ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ

| Published : Oct 29 2025, 01:00 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರು ರಾಗಿಗೆ ಬೆಂಬಲ ಬೆಲೆ ನೀಡಿದ್ದಾರೆ. ಇದು ಕರ್ನಾಟಕಕ್ಕೆ ಹೆಚ್ಚು ಅನುಕೂಲವಾಗಿದೆ. ಒಂದು ಎಕರೆಗೆ 400 ರು.ಗಳ ವಿಮೆಯನ್ನು ರೈತರು ಕಟ್ಟುತ್ತಾರೆ. ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಡಾ.ಸುಧಾಕರ್‌ ಮಾತನಾಡಿದ್ದಾರೆ. ಅಧಿಕಾರಿಗಳು ನೀಡುವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಪರಿಹಾರ ಕೊಡಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲೆಯ ಗೌರಿಬಿದನೂರು ತಾಲೂಕಿನ 296 ಗ್ರಾಮಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ 102 ಕೋಟಿ ರು.ಗಳ ಅನುದಾನದಲ್ಲಿ ಜಲಜೀವನ್‌ ಮಿಷನ್‌ ಜಾರಿಯಾಗಿದೆ. ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವುದೇ ನಮ್ಮ ಆದ್ಯತೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಗೌರಿಬಿದನೂರು ತಾಲೂಕಿನ ನಕ್ಕಲಹಳ್ಳಿಯಲ್ಲಿ 87 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಜಲಜೀವನ್‌ ಮಿಷನ್‌ ಕಾಮಗಾರಿಯನ್ನುವೀಕ್ಷಿಣೆ ನಂತರ ನಕ್ಕಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಮಗಾರಿಗೆ ಶಂಕುಸ್ಥಾಪನೆ

ಗೌರಿಬಿದನೂರು ತಾಲೂಕಿನ ಪ್ರತಿ ಹಳ್ಳಿಗೂ ಜಲಜೀವನ್‌ ಮಿಷನ್‌ನಿಂದ ನೀರು ಸಿಗಲಿದೆ. ಮನೆಗಳಿಗೆ ಕೊಳಾಯಿ ನೀರು ಸಿಗುವುದರಿಂದ ಬಡಜನರ ಸಂಕಷ್ಟ ತಪ್ಪಲಿದೆ. ಅಮೃತ್‌ ಯೋಜನೆಗೆ 66 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿದೆ. ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಬಳಿಕ ಗೌರಿಬಿದನೂರು - ಹಿಂದೂಪುರ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ -47) ಬಳಿ ಕೇಂದ್ರ ಸರ್ಕಾರದ ಸೇತು ಬಂಧನ್ ಯೋಜನೆಯಡಿ ಕೈಗೆತ್ತಿಕೊಂಡಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಸಂಸದರು, “ರೈಲ್ವೆ ಮೇಲ್ಸೇತುವೆಗೆ 100 ಕೋಟಿ ರೂ. ಅಂದಾಜು ವೆಚ್ಚ ಎಂದು ಪ್ರಸ್ತಾವದಲ್ಲಿ ಹೇಳಲಾಗಿದೆ. ಈ ಕಾಮಗಾರಿ ನಡೆದರೆ ಗೌರಿಬಿದನೂರಿನ ಜನರಿಗೆ ಬಹಳ ಪ್ರಯೋಜನವಾಗಲಿದೆ. ಇದನ್ನು ಜಾರಿ ಮಾಡುವ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದರು.ರೈತರಿಗೆ ಬೆಳೆ ಹಾನಿ ಪರಿಹಾರ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿ ತಾಲೂಕಿನ ಜರಬಂಡಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗೊಲ್ಲಹಳ್ಳಿ ಗ್ರಾಮದ ಬಳಿ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೃಷಿ ಜಮೀನುಗಳಿಗೆ ಸಂಸದ ಡಾ.ಕೆ.ಸುಧಾಕರ್‌ ಭೇಟಿ ನೀಡಿ ರಾಗಿ ಬೆಳೆ ಹಾನಿ ಪರಿಶೀಲಿಸಿದರು. ನೆರೆಯಿಂದಾಗಿ ರೈತರು ಅಪಾರ ನಷ್ಟ ಅನುಭವಿಸಿದ್ದು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರವನ್ನು ಒತ್ತಾಯಿಸಿ ಈ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಅತಿಯಾದ ಮಳೆಯಿಂದಾಗಿ ರಾಗಿ ಬೆಳೆಗೆ ಹಾನಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಗಿಗೆ ಬೆಂಬಲ ಬೆಲೆ ನೀಡಿದ್ದಾರೆ. ಇದು ಕರ್ನಾಟಕಕ್ಕೆ ಹೆಚ್ಚು ಅನುಕೂಲವಾಗಿದೆ. ಒಂದು ಎಕರೆಗೆ 400 ರು.ಗಳ ವಿಮೆಯನ್ನು ರೈತರು ಕಟ್ಟುತ್ತಾರೆ. ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅಧಿಕಾರಿಗಳು ನೀಡುವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಆದಷ್ಟು ಬೇಗ ವಿಮೆ ಪರಿಹಾರ ಕೊಡಿಸುತ್ತೇನೆ” ಎಂದರು. ಕೇಂದ್ರೀಯ ವಿದ್ಯಾಲಯಕ್ಕೆ ₹25 ಕೋಟಿ

ಗೌರಿಬಿದನೂರಿನ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 25 ಕೋಟಿ ರು.ಗಳನ್ನು ಮಂಜೂರು ಮಾಡಿದೆ. ಸಂಸದ ಡಾ.ಕೆ.ಸುಧಾಕರ್‌ ಕಾಮಗಾರಿ ಪರಿಶೀಲನೆ ಮಾಡಿದರು. ಸುಮಾರು 4 ಎಕರೆ ಜಾಗದಲ್ಲಿ ಸುಸಜ್ಜಿತ ಶಾಲಾ ಕಟ್ಟಡ ಹಾಗೂ ಅದರ ಸಮೀಪ 2 ಎಕರೆ ಜಾಗದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿ ವಸತಿಗಾಗಿ ಕ್ವಾರ್ಟರ್ಸ್ ನಿರ್ಮಾಣವಾಗಲಿದೆ ಎಂದರು.