ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಕಲ್ಯಾಣಕ್ಕಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಕುಟುಂಬಗಳ ಯಜಮಾನಿಯರಿಗೆ ಪ್ರತಿ ತಿಂಗಳು ₹2 ಸಾವಿರ ನೀಡಲಾಗುತ್ತಿದೆ.
ಗದಗ: ಜನಪರ ಆಡಳಿತದೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಹೋರಾಟಗಾರರು ನಡೆಸಿದ ಹೋರಾಟ ಮತ್ತು ತ್ಯಾಗವನ್ನು ಸ್ಮರಿಸುವುದರೊಂದಿಗೆ, ರಾಜ್ಯ ಸರ್ಕಾರ ಜನಪರ ಯೋಜನೆಗಳ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಬಸವರಾಜ ರಾಯರಡ್ಡಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಮಾತನಾಡಿದರು.ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಕೊಡುಗೆ ಮತ್ತು ಹೋರಾಟಗಾರರ ಹೆಸರುಗಳನ್ನು ಸ್ಮರಿಸಿದ ಅವರು, 1916ರಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು ಗದಗ ನಗರಕ್ಕೆ ಭೇಟಿ ನೀಡಿದ್ದನ್ನು ಗಾಂಧೀಜಿ ಗದುಗಿಗೆ ಭೇಟಿ ನೀಡಿದ್ದು, 1942ರ ಕ್ವಿಟ್ ಇಂಡಿಯಾ ಚಳವಳಿ ಹೀಗೆ ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಕೊಡುಗೆಯನ್ನು ವಿವರಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಕಲ್ಯಾಣಕ್ಕಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಕುಟುಂಬಗಳ ಯಜಮಾನಿಯರಿಗೆ ಪ್ರತಿ ತಿಂಗಳು ₹2 ಸಾವಿರ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಒದಗಿಸಲಾಗಿದೆ. ಯುವನಿಧಿ ಯೋಜನೆಯಡಿ ಅರ್ಹ ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.ಕೇವಲ ಪಂಚ ಗ್ಯಾರಂಟಿಗಳು ಮಾತ್ರವಲ್ಲ, ರಾಜ್ಯದಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ, ವಿವಿಧ ಕೃಷಿ ನೆರವು ಹಾಗೂ ಬೆಳೆ ವಿಮೆ ಯೋಜನೆಗಳ ಮೂಲಕ ಸರ್ಕಾರ ರೈತರ ಪರವಾಗಿ ನಿಂತಿದೆ ರಾಜ್ಯದ ಒಂದು ಕೋಟಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಹಾಲು, ಬಿಸಿಯೂಟ, ಮೊಟ್ಟೆ ಅಥವಾ ಚಿಕ್ಕಿ, ಬಾಳೆಹಣ್ಣು ಸೇರಿದಂತೆ ಪೌಷ್ಟಿಕ ಆಹಾರ ಮತ್ತು ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ವಿದ್ಯಾರ್ಥಿವೇತನ, ಅಂಗವಿಕಲರ ವೇತನ, ಗರ್ಭಿಣಿಯರಿಗೆ ನೆರವು ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದರು. ಡಿಸಿ ನೇತೃತ್ವದಲ್ಲಿ ಸಮಗ್ರ ವರದಿ
ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಪ್ರವಾಸ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಗ್ರ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಸೂಕ್ತ ಸಮಯದಲ್ಲಿ ಬರ ಘೋಷಣೆ ಮಾಡುವ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.