧಿ ಯೋಜನೆಯಡಿ 1,854 ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು. 2ಕೆಡಿಬಿಪಿ1- ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.