ಸ್ವಂತ ನಿವೇಶನವಿಲ್ಲದೆ ವರ್ಷಗಳ ಕಾಲ ಬಾಡಿಗೆ ಮನೆಗಳಲ್ಲಿ ಅಥವಾ ಸರ್ಕಾರಿ ಜಾಗದಲ್ಲಿ ನೆಲೆಸಿ ಸಂಕಷ್ಟದ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಹಂತ ಹಂತವಾಗಿ ಹಕ್ಕುಪತ್ರ ವಿತರಿಸುವುದು ಪ್ರಮುಖ ಆದ್ಯತೆಯಾಗಿದ್ದು, ಕಾರ್ಕಳ ಕ್ಷೇತ್ರದ ಯಾವುದೇ ಅರ್ಹ ನಿವೇಶನರಹಿತ ಕುಟುಂಬ ಹಕ್ಕುಪತ್ರದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಆಶಯ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.

ಕಾರ್ಕಳ: ಸ್ವಂತ ನಿವೇಶನವಿಲ್ಲದೆ ವರ್ಷಗಳ ಕಾಲ ಬಾಡಿಗೆ ಮನೆಗಳಲ್ಲಿ ಅಥವಾ ಸರ್ಕಾರಿ ಜಾಗದಲ್ಲಿ ನೆಲೆಸಿ ಸಂಕಷ್ಟದ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಹಂತ ಹಂತವಾಗಿ ಹಕ್ಕುಪತ್ರ ವಿತರಿಸುವುದು ಪ್ರಮುಖ ಆದ್ಯತೆಯಾಗಿದ್ದು, ಕಾರ್ಕಳ ಕ್ಷೇತ್ರದ ಯಾವುದೇ ಅರ್ಹ ನಿವೇಶನರಹಿತ ಕುಟುಂಬ ಹಕ್ಕುಪತ್ರದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಆಶಯ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.ಕಾರ್ಕಳ ತಾ.ಪಂ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಭೂ ಕಂದಾಯ ಕಾಯಿದೆಯ 94ಸಿ ಹಾಗೂ 94ಸಿಸಿ ಕಲಂಗಳಡಿ ಒಟ್ಟು 34 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವ ಬಹುತೇಕ ಕುಟುಂಬಗಳು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದ್ದು, ಹಲವು ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಾ ಸಂಕಷ್ಟ ಅನುಭವಿಸುತ್ತಿವೆ. ಇಂತಹ ಬಡ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹಕ್ಕುಪತ್ರ ವಿತರಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.ತಾವು ಸಚಿವರಾಗಿದ್ದ ಅವಧಿಯಲ್ಲಿ ಡೀಮ್ಡ್ ಅರಣ್ಯ ಸಮಸ್ಯೆಯಿಂದ ಹಕ್ಕುಪತ್ರ ವಿತರಣೆಗೆ ಎದುರಾಗಿದ್ದ ಪ್ರಮುಖ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿತ್ತು. ಅದರ ಫಲವಾಗಿ ಕಾರ್ಕಳ ಕ್ಷೇತ್ರದಲ್ಲಿ ಸಾವಿರಕ್ಕೂ ಅಧಿಕ ನಿವೇಶನರಹಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಸಾಧ್ಯವಾಗಿದೆ ಎಂದು ವಿವರಿಸಿದರು.ಇಲ್ಲಿಯವರೆಗೆ ನಿಮ್ಮದಾಗಿರದ ಸರ್ಕಾರಿ ಜಾಗದಲ್ಲಿ ನೆಲೆಸಿದ್ದ ನೀವು, ಇನ್ನು ಮುಂದೆ ಆ ಜಾಗದ ಕಾನೂನುಬದ್ಧ ಮಾಲೀಕರಾಗಿದ್ದೀರಿ. ಈ ಹಕ್ಕುಪತ್ರದಿಂದ ನಿಮ್ಮ ಆಸ್ತಿ ಹಕ್ಕು ಖಚಿತವಾಗುವುದಲ್ಲದೆ, ವಿವಿಧ ಸರ್ಕಾರಿ ಯೋಜನೆಗಳು, ಬ್ಯಾಂಕ್ ಸೌಲಭ್ಯಗಳು ಹಾಗೂ ಇತರ ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನಗಳನ್ನು ಸುಲಭವಾಗಿ ಪಡೆಯಲು ಅವಕಾಶ ದೊರೆಯುತ್ತದೆ. ಇದು ನಿಮ್ಮ ಕುಟುಂಬದ ಭವಿಷ್ಯವನ್ನು ಭದ್ರಗೊಳಿಸುವ ಮಹತ್ವದ ದಾಖಲೆ” ಎಂದು ಹೇಳಿದರು.ತಹಸೀಲ್ದಾರ್ ಪ್ರದೀಪ್ ಆರ್., ಕಂದಾಯ ನಿರೀಕ್ಷಕ ರಿಯಾಜ್ ಅಹಮದ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಫಲಾನುಭವಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.